ಮನೆ ಅಪರಾಧ ಡಾ.ಪಿ.ರವೀಂದ್ರನಾಥ್ ರಾಜೀನಾಮೆಗೆ ಎಂ.ಪಿ.ರೇಣುಕಾಚಾರ್ಯ ಪ್ರಕರಣ ಕಾರಣ: ಡಿಕೆಶಿ ಆರೋಪ

ಡಾ.ಪಿ.ರವೀಂದ್ರನಾಥ್ ರಾಜೀನಾಮೆಗೆ ಎಂ.ಪಿ.ರೇಣುಕಾಚಾರ್ಯ ಪ್ರಕರಣ ಕಾರಣ: ಡಿಕೆಶಿ ಆರೋಪ

0

ಬೆಂಗಳೂರು(Bengaluru): ರಾಜ್ಯ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಡಾ.ಪಿ. ರವೀಂದ್ರನಾಥ್ ಅವರು ರಾಜೀನಾಮೆ ನೀಡಿರುವುದಕ್ಕೆ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಮಗಳ ನಕಲಿ ಜಾತಿ ಪ್ರಮಾಣ ಪತ್ರ ಪ್ರಕರಣ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಕುಮಾರ್‌, ‘ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರ ಮಗಳು ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರವೀಂದ್ರನಾಥ್‌ ನೋಟಿಸ್‌ ಜಾರಿಗೊಳಿಸಿದ್ದರು. ಈ ಕಾರಣಕ್ಕಾಗಿ ಅವರ ವರ್ಗಾವಣೆ ಮಾಡಲಾಗಿತ್ತು ಎಂಬ ಮಾಹಿತಿ ಇದೆ ಎಂದು ಆರೋಪಿಸಿದ್ದಾರೆ.

ಯಾರೇ ನಕಲಿ ಜಾತಿ ಪ್ರಮಾಣಪತ್ರ ಪಡೆದಿದ್ದರೂ ನಿಷ್ಪಕ್ಷಪಾತ ತನಿಖೆ ನಡೆಯಲಿ ಎಂದಿರುವ ಅವರು,  ಡಿಸಿಆರ್‌ಇ ಡಿಜಿಪಿ ವರ್ಗಾವಣೆಯನ್ನು ರದ್ದುಗೊಳಿಸಬೇಕು. ಅವರ ರಾಜೀನಾಮೆ ‍ಪತ್ರವನ್ನೂ ಅಂಗೀಕರಿಸಬಾರದು ಎಂದು ಒತ್ತಾಯಿಸಿದ್ದಾರೆ.

ರವೀಂದ್ರನಾಥ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಮಂಗಳವಾರ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಡಿಜಿಪಿ ಆಗಿದ್ದ ರವೀಂದ್ರನಾಥ್ ಅವರನ್ನು ಪೊಲೀಸ್ ತರಬೇತಿ ವಿಭಾಗಕ್ಕೆ ಇತ್ತೀಚೆಗಷ್ಟೇ ವರ್ಗಾಯಿಸಲಾಗಿತ್ತು. ಸೋಮವಾರವಷ್ಟೇ ಅವರು ಅಧಿಕಾರ ವಹಿಸಿಕೊಂಡಿದ್ದರು.