ಮನೆ ಕಾನೂನು ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಅತಿವೇಗದ ಚಾಲನೆ: 76 ಮಂದಿಯ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ ಅತಿವೇಗದ ಚಾಲನೆ: 76 ಮಂದಿಯ ವಿರುದ್ಧ ಪ್ರಕರಣ ದಾಖಲು

0

ಬೆಂಗಳೂರು: ಹೆದ್ದಾರಿಗಳಲ್ಲಿ ಗಂಟೆಗೆ 130 ಕಿಮೀ ವೇಗದ ಮಿತಿಯನ್ನು ಮೀರಿ ವಾಹನ ಚಾಲನೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ ನಂತರದ ಕೆಲವೇ ದಿನಗಳಲ್ಲಿ ಕರ್ನಾಟಕ ಪೊಲೀಸರು ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ 76 ಚಾಲಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ.

Join Our Whatsapp Group

ಆಗಸ್ಟ್ 1ರಿಂದ ಹೊಸ ನಿಯಮ ಜಾರಿಗೆ ಬಂದಿದ್ದು, ಆಗಸ್ಟ್ 1 ಮತ್ತು 2ರಂದು ಈ ಪ್ರಕರಣಗಳನ್ನು ದಾಖಲಿಸಲಾಗಿದೆ.

ದಾಖಲಾಗಿರುವ ಪ್ರಕರಣಗಳ ಪೈಕಿ ಹೆಚ್ಚಿನವು ಎಸ್‌ಯುವಿಗಳು ಮತ್ತು ಎಂಯುವಿಗಳ ಚಾಲಕರ ಮೇಲಿನದ್ದಾಗಿವೆ.

ರಸ್ತೆ ಅಪಘಾತದ ಸಾವುನೋವುಗಳನ್ನು ಗಮನಿಸಿದಾಗ, ಸುಮಾರು ಶೇ 90 ರಷ್ಟು ಮಾರಣಾಂತಿಕ ಅಪಘಾತಗಳು ವೇಗ ಮತ್ತು ಅತಿವೇಗದ / ನಿರ್ಲಕ್ಷ್ಯದ ಚಾಲನೆಯಿಂದ ಸಂಭವಿಸುತ್ತಿರುವುದು ಕಂಡುಬಂದಿದೆ ಎಂದು ಎಡಿಜಿಪಿ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ತಿಳಿಸಿದ್ದಾರೆ.

ಹೊಸ ನಿಯಮ ಜಾರಿಗೆ ಬಂದ ಮೊದಲ ದಿನ ನಾವು 33 ಚಾಲಕರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಿದ್ದೇವೆ ಮತ್ತು ಶುಕ್ರವಾರ 43 ವಾಹನಗಳ ಚಾಲಕರ ವಿರುದ್ಧ ಎಫ್​ಐಆರ್ ದಾಖಲಿಸಲಾಗುದೆ. ನಾವು ಗಂಟೆಗೆ 130 ಕಿಮೀ ವೇಗದಲ್ಲಿ ಚಾಲನೆ ಮಾಡಿದ ಎಲ್ಲರ ವಿರುದ್ಧವೂ ಪ್ರಕರಣ ದಾಖಲಿಸಿಲ್ಲ. 130 ಕಿಮೀ ಮಿತಿಯನ್ನು ಮೀರಿ ಅದಕ್ಕಿಂತ ಹೆಚ್ಚಿನ 5 – 10 ಕಿಮೀ ವೇಗದ ಚಾಲನೆಗೆ ಪ್ರಕರಣ ದಾಖಲಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರಡೂ ದಿನ ರಾಮನಗರ ಮತ್ತು ಮಂಡ್ಯ ನಡುವೆ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ತಪ್ಪಿತಸ್ಥ ಚಾಲಕರು ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1,000 ರೂ. ದಂಡ ಅಥವಾ ಎರಡನ್ನೂ ಎದುರಿಸಬೇಕಾಗುತ್ತದೆ.