ಮನೆ ಸುದ್ದಿ ಜಾಲ ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ: ವೇಳಾಪಟ್ಟಿ ಪ್ರಕಟ

ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ: ವೇಳಾಪಟ್ಟಿ ಪ್ರಕಟ

0

ಮೈಸೂರು: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಪದವೀಧರರ ಕ್ಷೇತ್ರದಿಂದ ಆಯ್ಕೆ ಮಾಡುವ ಬಗ್ಗೆ ಭಾರತ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಹೊರಡಿಸಿದೆ.
 ಮೇ 19 ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಮೇ 26 ಕೊನೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನೆಯನ್ನು ಮೇ 27 ರಂದು ನಡೆಸಲಾಗುತ್ತದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಮೇ 30 ಕಡೆಯ ದಿನವಾಗಿದೆ. ಮತದಾನ (ಅವಶ್ಯವಿದ್ದಲ್ಲಿ) ದಿನಾಂಕವು ಜೂನ್ 13 ಆಗಿರುತ್ತದೆ. ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನದ ವೇಳೆ ನಿಗದಿಯಾಗಿದೆ. ಜೂನ್ 15 ರಂದು ಮತಗಳ ಎಣಿಕೆ ಕಾರ್ಯವು ನಡೆಯಲಿದೆ. ಚುನಾವಣಾ ಪ್ರಕ್ರಿಯೆ ಜೂನ್ 17ರಂದು ಮುಕ್ತಾಯವಾಗಲಿದೆ.
 ಮೈಸೂರು ವಿಭಾಗಕ್ಕೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾ ಅಧಿಕಾರಿಯಾಗಿದ್ದು, ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರ ವ್ಯಾಪ್ತಿಗೆ ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲೆಗಳು ಒಳಪಡಲಿವೆ.
 ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿಗಳ ವಯಸ್ಸು 30 ಕ್ಕೂ ಕಡಿಮೆ ಇರಬಾರದು. ಅವರು ಕರ್ನಾಟಕದ ಯಾವುದಾದರೂ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿರಬೇಕು. ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹರಾಗಿರಬಾರದು. ನಾಮಪತ್ರದೊಂದಿಗೆ ಮತದಾರರಾಗಿರುವ ಬಗ್ಗೆ ಸಂಬಂಧಿಸಿದ ಮತದಾರ ನೊಂದಣಾಧಿಕಾರಿ/ಸಹಾಯಕ ನೊಂದಣಾಧಿಕಾರಿಗಳಿಂದ ಮತದಾರರ ಪಟ್ಟಿಯ ದೃಢೀಕೃತ ನಕಲನ್ನು ಲಗತ್ತಿಸಬೇಕು. ಸದರಿ ದ್ವೈವಾರ್ಷಿಕ ಚುನಾವಣೆಗೆ ಸಂಬಂಧಪಟ್ಟ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ನೊಂದಾಯಿತರಾಗಿರುವವರು ಮಾತ್ರ ಮತದಾರರಾಗಿರುತ್ತಾರೆ.
 ಚುನಾವಣೆಗೆ ಸ್ಪರ್ಧಿಸಲು ಇಚ್ಚಿಸುವ ಅಭ್ಯರ್ಥಿಗಳು ಮೇ 19 ರಿಂದ 26 ರವರೆಗೆ (ಎರಡು ದಿನಗಳು ಸೇರಿದಂತೆ) ಮೈಸೂರಿನ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು. ಮೇ 22ರಂದು ಭಾನುವಾರ ನೆಗೋಷಿಯಬಲ್ ಇನ್ಸ್ಟುಮೆಂಟ್ ಆಕ್ಟ್ ಮೇರೆಗೆ ಸಾರ್ವತ್ರಿಕ ರಜಾದಿನವಾಗಿರುವುದರಿಂದ ಅಂದು ನಾಮಪತ್ರ ಸ್ವೀಕರಿಸಲಾಗುವುದಿಲ್ಲ. ನಾಮಪತ್ರ ಸಲ್ಲಿಸಲು ಬೇಕಾದ ನಮೂನೆಗಳನ್ನು ಮೈಸೂರಿನ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಪಡೆಯಬಹುದು.
 ಚುನಾವಣೆಗೆ ಸ್ಪರ್ಧಿಸಲಿಚ್ಚಿಸುವವರು ಗಮನಿಸಬೇಕಾದ ಒಂದು ಮುಖ್ಯ ಅಂಶವೆAದರೆ 1951ರ ಪ್ರಜಾ ಪ್ರಾತಿನಿಧ್ಯ ಅಧಿನಿಯಮದ 33ನೇ ನಿಯಮದ ಪ್ರಕಾರ ಪ್ರತಿ ಅಭ್ಯರ್ಥಿ ನಾಮನಿರ್ದೇಶನ ಪತ್ರದಲ್ಲಿ ಕನಿಷ್ಠ ಹತ್ತು ಮತದಾರರು ಸೂಚಕರಾಗಿ ಸಹಿ ಮಾಡಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರು 5 ಸಾವಿರ ರೂ., ಇತರೆ ಅಭ್ಯರ್ಥಿ 10 ಸಾವಿರ ರೂ. ಠೇವಣಿ ಮಾಡಬೇಕು. ಅಭ್ಯರ್ಥಿಯು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಲ್ಲಿ ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ದೃಢೀಕರಣ ಪತ್ರ ಲಗತ್ತಿಸಬೇಕು.
 ಈ ಚುನಾವಣೆಯಲ್ಲಿ ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳಾಗಿರುತ್ತಾರೆ.
 ಅಭ್ಯರ್ಥಿಗಳು ನಿಗದಿತ ನಮೂನೆ (ಫಾರಂ 26 ಮತ್ತು ಅನುಬಂಧ-1ರಲ್ಲಿ) ಗಳಲ್ಲಿ ಪ್ರಮಾಣಪತ್ರವನ್ನು ನೋಟರಿಯವರಿಂದ ಪ್ರಮಾಣೀಕರಿಸಿದ ಪ್ರಮಾಣಪತ್ರವನ್ನು ನಾಮಪತ್ರದೊಂದಿಗೆ ಲಗತ್ತಿಸಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಚುನಾವಣಾಧಿಕಾರಿ/ಸಹಾಯಕ ಚುನಾವಣಾಧಿಕಾರಿಗಳನ್ನು ಸಂಪರ್ಕಿಸುವAತೆ ಮೈಸೂರಿನ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣಾಧಿಕಾರಿಯವರಾದ ಡಾ. ಜಿ.ಸಿ. ಪ್ರಕಾಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.