ಬೆಂಗಳೂರು(Bengaluru): ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿರುವ ಬೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ,ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಇಂದು ಟ್ವೀಟ್ ಮಾಡಿರುವ ಅವರು, ಅಪಘಾತ ಸಂಭವಿಸಿದ ಕೊಲ್ಹಾಪುರ-ಹುಬ್ಬಳ್ಳಿ ಹೆದ್ದಾರಿಯ ಈ ಜಾಗದಲ್ಲಿ ಪದೇಪದೆ ದುರಂತಗಳು ಸಂಭವಿಸುತ್ತಿವೆ, ಅದು ‘ಸಾವಿನ ಹೆದ್ದಾರಿ’ ಆಗಿದೆ ಎಂದು ಜನರು ಹೇಳುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಸೂಕ್ತ ಗಮನ ಹರಿಸಿ ಮತ್ತೆಅಪಘಾತಗಳು ಸಂಭವಿಸದಂತೆ ತಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಹುಬ್ಬಳ್ಳಿ ಹೊರ ವಲಯದಲ್ಲಿ ಸಂಭವಿಸಿರುವ ಭೀಕರ ರಸ್ತೆ ಅಪಘಾತದಲ್ಲಿ 8 ಜನರು ಸಾವನ್ನಪ್ಪಿರುವುದು ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಕಳೆದ ತಡರಾತ್ರಿ ಸಂಭವಿಸಿರುವ ಈ ದುರಂತದಲ್ಲಿ 26 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ದುರಂತದಲ್ಲಿ ಅಸುನೀಗಿದ ನತದೃಷ್ಟರೆಲ್ಲರಿಗೂ ಚಿರಶಾಂತಿ ಸಿಗಲಿ ಹಾಗೂ ಆವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ದಯಪಾಲಿಸಲಿ, ಗಾಯಾಳುಗಳೆಲ್ಲ ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.