ಮನೆ ಕಾನೂನು ಬೆಕ್ಕಿನಿಂದ ಕಿರಿಕಿರಿ, ಒತ್ತೆ ಇರಿಸಿಕೊಂಡ ಆರೋಪ: ವ್ಯಕ್ತಿಯ ವಿರುದ್ಧದ ಕ್ರಿಮಿನಲ್‌ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಬೆಕ್ಕಿನಿಂದ ಕಿರಿಕಿರಿ, ಒತ್ತೆ ಇರಿಸಿಕೊಂಡ ಆರೋಪ: ವ್ಯಕ್ತಿಯ ವಿರುದ್ಧದ ಕ್ರಿಮಿನಲ್‌ ಪ್ರಕರಣಕ್ಕೆ ಹೈಕೋರ್ಟ್‌ ತಡೆ

0

 “ಬೆಕ್ಕು ತೊಂದರೆ ನೀಡುತ್ತಿದೆ ಎಂದು ಆರೋಪಿಸಿ ಅದನ್ನು ಒತ್ತೆಯಾಳಾಗಿ ಇಟ್ಟುಕೊಂಡಿದ್ದಾರೆ” ಎಂದು ವ್ಯಕ್ತಿಯೊಬ್ಬರ ವಿರುದ್ಧ ದಾಖಲಾಗಿದ್ದ ಅಪರೂಪದ ಕ್ರಿಮಿನಲ್‌ ಪ್ರಕರಣವೊಂದರ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.

Join Our Whatsapp Group

ಆನೇಕಲ್‌ ತಾಲ್ಲೂಕಿನ ಶಿಕಾರಿಪಾಳ್ಯದ ಸಿರಾಜ್‌ ಲೇಔಟ್‌ ನಿವಾಸಿ ತಾಹಾ ಹುಸೈನ್‌ ಬಿನ್‌ ಖಾಲಿದ್ ಮೆಹಬೂಬ್‌ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದ್ದು, 4ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಮುಂದಿನ ವಿಚಾರಣೆಗೆ ತಡೆ ನೀಡಿ ಆದೇಶಿಸಿತು.

ಅರ್ಜಿದಾರರ ಪರ ವಕೀಲ ಜಿ ದೇವರಾಜ್‌ ಅವರು “ಬೆಕ್ಕುಗಳು ಕಿಟಕಿಯಿಂದ ಮನೆಯ ಒಳಗೆ ಬರುವುದು ಮತ್ತು ಹೋಗುವುದು ಸಹಜ ಪ್ರಕ್ರಿಯೆ. ಇಂತಹ ಕ್ಷುಲ್ಲಕ ಪ್ರಕರಣಕ್ಕೆ ಸಂಬಂಧಿಸಿದ ಆರೋಪದಡಿ ಮುಂದಿನ ವಿಚಾರಣೆಗೆ ಅನುಮತಿ ನೀಡುವುದರಿಂದ ಅಪರಾಧಿಕ ನ್ಯಾಯಿಕ ವ್ಯವಸ್ಥೆಗೆ ಅಡ್ಡಿ ಉಂಟಾಗುತ್ತದೆ. ಆದ್ದರಿಂದ, ಅರ್ಜಿದಾರರ ವಿರುದ್ಧ ದಾಖಲಾಗಿರುವ ಪ್ರಕರಣದ‌ ಮುಂದಿನ ನ್ಯಾಯಿಕ ಪ್ರಕ್ರಿಯೆಗೆ ತಡೆ ನೀಡಬೇಕು” ಎಂದು ಮನವಿ ಮಾಡಿದರು.

ಇದಕ್ಕೆ ಪೀಠವು “ಆರೋಪಪಟ್ಟಿ ಸಲ್ಲಿಸಿರುವ ಪೊಲೀಸರ ನಡೆಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿದರಲ್ಲದೆ, ಅಯ್ಯೋ ದೇವರೇ..! ‘ಪೊಲೀಸರು ನಿಜವಾದ ಅಪರಾಧ ಪ್ರಕರಣಗಳ ಬೆನ್ನಟ್ಟವುದು ಬಿಟ್ಟು, ಬೆಕ್ಕು ಕಾಣೆಯಾದ ಪ್ರಕರಣದ ಬೆನ್ನುಬಿದ್ದಿದ್ದಾರೆ. ಬೆಕ್ಕು ಎಲ್ಲರ ಮನೆಗೆ ಒಳಗೆ ಹೋಗಿ ಹೊರಬಂದಿದೆ. ಇದರಿಂದ ಬೆಕ್ಕು ಕಾಣೆಯಾಗಿದೆ ಎಂದು ದೂರು ನೀಡಿದರೆ, ಅದನ್ನು ಪೊಲೀಸರು ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿರುವುದು ವಿಪರ್ಯಾಸ” ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಕರಣದ ಹಿನ್ನೆಲೆ: ತನ್ನ ಡೈಸಿ ಬೆಕ್ಕನ್ನು ತಾಹಾ ಹುಸೈನ್‌ ತಮ್ಮ ಮನೆಯಲ್ಲಿ ಒತ್ತೆಯಾಳಾಗಿ ಇಟ್ಟುಕೊಂಡಿದ್ದಾರೆ. ಬೆಕ್ಕನ್ನು ಒತ್ತೆಯಾಳಾಗಿ ಇಟ್ಟುಕೊಂಡಿರುವುದು ತಮ್ಮ ಮನೆಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ ಎಂದು ಆರೋಪಿಸಿ ಬೆಕ್ಕು ಕಳವು ಮಾಡಿದ ಆರೋಪದಡಿ ಆನೇಕಲ್‌ ಶಿಕಾರಿಪಾಳ್ಯದ ಸಿರಾಜ್‌ ಲೇಔಟ್‌ನ ಎರಡನೇ ಕ್ರಾಸ್‌ ನಿವಾಸಿ ನಿಖಿತಾ ಅಂಜನಾ ಅಯ್ಯರ್‌ ಹೆಬ್ಬಗೋಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನ ಹಿನ್ನೆಲೆಯಲ್ಲಿ ತಾಹಾ ಹುಸೈನ್‌ ವಿರುದ್ಧ ಐಪಿಸಿ ಸೆಕ್ಷನ್‌ 504, 506 ಮತ್ತು 509ರ ಅಡಿಯಲ್ಲಿ ಜೀವ ಬೆದರಿಕೆ, ಶಾಂತಿಭಂಗ ಮತ್ತು ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪದ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸರು ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.