ಮನೆ ರಾಜ್ಯ ರಾಜ್ಯಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭ

ರಾಜ್ಯಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭ

0

ಬೆಂಗಳೂರು: ಕರ್ನಾಟಕದ ರಾಜ್ಯಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬಿಜೆಪಿಯ ಶಾಸಕ ಸುರೇಶ್​ ಕುಮಾರ್​​ ಮೊದಲ ಮತದಾನ ಮಾಡಿದರು.

ವಿಧಾನಸೌಧದಲ್ಲಿ ಇಂದು ಬೆಳಗ್ಗೆ 9 ರಿಂದ ಆರಂಭವಾಗಿರುವ ಮತದಾನ ಸಂಜೆ 4 ಗಂಟೆ ವರೆಗೆ ನಡೆಯಲಿದೆ. ರಾಜ್ಯಸಭೆ ಚುನಾವಣೆಗಾಗಿನ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ನಾಲ್ಕು ಸ್ಥಾನಗಳಿಗೆ ಐವರು ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಹೀಗಾಗಿ ರಾಜ್ಯಸಭೆ ರಣಕಣ ರಂಗೇರಿದೆ.

ಕಾಂಗ್ರೆಸ್ ರಾಜ್ಯದಿಂದ ಅಜಯ್ ಮಕೇನ್, ಸಯ್ಯದ್ ನಸೀರ್ ಹುಸೇನ್ ಮತ್ತು ಜಿ.ಸಿ.ಚಂದ್ರಶೇಖರ್ ರನ್ನು ಕಣಕ್ಕಿಳಿಸಿದೆ. ಇತ್ತ ಬಿಜೆಪಿ ನಾರಾಯಣಸಾ ಬಾಂಡಗೆಯನ್ನು ಕಣಕ್ಕಿಳಿಸಿದೆ. ಇನ್ನು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸಿದೆ. ಐದನೇ ಅಭ್ಯರ್ಥಿ ಕಣಕ್ಕಿಳಿಸಿರುವುದರಿಂದ ರಾಜ್ಯಸಭೆ ಚುನಾವಣಾ ಅಖಾಡ ಕಳೆಗಟ್ಟುವಂತೆ ಮಾಡಿದೆ.

ಅಭ್ಯರ್ಥಿಯ ಗೆಲುವಿಗೆ 45 ಮೊದಲ ಪ್ರಾಶಸ್ತ್ಯದ ಮತಗಳ ಅಗತ್ಯವಿದೆ. ಕಾಂಗ್ರೆಸ್ ಶಾಸಕರ ಬಲ ಸದ್ಯಕ್ಕೆ 134 ಇದೆ. ಬಿಜೆಪಿ 66 ಶಾಸಕರ ಬಲ ಹೊಂದಿದೆ. ಇತ್ತ ಜೆಡಿಎಸ್ 19 ಶಾಸಕರ ಬಲ ಹೊಂದಿದೆ. ಸರ್ವೋದಯ ಕರ್ನಾಟಕ‌ ಪಕ್ಷದ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ, ಪಕ್ಷೇತರ ಅಭ್ಯರ್ಥಿಗಳಾದ ಲತಾ ಮಲ್ಲಿಕಾರ್ಜುನ, ಗೌರಿಬಿದನೂರು ಶಾಸಕ ಪುಟ್ಟ ಸ್ವಾಮಿಗೌಡ ಮತಗಳು ಈಗ ನಿರ್ಣಾಯಕವಾಗಿವೆ.

ಮತದಾನಕ್ಕೂ ಮೊದಲು ರಾಜ್ಯ ಸಭೆ ಚುನಾವಣೆಯ ವೀಕ್ಷಕರಾದ ಮನೋಜ್ ಕುಮಾರ್ ಮೀನಾ ಹಾಗೂ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರು ವಿಧಾನಸೌಧದ ಮೊದಲ ಮಹಡಿಯಲ್ಲಿನ ಮತಗಟ್ಟೆಗೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು.

ಕಾಂಗ್ರೆಸ್ ಶಾಸಕರು ಖಾಸಗಿ ಹೊಟೇಲ್​​ನಿಂದ ಬಸ್ ಮೂಲಕ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡಲಿದ್ದಾರೆ. ಇತ್ತ ಬಿಜೆಪಿ ಶಾಸಕರು ಹಾಗೂ ಜೆಡಿಎಸ್ ಶಾಸಕರು ಮತದಾನಕ್ಕೂ ಮೊದಲು ಸಭೆ ನಡೆಸಿದರು.