ಮನೆ ಸ್ಥಳೀಯ ಪಾದಯಾತ್ರೆ ವಿಚಾರದಲ್ಲಿ BJP-JDS ನಡುವೆ ಯಾವುದೇ ಬಿರುಕು ಇಲ್ಲ: ನಿಖಿಲ್ ಕುಮಾರಸ್ವಾಮಿ

ಪಾದಯಾತ್ರೆ ವಿಚಾರದಲ್ಲಿ BJP-JDS ನಡುವೆ ಯಾವುದೇ ಬಿರುಕು ಇಲ್ಲ: ನಿಖಿಲ್ ಕುಮಾರಸ್ವಾಮಿ

0

ಮೈಸೂರು:ಮೈಸೂರು ಚಲೋ ಪಾದಯಾತ್ರೆಯ ವಿಚಾರದಲ್ಲಿ ಬಿಜೆಪಿ-ಜೆಡಿಎಸ್‌ ನಡುವೆ ಯಾವುದೇ ಬಿರುಕು ಉಂಟಾಗಿಲ್ಲ. ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಮೈತ್ರಿ ಹೋರಾಟ ನಿರಂತರವಾಗಿ ನಡೆಯುತ್ತದೆ’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

Join Our Whatsapp Group


ಆಷಾಢದ ಕಡೆಯ ಶುಕ್ರವಾರದ ಅಂಗವಾಗಿ ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಅವರು ಮಾತನಾಡಿದರು.
‘ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ವಿರುದ್ಧದ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುವುದು ನಮ್ಮ ಪಾದಯಾತ್ರೆಯ ಉದ್ದೇಶವಾಗಿದೆ. ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿರುವುದರಿಂದಾಗಿ ಪಾದಯಾತ್ರೆ ಮುಂದೂಡಲು ಮನವಿ ಮಾಡಲಾಗಿತ್ತಷ್ಟೆ. ಆದರೆ, ಬಿಜೆಪಿ ವರಿಷ್ಠರು ಮುಂದೂಡುವುದು ಸರಿಯಲ್ಲವೆಂದು ಹೇಳಿದ ಕಾರಣ ಪಾದಯಾತ್ರೆಗೆ ನಾವು ಒಪ್ಪಿದ್ದೇವೆ. ರಾಜ್ಯದ ಜನರ ಪರವಾಗಿ ನಡೆಸುತ್ತಿದ್ದೇವೆ. ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್‌ನವರು ಪರ್ಯಾಯ ಸಮಾವೇಶಗಳನ್ನು ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.
‘ಇತಿಹಾಸದಲ್ಲೇ ಈ ರೀತಿಯ ಹಗರಣ ಯಾವತ್ತೂ ನಡೆದಿರಲಿಲ್ಲ. ಸ್ವತಃ ಮುಖ್ಯಮಂತ್ರಿಗಳೇ, ವಾಲ್ಮೀಕಿ ನಿಗಮದಲ್ಲಿ ₹ 89ಕೋಟಿ ಹಗರಣ ನಡೆದಿದೆ ಎಂದು ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದಕ್ಕೆ ಸರ್ಕಾರವೇ ಹೊಣೆ. ಇದರ ವಿರುದ್ಧ ನಮ್ಮ ಹೋರಾಟ ನಡೆಸುತ್ತಿದ್ದೇವೆ’ ಎಂದು ತಿಳಿಸಿದರು.
ರಾಮನಗರದಲ್ಲಿ ಎಚ್‌ಡಿಕೆ ಆಸ್ತಿ ಕುರಿತ ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ತಿರುಗೇಟು ನೀಡಿದ ಅವರು, ‘ರಾಮನಗರದಲ್ಲಿ ನಮ್ಮ ಆಸ್ತಿ ಎಷ್ಟಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. 1985ರಲ್ಲಿ ಕುಮಾರಸ್ವಾಮಿ ಅವರು ಕೇತಗಾನಹಳ್ಳಿ ಬಳಿ ಜಮೀನು ಖರೀದಿಸಿದ್ದರು. ಸಿನಿಮಾ ವಿತರಣೆಯಲ್ಲಿ ಬಂದಿದ್ದ ಹಣದಲ್ಲಿ ಜಮೀನು ಖರೀದಿಸಿದ್ದೇವೆ. ಇದನ್ನು ಹೊರತುಪಡಿಸಿ ರಾಮನಗರದಲ್ಲಿ ಬೇರಾವುದೇ ಆಸ್ತಿ ಇಲ್ಲ’ ಎಂದು ತಿಳಿಸಿದರು.
‘ಮೈತ್ರಿಗೆ ಜನರ ಬೆಂಬಲ ಸಿಕ್ಕಿದೆ. ಅದೇ ಕಾರಣಕ್ಕೆ ಲೋಕಸಭೆ ಚುನಾವಣೆಯಲ್ಲಿ ನಮಗೆ ಹೆಚ್ಚು ಸ್ಥಾನ ಸಿಕ್ಕಿದೆ. ಇದನ್ನು ಅರ್ಥ ಮಾಡಿಕೊಂಡರೆ ಸಾಕು’ ಎಂದರು.
ಹುಣಸೂರು ಶಾಸಕ ಜಿ.ಡಿ.ಹರೀಶ್ ಗೌಡ, ಮಾಜಿ ಶಾಸಕ ಅಶ್ವಿನ್ ಕುಮಾರ್, ಮೈಮುಲ್‌ ಮಾಜಿ ಅಧ್ಯಕ್ಷ ಪಿ.ಎಂ. ಪ್ರಸನ್ನ, ಮನ್ಮುಲ್ ಮಾಜಿ ಅಧ್ಯಕ್ಷ ರಾಮಚಂದ್ರು, ಮುಖಂಡ ಎಂ.ಜೆ. ರವಿಕುಮಾರ್ ಪಾಲ್ಗೊಂಡಿದ್ದರು.