ಮನೆ ರಾಜ್ಯ ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ: ಸಂಪುಟದ ನಿರ್ಧಾರಕ್ಕೆ ಈಶ್ವರ ಖಂಡ್ರೆ ಹರ್ಷ

ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ: ಸಂಪುಟದ ನಿರ್ಧಾರಕ್ಕೆ ಈಶ್ವರ ಖಂಡ್ರೆ ಹರ್ಷ

0

ಬೆಂಗಳೂರು: ವಿಶ್ವಗುರು ಬಸವಣ್ಣನವರನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿರುವುದನ್ನು  ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ವಾಗತಿಸಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜಗಜ್ಯೋತಿ ಬಸವೇಶ್ವರರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಸಚಿವ ಸಂಪುಟ ಸರ್ವಾನುಮತದಿಂದ ಅಂಗೀಕಾರ ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಲ್ಲ ಸಂಪುಟ ಸಚಿವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಸಮ ಸಮಾಜದ ಕಲ್ಪನೆಯ ಜೊತೆಗೆ ಮಹಿಳೆಯರಿಗೆ ಸಮಾನ ಗೌರವ ಸ್ಥಾನ ಮಾಡಲು ನೀಡಲು ಹೋರಾಟ ನಡೆಸಿದ,  ಜಾತಿಯತೆಯ ನಿರ್ಮೂಲನೆಗೆ 12ನೇ ಶತಮಾನದಲ್ಲೇ ಕ್ರಾಂತಿ ಮಾಡಿದ ಮತ್ತು ತಮ್ಮ ವಚನಗಳ ಮೂಲಕ ಜಗತ್ತಿನ ಕಣ್ಣು ತೆರೆಸಿದ ಬಸವಣ್ಣನವರನ್ನು ಈ ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ರಾಜ್ಯದ ಎಲ್ಲರಿಗೂ ಹರ್ಷತಂದಿದೆ ಎಂದು ತಿಳಿಸಿದ್ದಾರೆ.

ಕಳೆದ ಡಿಸೆಂಬರ್ ನಲ್ಲಿ ದಾವಣಗೆರೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಧ್ಯಕ್ಷತೆಯಲ್ಲಿ ಹಾಗೂ ನೂರಾರು ಮಠಗಳ ಪೀಠಾಧ್ಯಕ್ಷರು, ಹರ-ಚರ ಗುರುಮೂರ್ತಿಗಳ ಸಮ್ಮುಖದಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಸಮ್ಮೇಳನದಲ್ಲಿ ಬಸವಣ್ಣನವರನ್ನು ಈ ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ನಿರ್ಣಯ ಮಾಡಲಾಗಿತ್ತು.

ನಂತರ ಜ.8ರಂದು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರಾದ ಭಾಲ್ಕಿ ಹಿರೇಮಠದ ಶ್ರೀ ಬಸವಲಿಂಗ ಪಟ್ಟದೇವರು, ಗದುಗಿನ ತೋಂಟದಾರ್ಯ ಸಿದ್ದರಾಮ ಸ್ವಾಮೀಜಿ, ಸಾಣೆಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯರು, ಫಕೀರ ದಿಂಗಾಲೇಶ್ವರ ಸ್ವಾಮೀಜಿ  ಸೇರಿದಂತೆ ವಿವಿಧ ಮಠಗಳ ಪೀಠಾಧಿಪತಿಗಳು ಹಾಗೂ ತಾವೂ ಸೇರಿದಂತೆ ಹಲವು ಸಚಿವರು, ಸಾಹಿತಿಗಳನ್ನೊಳಗೊಂಡ ನಿಯೋಗ ಸರ್ವ ಸಮುದಾಯದ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಈ ಸಂಬಂಧ ಮನವಿ ಮಾಡಿತ್ತು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ನಾಡಿನ ಎಲ್ಲ ಜನತೆಗೆ ಮತ್ತು ಬಸವತತ್ವ ಅನುಯಾಯಿಗಳಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.