ಮನೆ ರಾಜ್ಯ ಮಹಾತ್ಮ ಗಾಂಧೀಜಿ 155ನೇ ಜಯಂತಿ: ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

ಮಹಾತ್ಮ ಗಾಂಧೀಜಿ 155ನೇ ಜಯಂತಿ: ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

0

ಮೈಸೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ / ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. 

Join Our Whatsapp Group

ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲು ಉದ್ದೇಶಿಸಲಾಗಿದೆ.   ವಿಜೇತರಿಗೆ ರಾಜ್ಯಮಟ್ಟದಲ್ಲಿ ಪ್ರಥಮ 31 ಸಾವಿರ ರೂ. ದ್ವಿತೀಯ   21 ಸಾವಿರ ರೂ. ಮತ್ತು ತೃತೀಯ 11 ಸಾವಿರ ರೂ. ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಥಮ 3 ಸಾವಿರ ರೂ. ದ್ವಿತೀಯ 2 ಸಾವಿರ ರೂ ಮತ್ತು ತೃತೀಯ 1 ಸಾವಿರ ರೂ. ಬಹುಮಾನ ನೀಡಲಾಗುವುದು.

ಪ್ರೌಢ ಶಾಲಾ ವಿಭಾಗ :- 1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ಗಾಂಧೀಜಿಯವರ ವಿಚಾರದಲ್ಲಿ ಸತ್ಯಾಗ್ರಹ, 3) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, 4) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ,  ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 900 ಪದಗಳಿಗೆ ಮೀರದಂತೆ ಪ್ರಬಂಧ  ಬರೆಯಬೇಕು. 

ಪದವಿ ಪೂರ್ವ ಶಿಕ್ಷಣ ವಿಭಾಗ :- 1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು, 3) ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ, 4) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ,  ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 1500 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು. 

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ :- 1) ಇಂದಿನ ಪ್ರಜಾಪ್ರಭುತ್ವದಲ್ಲಿ ಸತ್ಯಾಗ್ರಹದ ಮಹತ್ವ, 2) ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು, 3) ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು, 4) ಗಾಂಧೀಜಿಯವರ ವಿಚಾರದಲ್ಲಿ ಸತ್ಯದ ಪರಿಕಲ್ಪನೆ, 5) ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು.  ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಐದು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 2000 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು. 

ದಿನಾಂಕ : 06-09-2024 ರೊಳಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾಡಳಿತದ ಸಹಯೋಗದೊಂದಿಗೆ ಸ್ಪರ್ಧೆ ಏರ್ಪಡಿಸಿ ದಿನಾಂಕ : 10-09-2024 ರೊಳಗಾಗಿ  ಮೌಲ್ಯಮಾಪನ ಮಾಡಿ, ವಿಜೇತರ ವಿವರಗಳು ಹಾಗೂ ಪ್ರಬಂಧಗಳನ್ನು ಕೇಂದ್ರ ಕಚೇರಿಗೆ ಕಳುಹಿಸಲಿದೆ.  ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯಮಟ್ಟದಲ್ಲಿ ಮರುಮೌಲ್ಯಮಾಪನ ಮಾಡಿ, ರಾಜ್ಯಮಟ್ಟದ ಫಲಿತಾಂಶ ಘೋಷಿಸಲಾಗುವುದು.

ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು (3) ಪ್ರಬಂಧಗಳಿಗೆ ಅಕ್ಟೋಬರ್ 02 ರಂದು ಜಿಲ್ಲಾ ಮಟ್ಟದ ಗಾಂಧೀ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರಿಗೆ ಗೌರವಿಸಲಾಗುವುದು.

ನಿಬಂಧನೆಗಳು :-

ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು.  ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು. ಆಕರವಾಗಿ ಬಳಸಿದ ಪರಾಮರ್ಶನ / ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು.  ಆದರೆ, ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿ ಪರಾಮರ್ಶನ / ಆಧಾರ ಗ್ರಂಥಗಳು / ಮೊಬೈಲ್ ಗಳ ಬಳಕೆಗೆ ಅವಕಾಶವಿರುವುದಿಲ್ಲ. ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು.  ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ.