ಮನೆ ರಾಜ್ಯ ಆ್ಯಸಿಡ್ ದಾಳಿಗೊಳಗಾದವರಿಗೆ  ನಿವೇಶನ ನೀಡಲು ಆದೇಶ ಹೊರಡಿಸಲಾಗುವುದು: ಸಿಎಂ ಬೊಮ್ಮಾಯಿ

ಆ್ಯಸಿಡ್ ದಾಳಿಗೊಳಗಾದವರಿಗೆ  ನಿವೇಶನ ನೀಡಲು ಆದೇಶ ಹೊರಡಿಸಲಾಗುವುದು: ಸಿಎಂ ಬೊಮ್ಮಾಯಿ

0

ಬೆಂಗಳೂರು (Bengaluru)-ಆ್ಯಸಿಡ್ ದಾಳಿಗೊಳಗಾದ ಎಲ್ಲ ಹೆಣ್ಣು ಮಕ್ಕಳಿಗೆ ನಿವೇಶನ ಹಾಗೂ  ಮನೆ ನೀಡಲು ಆದೇಶವನ್ನು ಹೊರಡಿಸಲಾಗುವುದು ಹಾಗೂ ಅವರಿಗೆ  ಸ್ವಯಂ ಉದ್ಯೋಗ ಯೋಜನೆಯಡಿ 5 ಲಕ್ಷ ರೂ.ಗಳವರೆಗೆ ನೆರವು  ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಕಂದಾಯ ಇಲಾಖೆಯ ಸಾಮಾಜಿಕ ಭದತ್ರೆ ಮತ್ತು  ಪಿಂಚಣೆಗಳ  ನಿರ್ದೇಶನಾಲಯದ ವತಿಯಿಂದ  ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಲಾಗಿದ್ದ  ‘ಹಲೋ ಕಂದಾಯ ಸಚಿವರೇ – 72 ಗಂಟೆಯಲ್ಲಿ ಮನೆ ಬಾಗಿಲಿಗೆ  ಪಿಂಚಣಿ ಸಹಾಯವಾಣಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡುತ್ತಿದ್ದರು.

ಆ್ಯಸಿಡ್ ದಾಳಿಗೆ ಒಳಗಾದವರು ಬಹಳಷ್ಟು ನೋವನ್ನು ಉಂಡಿರುತ್ತಾರೆ . ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗಿರುತ್ತಾರೆ. ಅವರ ನೆರವಿಗೆ ನಿಲ್ಲುವುದು ಸರ್ಕಾರದ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಅವರ ಮಾಸಾಶನವನ್ನು 3000ದಿಂದ 10 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅದರ ಜೊತೆಗೆ ಈಗ ಅವರಿಗೆ ಬದುಕು ಸಾಗಿಸಲು ಮನೆ ಹಾಗೂ ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಆಳುವುದು ಅಂದರೆ ಜನರ  ಸಮಸ್ಯೆಗಳನ್ನು ಅರಿತು ಹೃದಯದಿಂದ ಅದಕ್ಕೆ ಪರಿಹಾರ ಕೊಡುವುದು.  ಅನುಷ್ಠಾನ ಮಾಡುವುದು ಆಡಳಿತ.  ಈ ಚಿಂತನೆಯಿಂದ ಕಂದಾಯ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಕಾರ್ಯರೂಪಕ್ಕೆ ಬಂದಿದೆ.  ಇದರಿಂದ ಜನರ ಅಲೆದಾಟ ತಪ್ಪುತ್ತದೆ. 50 ಲಕ್ಷಕ್ಕಿಂತ ಹೆಚ್ಚು ಕುಟುಂಬಗಳಿಗೆ ಇದರಿಂದ ಉಪಯೋಗವಾಗಲಿದೆ.  ವ್ಯವಸ್ಥೆ ಸರಿ ಇಲ್ಲದ್ದರಿಂದ ಇದನ್ನು ಮಾಡಬೇಕಾಗಿದೆ. ಸಾಮಾಜಿಕ ಭದ್ರತಾ ಯೋಜನೆಗಳಡಿಯ ಪಿಂಚಣಿಗಳು ನೇರವಾಗಿ ಮನೆ ಬಾಗಿಲಿಗೆ ಮುಟ್ಟಬೇಕು. ಸಮಾಜದಲ್ಲಿ ಆಶ್ರಯವಿಲ್ಲದವರಿಗೆ, ಸಹಾಯವಿಲ್ಲದವರಿಗೆ ಪಿಂಚಣಿ ನೀಡಲಾಗುತ್ತದೆ. ವ್ಯವಸ್ಥೆ ಸರಿಪಡಿಸಲು  ಕಂದಾಯ ಇಲಾಖೆಯನ್ನು ಚುರುಕುಗೊಳಿಸಲಾಗಿದೆ. ವ್ಯವಸ್ಥೆಯನ್ನು ಸರಿಪಡಿಸಿ ಈ ಕೆಲಸವನ್ನು ಮಾಡಲಾಗುತ್ತಿದೆ. ಇದು ಜನಪರವಾದ ಆಡಳಿತ. ಮನೆ ಬಾಗಿಲಿಗೆ ಸರ್ಕಾರ ಬರುವುದು ಅಧಿಕಾರದ ವಿಕೇಂದ್ರೀಕರಣ. ವಿಧಾನಸಭೆಯಲ್ಲಿ ಅಧಿಕಾರ ಹೆಪ್ಪುಗಟ್ಟಬಾರದು. ಅಧಿಕಾರ ನೇರವಾಗಿ ಜೇನುತುಪ್ಪದಂತೆ ಹರಿಯುವಂತಿರಬೇಕು. ಇಂದಿನ ಕಾರ್ಯಕ್ರಮ ನೇರವಾಗಿ ಜನರಿಗೆ ತಲುಪುವಂಥದ್ದು ಎಂದರು.

ಬಜೆಟ್‍ನಲ್ಲಿ ಸೂಕ್ಷ್ಮಾತಿ ಸೂಕ್ಮ ವಿಚಾರಗಳನ್ನು ಹೇಳಲಾಗಿದೆ. ಡಯಾಲಿಸಿಸ್ ಗೆ ಒಳಗಾಗುವವರಿಗೆ 30 ಸಾವಿರ ಇದ್ದ ಡಯಾಲಿಸ್ ನ್ನು 60 ಸೈಕಲ್‍ಗಳಿಗೆ  ಸಾವಿರಕ್ಕೆ ಹೆಚ್ಚಿಸಿ ಉಚಿತ ಡಯಾಲಿಸಿಸ್‍ಗೆ ವ್ಯವಸ್ಥೆ ಮಾಡಲಾಗಿದೆ. ಕ್ಯಾನ್ಸರ್ ಚಿಕಿತ್ಸೆಗೆ  11 ಹೊಸ ಕೇಂದ್ರಗಳನ್ನು ಸ್ಥಾಪಿಸಿ ಬಡಜನಕ್ಕೆ ಕೀಮೋಥೆರಪಿಯನ್ನು ಈಗ ನೀಡುವುದಕ್ಕಿಂತ ಎರಡು ಪಟ್ಟು ಹೆಚ್ಚಿಸಲಾಗಿದೆ. ಆರೋಗ್ಯ ತಪಾಸಣೆ, 60 ವರ್ಷ ಮೇಲ್ಪಟ್ಟವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಕಿವುಡರಿಗೆ ಕಾಕ್ಲಿಯರ್ ಇಂಪ್ಲಾಂಟ್ ಗೆ ವ್ಯವಸ್ಥೆ ಮಾಡಲಾಗಿದೆ.  ಮಾನವೀಯತೆ ಇರುವ, ಹೃದಯವಂತ ಆಡಳಿತ ವ್ಯವಸ್ಥೆ ಇರಬೇಕು. ಆಗ ಸಂಕಷ್ಟದಲ್ಲಿರುವವರಿಗೆ  ಆತ್ಮವಿಶ್ವಾಸ ಬರುತ್ತದೆ.  ಕತ್ತಲಲ್ಲಿರುವವರನ್ನು ಬೆಳಕಿನೆಡೆಗೆ ಕರೆದುತರುವ ಕೆಲಸ ಮಾಡಬೇಕು ಎಂದರು.