ಮನೆ ಕಾನೂನು ಪರಿಷತ್ ಚುನಾವಣೆಗೆ ಮದ್ಯ ಮಾರಾಟ ನಿರ್ಬಂಧ‌ದಲ್ಲಿ ಮಾರ್ಪಾಡು ಮಾಡಿದ ಹೈಕೋರ್ಟ್: ಫೆ.16, 20ರ ಬೆಳಗ್ಗೆ 6ರಿಂದ...

ಪರಿಷತ್ ಚುನಾವಣೆಗೆ ಮದ್ಯ ಮಾರಾಟ ನಿರ್ಬಂಧ‌ದಲ್ಲಿ ಮಾರ್ಪಾಡು ಮಾಡಿದ ಹೈಕೋರ್ಟ್: ಫೆ.16, 20ರ ಬೆಳಗ್ಗೆ 6ರಿಂದ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ನಿರ್ಬಂಧ

0

ಬೆಂಗಳೂರು: ರಾಜ್ಯದಲ್ಲಿ ಇದೇ ತಿಂಗಳ 16 ರಂದು ವಿಧಾನಪರಿಷತ್​​ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯ ಮತದಾನ ನಡೆಯಲಿದ್ದು, ಈ ಹಿನ್ನಲೆ  ಫೆ.16ರ ಬೆಳಗ್ಗೆ 6ರಿಂದ ಮಧ್ಯರಾತ್ರಿವರೆಗೆ ಹಾಗೂ ಫೆ.20ರ ಬೆಳಗ್ಗೆ 6ರಿಂದ ಮಧ್ಯರಾತ್ರಿವರೆಗೆ ಮಾತ್ರ ಮದ್ಯ ಮಾರಾಟ ನಿರ್ಬಂಧ ಹೇರಿ ನ್ಯಾ.ಎಸ್.ಆರ್.ಕೃಷ್ಣ ಕುಮಾರ್‌ ರಿದ್ದ ಹೈಕೋರ್ಟ್ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.

ಮತದಾನಕ್ಕೂ ಮುನ್ನ 48 ಗಂಟೆಗಳ ಅವಧಿಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ಈ ಕ್ರಮ ಮೇಲ್ನೋಟಕ್ಕೆ ಸಮರ್ಪಕವಾಗಿಲ್ಲ ಎಂದು ನಿನ್ನೆ ಹೈಕೋರ್ಟ್  ಮೌಖಿಕವಾಗಿ ಅಭಿಪ್ರಾಯಪಟ್ಟಿತ್ತು. ಸದ್ಯ ಇದೇ ವಿಚಾರ ಸಂಬಂಧ ಪರಿಷತ್ ಚುನಾವಣೆಗೆ ಮದ್ಯ ಮಾರಾಟ ನಿರ್ಬಂಧ‌ದಲ್ಲಿ ಮಾರ್ಪಾಡು ಮಾಡಲಾಗಿದೆ.

ರಾಜ್ಯದಲ್ಲಿ 2024ರ ವಿಭಾಸಭಾ ಚುನಾವಣೆ ಇದೇ 16 ರಂದು ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೂ ಒಂದು ದಿನ ಮುನ್ನ ಸೇರಿ ಒಟ್ಟು 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಮದ್ಯ ಮಾರಾಟಕ್ಕೆ ನಿಷೇಧಿಸಿರುವುದಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸದ್ಯ ಈಗ ನ್ಯಾ.ಎಸ್.ಆರ್.ಕೃಷ್ಣ ಕುಮಾರ್‌ರಿದ್ದ ಹೈಕೋರ್ಟ್ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.

ಮತದಾನ, ಎಣಿಕೆ‌‌ ದಿನದಂದು ಮಾತ್ರ ಮದ್ಯ ಮಾರಾಟ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ. ಮತದಾನ ಹಿನ್ನೆಲೆ ಫೆ.16ರ ಬೆಳಗ್ಗೆ 6ರಿಂದ ಮಧ್ಯರಾತ್ರಿವರೆಗೆ ಮದ್ಯ ಮಾರಾಟ‌ ನಿರ್ಬಂಧ ಹೇರಲಾಗಿದೆ. ಹಾಗೂ ಎಣಿಕೆ ದಿನವಾದ ಫೆ.20ರ ಬೆಳಗ್ಗೆ 6ರಿಂದ ಮಧ್ಯರಾತ್ರಿವರೆಗೆ ಮಾತ್ರ ಮದ್ಯ ಮಾರಾಟ ನಿರ್ಬಂಧ ಹೇರಲಾಗಿದೆ. ಆಹಾರ ಪೂರೈಸಲು ರೆಸ್ಟೋರೆಂಟ್‌ಗಳಿಗೆ ಯಾವುದೇ ನಿರ್ಬಂಧವಿಲ್ಲ. ಮತದಾರರು ಶಿಕ್ಷಕರಾಗಿರುವುದರಿಂದ ಮದ್ಯಪಾನದ ನಿರ್ಬಂಧ ಪರಿಶೀಲನೆ ಮಾಡಲಾಗಿದೆ. ಮದ್ಯಪಾನ ನಿರ್ಬಂಧಿಸದಿದ್ದರೆ ಶಿಕ್ಷಕರು ಮದ್ಯ ಸೇವಿಸುತ್ತಾರೆಂದು ಭಾವಿಸಬೇಕಿಲ್ಲ. ಮುಕ್ತ, ನ್ಯಾಯಸಮ್ಮತ ಮತದಾನಕ್ಕೆ ಇಷ್ಟು ದಿನದ ನಿರ್ಬಂಧ ಅಗತ್ಯವಿಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.

ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ ಇದೇ 1ರಂದು ಹೊರಡಿಸಿರುವ ಆದೇಶ ಪ್ರಶ್ನಿಸಿ ಬೃಹತ್ ಬೆಂಗಳೂರು ಹೋಟೆಲ್‌ ಗಳ ಸಂಘಟನೆಯ ಕಾರ್ಯದರ್ಶಿ ವೀರೇಂದ್ರ ಎನ್.ಕಾಮತ್ ಸೇರಿದಂತೆ ಒಟ್ಟು ನಾಲ್ವರು ಅರ್ಜಿ ಸಲ್ಲಿಸಿದ್ದರು. ಅದನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಪೀಠ ಈ ಅಭಿಪ್ರಾಯ ತಿಳಿಸಿದೆ.