ಮನೆ ರಾಜ್ಯ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ

ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ

0

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ  ಹೊಸ ಪಿಂಚಣಿ ಯೋಜನೆ(ಎನ್ ಪಿಎಸ್)ಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.

ಈ ಕುರಿತು ಎಕ್ಸ್ ನಲ್ಲಿ ಆದೇಶದ ಪ್ರತಿಯನ್ನು ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿ ನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ.

ಎಲ್ಲಾ 13,000 ಎನ್.ಪಿ.ಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ ಎಂದು ಸಿಎಂ ಪೋಸ್ಟ್ ಮಾಡಿದ್ದಾರೆ.

ಮೊದಲಿನಿಂದಲೂ ಇದ್ದ ಡಿಫೈನ್ಡ್‌ ಪಿಂಚಣಿ ಯೋಜನೆಯನ್ನು ಬದಲಾವಣೆ ಮಾಡಿ 2006 ರ ಬಳಿಕ ನೇಮಕವಾದ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಈ ಯೋಜನನ್ನು ವಿರೋಧಿಸಿ ಒಂದು ದಶಕಗಳಿಂದ ರಾಜ್ಯ ಸರ್ಕಾರಿ ನೌಕರರು ಹೋರಾಟ ನಡೆಸಿ ಮತ್ತೆ ಹಿಂದಿನ ಯೋಜನೆ ವ್ಯಾಪ್ತಿಗೆ ಸೇರಿಸುವಂತೆ ಪಟ್ಟು ಹಿಡಿದಿದ್ದರು. ಸದ್ಯ ಸರ್ಕಾರ ಒಂದು ಬಾರಿ ಬದಲಾವಣೆಗೆ ಅವಕಾಶ ಮಾಡಿಕೊಟ್ಟಿದೆ.

ಈ ಬಗ್ಗೆ ಹಲವು ಷರತ್ತುಗಳನ್ನು ವಿಧಿಸಿದ್ದು, ನೌಕರರು ಇಚ್ಛೆಪಟ್ಟಲ್ಲಿ ಮಾತ್ರ ಒಮ್ಮೆ ಬದಲಾವಣೆಗೆ ಅವಕಾಶ ನೀಡಿದೆ. ಈ ಕುರಿತು ಅರ್ಜಿ ನಮೂನೆಯನ್ನು ಜೂನ್‌ 30ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.