ಮನೆ ರಾಷ್ಟ್ರೀಯ ‘ಅತ್ಯಾಚಾರ ತಡೆ ಮಸೂದೆ’ ಮಂಡಿಸಿದ ಪಶ್ಚಿಮ ಬಂಗಾಳ ಸರ್ಕಾರ

‘ಅತ್ಯಾಚಾರ ತಡೆ ಮಸೂದೆ’ ಮಂಡಿಸಿದ ಪಶ್ಚಿಮ ಬಂಗಾಳ ಸರ್ಕಾರ

0

ಕೋಲ್ಕತ್ತ: ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಇಂದು (ಮಂಗಳವಾರ) ವಿಧಾನಸಭೆಯಲ್ಲಿ ‘ಅತ್ಯಾಚಾರ ತಡೆ ಮಸೂದೆ’ಯನ್ನು ಮಂಡಿಸಿದೆ.

Join Our Whatsapp Group

ಪಶ್ಚಿಮ ಬಂಗಾಳದ ಕಾನೂನು ಸಚಿವ ಮೊಲೊಯ್ ಘಾಟಕ್ ಅವರು ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಿದರು.

ಮಸೂದೆಯ ಮೇಲಿನ ಚರ್ಚೆ ಸುಮಾರು ಎರಡು ಗಂಟೆಗಳ ಕಾಲ ನಡೆಯುವ ನಿರೀಕ್ಷೆಯಿದೆ. ಬಿಜೆಪಿ ಶಾಸಕರಾದ ಸಿಖಾ ಚಟರ್ಜಿ ಮತ್ತು ಅಗ್ನಿಮಿತ್ರ ಪೌಲ್ ಹಾಗೂ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ  ಮಾತನಾಡಲಿದ್ದಾರೆ.

ಸರ್ಕಾರದ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಸೋಭಾಂದೇಬ್ ಚಟ್ಟೋಪಾಧ್ಯಾಯ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಲಿದ್ದಾರೆ.

ಪ್ರಸ್ತಾವಿತ ಮಸೂದೆ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ಮೃತಪಟ್ಟರೆ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲು ಅವಕಾಶ ಇದೆ. ಅಲ್ಲದೇ ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರದ ಅಪರಾಧಿಗಳಿಗೆ ಪೆರೋಲ್ ನೀಡದೆ ಜೀವಾವಧಿ ಶಿಕ್ಷೆಯನ್ನು ವಿಧಿಸುವ ಪ್ರಸ್ತಾವ ಮಸೂದೆಯಲ್ಲಿದೆ.

‘ಅಪರಾಜಿತ ಮಹಿಳೆ ಮತ್ತು ಮಕ್ಕಳ ಮಸೂದೆ’ (ಪಶ್ಚಿಮ ಬಂಗಾಳ ಕ್ರಿಮಿನಲ್‌ ಕಾನೂನು ಮತ್ತು ತಿದ್ದುಪಡಿ ಮಸೂದೆ)–2024 ಅನ್ನು ಸರ್ಕಾರ ಮಂಡಿಸಿದೆ. ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಗೆ ಸಂಬಂಧಿಸಿದ ಹೊಸ ಶಿಕ್ಷೆಗಳನ್ನು ಇದರಲ್ಲಿ ಪರಿಚಯಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಒತ್ತು ನೀಡುವ ಗುರಿಯನ್ನು ಇದು ಹೊಂದಿದೆ.

ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಘಟನೆ ಬಳಿಕ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ವೈದ್ಯರು ನಿರಂತರ ಮುಷ್ಕರ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಅತ್ಯಾಚಾರ, ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮಸೂದೆ ಮಂಡಿಸುವುದಾಗಿ ಮಮತಾ ಬ್ಯಾನರ್ಜಿ ಅವರ ಸರ್ಕಾರ ಘೋಷಿಸಿತ್ತು.

ಈ ಸಂಬಂಧ ಸೋಮವಾರದಿಂದ ಎರಡು ದಿನಗಳ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ.