ಮನೆ ರಾಜಕೀಯ ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ: ಸಿಎಂಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ: ಸಿಎಂಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

0

ಬೆಂಗಳೂರು: ನೊಂದ ಮಹಿಳೆಯರ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹಂಚುವುದು ಮುಖ್ಯವಲ್ಲ. ಅದು ಅಪರಾಧವೂ ಅಲ್ಲ! ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡಿದ್ದು ದೊಡ್ಡ ಅಪರಾಧ ಎನ್ನುವುದು ಯಾವ ಸೆಕ್ಷನ್‌ನಲ್ಲಿದೆ? ಅದನ್ನು ಯಾವ ಸೆಕ್ಷನ್‌ನಲ್ಲಿ ಉಲ್ಲೇಖಿಸಿದ್ದಾರೆ? ಕುಮಾರಸ್ವಾಮಿ ಪ್ರಕಾರ ಯಾವುದಾದರೂ ಹೊಸ ಸೆಕ್ಷನ್ ಇದ್ದರೆ ಹೇಳಲಿ ಎಂದು ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸೆಕ್ಷನ್ ಗಳ ಸಮೇತ ತಿರುಗೇಟು ಕೊಟ್ಟಿದ್ದಾರೆ.

Join Our Whatsapp Group

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು; ಸೆಕ್ಷನ್ ಗಳ ಮಾಹಿತಿಯುಳ್ಳ ಎಸ್ ಐಟಿ ಪತ್ರಿಕಾ ಹೇಳಿಕೆಯನ್ನು ಟ್ಯಾಗ್ ಮಾಡಿ ಸಿಎಂ ಕಾಲೆಳೆದಿದ್ದಾರೆ.

ಸಿಎಂ ಕುರ್ಚಿಯಲ್ಲಿ ಊಸರವಳ್ಳಿ!!

ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ!! ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ನಾನು. ಅತೀವ ವಿಷಾದ ಮತ್ತು ನೋವಿನಿಂದಲೇ ಈ ಮಾತು ಹೇಳುತ್ತಿದ್ದೇನೆ ಸಿದ್ದರಾಮಯ್ಯನವರೇ ಎಂದು ಕುಮಾರಸ್ವಾಮಿ ಕೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದೀರಿ. “ನೊಂದ ಮಹಿಳೆಯರ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹಂಚುವುದು, ಹರಡುವುದು ಮುಖ್ಯವಲ್ಲ. ಅದು ಅಪರಾಧವೂ ಅಲ್ಲ! ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡಿದ್ದು ದೊಡ್ಡ ಅಪರಾಧ ಎನ್ನುವುದು ಯಾವ ಸೆಕ್ಷನ್‌ನಲ್ಲಿದೆ? ಅದನ್ನು ಯಾವ ಸೆಕ್ಷನ್‌ನಲ್ಲಿ ಉಲ್ಲೇಖಿಸಿದ್ದಾರೆ? ಕುಮಾರಸ್ವಾಮಿ ಪ್ರಕಾರ ಯಾವುದಾದರೂ ಹೊಸ ಸೆಕ್ಷನ್ ಇದ್ದರೆ ಹೇಳಲಿ” ಎಂದು ನನಗೆ ಪ್ರಶ್ನೆ ಮಾಡಿದ್ದೀರಿ ಎಂದು ಸಿಎಂಗೆ ಟಾಂಗ್ ಕೊಟ್ಟಿದ್ದಾರೆ.

ದಯಮಾಡಿ ವಕೀಲಿಕೆ ಮಾಡಬೇಡಿ

ನಿಜ, ನೀವು ಸ್ವಯಂಘೋಷಿತ ಸಂವಿಧಾನ ತಜ್ಞರು! ಪ್ರ(ಕು)ಖ್ಯಾತ ಮಾಜಿ ವಕೀಲರು!! ಹಾಲಿ ಮುಖ್ಯಮಂತ್ರಿಗಳು. ಆದರೂ ನಿಮ್ಮ ಪ್ರಶ್ನೆಗೆ ಉತ್ತರ ಕೊಡುವುದು ನನ್ನ ಧರ್ಮ. ಆದರೆ, ನಿಮಗೆ ಈ ಪರಿ ಅಜ್ಞಾನವೇ ಎನ್ನುವುದು ನನಗೆ ಸೋಜಿಗ. ಮಾತೆತ್ತಿದರೆ, ‘ನಾನು ಲಾಯರ್ ಗಿರಿ ಮಾಡ್ತಾ ಇದ್ದೆ. ಸುಮ್ಕೆ ಕೂತ್ಕಳಿ’ ಎಂದು ಎಲ್ಲರ ಬಾಯಿ ಮುಚ್ಚಿಸುತ್ತಿದ್ದ ನೀವು, ಈಗ ನೀವೇ ಬಾಯಿ ಮುಚ್ಚಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಅವರು ಲೇವಡಿ ಮಾಡಿದ್ದಾರೆ.

ಇದೇ ಕಾರಣಕ್ಕೆ ನಾನು ನಿಮ್ಮನ್ನು ಅತ್ಯಂತ ವಿನಮ್ರತೆಯಿಂದ ವಿನಂತಿ ಮಾಡಿಕೊಂಡಿದ್ದು, ‘ದಯಮಾಡಿ ವಕೀಲಿಕೆ ಮಾಡಬೇಡಿ’ ಎಂದು. ಕಾನೂನಿನ ಬಗ್ಗೆ ಸಾಸಿವೆ ಕಾಳಿನಷ್ಟು ತಿಳಿವಳಿಕೆ ಇಲ್ಲದವರೊಬ್ಬರು ‘ನಾನೂ ವಕೀಲ.. ನಾನೂ ವಕೀಲಿಕೆ ಮಾಡ್ತಾ ಇದ್ದೆ’ ಎಂದು ಹೇಳಿಕೊಳ್ಳುವುದು ಗೌರವಾನ್ವಿತ ವಕೀಲ ಸಮುದಾಯಕ್ಕೆ ಮಾಡುವ

ಅಪಚಾರ. ತಮಗೆ ಇನ್ನಾದರೂ ಇರಲಿ ಶಿಷ್ಟಾಚಾರ ಎಂದು ಸಿಎಂಗೆ ಮಾಜಿ ಸಿಎಂ ಕಿವಿಮಾತು ಹೇಳಿದ್ದಾರೆ.

ಎಸ್ ಐಟಿ ರೂಲ್ಸ್ ಗೊತ್ತಿಲ್ಲವೇ?

“ನೊಂದ ಮಹಿಳೆಯರ ವಿಡಿಯೋಗಳನ್ನು ಹಂಚುವುದು ಅಪರಾಧ ಎಂದು ಯಾವ ಸೆಕ್ಷನ್ ನಲ್ಲಿ ಹೇಳಿದ್ದಾರೆ” ಎಂದು ಒಂದನೇ ಕ್ಲಾಸು ಮಗುವಿನಂತೆ ಕೇಳಿದ್ದೀರಿ! ನಿಮ್ಮ ಸರಕಾರದ ಅಧೀನದಲ್ಲಿರುವ, ನೀವೇ ಆದೇಶಿಸಿ ರಚನೆ ಮಾಡಿಸಿರುವ ವಿಶೇಷ ತನಿಖಾ ತಂಡ (SIT) ಹೊರಡಿಸಿರುವ ಪತ್ರಿಕಾ ಪ್ರಕಟಣೆ, ರೂಪಿಸಿರುವ ಕಾನೂನುಬದ್ಧ ನಿಯಮಗಳು ‘ಸಾಕ್ಷಾತ್ ಸಿಎಂ’ ಆಗಿರುವ ನಿಮ್ಮ ಗಮನಕ್ಕೇ ಬಂದಿಲ್ಲವೆಂದರೆ!!??

ತಾವು ಸರಕಾರ ನಡೆಸುತ್ತಿರುವಿರೋ ಅಥವಾ  ವಿಧಾನಸೌಧವನ್ನು ಟೈಮ್ ಪಾಸ್ ಕ್ಲಬ್ ಮಾಡಿಕೊಂಡಿರುವಿರೋ..? ಎಂದು ಮಾಜಿ ಮುಖ್ಯಮಂತ್ರಿ ಅವರು ಕಿಡಿಕಾರಿದ್ದಾರೆ.

ನಿಮ್ಮ ಘನತವೇತ್ತ ಅವಗಾಹನೆಗೆ SIT ಹೊರಡಿಸಿರುವ ಪ್ರತಿಕಾ ಪ್ರಕಟಣೆಯನ್ನು ಇಲ್ಲಿ ಲಗತ್ತಿಸಿದ್ದೇನೆ. ದಯಮಾಡಿ ಓದಿಕೊಳ್ಳಿ, ಅರ್ಥ ಮಾಡಿಕೊಳ್ಳಿ.. ನೀವು ಕೇಳಿದ ಎಲ್ಲಾ ಸೆಕ್ಷನ್ ಗಳು ಅದರಲ್ಲಿಯೇ ಇವೆ. ಒಂದಲ್ಲಾ.. ಹತ್ತಾರು ಸಲ ಓದಿ ಮನನ ಮಾಡಿಕೊಳ್ಳಿ ಎಂದು ಅವರು ಸಲಹೆ ಮಾಡಿದ್ದಾರೆ.

ಮಾನವನ್ನು ವೋಟಿಗೆ ಒತ್ತೆ ಇಟ್ಟ ಕ್ರಿಮಿನಲ್!

ನಿಮ್ಮನ್ನು ಅಪಮಾನಿಸುತ್ತಿದ್ದೇನೆ ಎಂದು ಅನ್ಯತಾ ಭಾವಿಸಬೇಡಿ. ವಯಸ್ಸಿನಲ್ಲಿ ಹಿರಿಯರು, ಹೆಚ್ಚು ಅನುಭಸ್ಥರು ನೀವು. ಆದರೆ, ಪೆನ್ ಡ್ರೈವ್ ಪ್ರಕರಣದಲ್ಲಿ ನಿಮ್ಮ ನಡವಳಿಕೆ ಪ್ರಶ್ನಾರ್ಹ. ಅಮಾಯಕ ಹೆಣ್ಮಕ್ಕಳ ಮಾನವನ್ನು ವೋಟಿಗೆ ಒತ್ತೆ ಇಟ್ಟ ಕ್ರಿಮಿನಲ್ ಅನ್ನು ಪಕ್ಕದಲ್ಲೇ ಕೂರಿಸಿಕೊಂಡು ಮಾತನಾಡುತ್ತಿದ್ದೀರಿ. ಸಂವಿಧಾನಬದ್ಧವಾಗಿ ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿ ಸಂವಿಧಾನ ದ್ರೋಹಿ ಕೃತ್ಯ ಎಸಗಿರುವ ವ್ಯಕ್ತಿ ನಿಮ್ಮ ಸಂಪುಟದಲ್ಲಿ ಉಪ ಮುಖ್ಯಮಂತ್ರಿ!! ಇದಕ್ಕಿಂತ ನಿರ್ಲಜ್ಜತೆ ಉಂಟೇ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀವು, ನಿಮ್ಮ ಇಡೀ ಕಾಂಗ್ರೆಸ್ ಪಕ್ಷ CD ಶಿವು ರಕ್ಷಣೆಗೆ ಟೊಂಕ ಕಟ್ಟಿ ನಿಂತಿದ್ದೀರಿ. ನಿಮ್ಮ ಇಡೀ ಕ್ಯಾಬಿನೆಟ್ ಆ ವ್ಯಕ್ತಿಯ ಹಿತಾಸಕ್ತಿಗಾಗಿ, ಆತ ರೂಪಿಸಿರುವ ಒಳಸಂಚಿನಲ್ಲಿ ಭಾಗಿಯಾಗಿದೆ. ನಿಮ್ಮದು CABINET OF KARNATAKA (ಕ್ಯಾಬಿನೆಟ್ ಆಫ್ ಕರ್ನಾಟಕ) ಅಲ್ಲ, ಅದು CABINET OF CONSPIRACY!! (ಕ್ಯಾಬಿನೆಟ್ ಆಫ್ ಕಾನ್ಸಿಪ್ರಸಿ) ಬಹಳ ನೊಂದು ಈ ಮಾತು ಹೇಳುತ್ತಿದ್ದೇನೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.