ಮನೆ ರಾಜಕೀಯ ಸಿಎಎ ಜಾರಿ ವಿಚಾರವಾಗಿ ಇನ್ನೂ ಚರ್ಚೆ ಮಾಡಿಲ್ಲ: ಗೃಹ ಸಚಿವ ಜಿ ಪರಮೇಶ್ವರ

ಸಿಎಎ ಜಾರಿ ವಿಚಾರವಾಗಿ ಇನ್ನೂ ಚರ್ಚೆ ಮಾಡಿಲ್ಲ: ಗೃಹ ಸಚಿವ ಜಿ ಪರಮೇಶ್ವರ

0

ಬೆಂಗಳೂರು: ಸಿಎಎ ಜಾರಿ ವಿಚಾರವಾಗಿ ಇನ್ನೂ ಏನೂ ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.

ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯ ಅಧಿಸೂಚನೆ ಹೊರಡಿಸಿದ್ದು, ಇದು ದೇಶದಾದ್ಯಂತ ಜಾರಿಯಾಗಬೇಕಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ್ದಾರೆ.

ರಾಜ್ಯದಲ್ಲಿ ಸಿಎಎ ಜಾರಿ ವಿಚಾರವಾಗಿ ಇನ್ನೂ ಚರ್ಚೆ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ನಡೆಸಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತಾರೆ. ಸಿಎಎ ಜಾರಿ ಮಾಡಬೇಕೇ ಅಥವಾ ತಿರಸ್ಕರಿಸಬೇಕೆ ಎಂಬುದನ್ನು ಅವೆಲ್ಲವನ್ನೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

ಬ್ಯಾಡಗಿಯಲ್ಲಿ ಮೆಣಸಿನ ದರ ದಿಢೀರ್ ಕುಸಿತದ ವಿರುದ್ಧ ರೈತರ ಪ್ರತಿಭಟನೆ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ 42 ಜನರನ್ನು ಬಂಧಿಸಿ ಅವರ ಹೇಳಿಕೆಗಳನ್ನು ಪಡೆಯಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಘಟನೆ ವೇಳೆ ಹೊರಗಿನಿಂದ ಬಂದವರೂ ಇದ್ದರು. ಅವರೆಲ್ಲ ಓಡಿಹೋದ್ದಾರೆ. ಸಿಸಿಟಿವಿ ಪರಿಶೀಲನೆ ಮಾಡಿ, ಒಂದು ತಂಡವನ್ನು ಆಂಧ್ರ ಪ್ರದೇಶದ ನೆಲ್ಲೂರು ಕಡೆ ಕಳುಹಿಸಲಾಗಿದೆ. ತಪ್ಪಿಸಿಕೊಂಡವರನ್ನು ಹುಡುಕಿ ಕರೆ ತರಲು ತಂಡ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಯಾವ ಕಾರಣಕ್ಕೆ ಗಲಾಟೆ ಸಂಭವಿಸಿತು ಎಂಬುದನ್ನು ತನಿಖೆ ಮಾಡಲಾಗುತ್ತಿದೆ. ತಪ್ಪು ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಬೆಲೆ ಕಡಿಮೆ‌ ಆಗಿದ್ದಕ್ಕೆ ಪ್ರತಿಭಟನೆ ಮಾಡಿದ್ದಾರೆ. ಬೆಲೆ ಕಡಿಮೆ ಮಾಡಿಸಿ ಗಲಾಟೆ ಮಾಡಿಸಿದ್ದರೇ ಎಂಬುದು ಗೊತ್ತಿಲ್ಲ. ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, ಅವರು ನಮ್ಮ ಪಕ್ಷದ ಅಧ್ಯಕ್ಷರು. ಅವರ ಚುನಾವಣೆ ಸ್ಪರ್ಧೆ ಬಗ್ಗೆ ಮಾತನಾಡಲು ಆಗುವುದಿಲ್ಲ. ಅವರ ತೀರ್ಮಾನದಂತೆ ನಡೆದುಕೊಳ್ಳಲಿದ್ದಾರೆ. ಅವರ ಜೊತೆ ನಾವು ಇರುತ್ತೇವೆ. ಒಂದು ವೇಳೆ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಿದರೆ ನಮಗೆ ಶಕ್ತಿ ಬರುತ್ತದೆ. ಎಐಸಿಸಿ ಅಧ್ಯಕ್ಷರಾಗಿರುವುದರಿಂದ ಅವರೇ ತೀರ್ಮಾನ ಮಾಡಬೇಕಿದೆ ಎಂದು ಹೇಳಿದ್ದಾರೆ.