ಬೆಂಗಳೂರು (Bengaluru)- ರಾಜ್ಯ ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಮೇಲೆ ಜೆಡಿಎಸ್ ಕಾರ್ಯಕರ್ತರು ಮಸಿ ಎರಚಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಇಬ್ಬರು ರೈತ ಸಂಘದ ಕಾರ್ಯಕರ್ತರು ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಈವರೆಗೂ 8 ಮಂದಿಯನ್ನು ಬಂಧಿಸಿದ್ದಾರೆ.
ಪತ್ರಿಕಾಗೋಷ್ಠಿ ನಡೆಸಲು ಬೆಂಗಳೂರಿನ ಪ್ರೆಸ್ ಕ್ಲಬ್ ಗೆ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಮತ್ತಿತರೆ ರೈತ ಮುಖಂಡರು ಆಗಮಿಸಿದ್ದರು. ಈ ವೇಳೆ ಏಕಾಏಕಿ ಜೆಡಿಎಸ್ ಸದಸ್ಯರು ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಅವರ ಬಣದ ಸದಸ್ಯರ ಜೊತೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ರೈತ ಸಂಘ ಮತ್ತು ಜೆಡಿಎಸ್ ಸದಸ್ಯರ ನಡುವೆ ತಳ್ಳಾಟ ನಡೆಯಿತು. ಈ ಹಂತದಲ್ಲಿ ರೈತರ ಮೇಲೆ ಕಪ್ಪು ಮಸಿ ಎರಚಲಾಯಿತು.
ಮಾತಿನ ಚಕಮತಿ ವೇಳೆ ರೈತ ಸಂಘದ ಹೆಸರಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ದಂಧೆ ನಡೆಸುತ್ತಿದ್ದಾರೆಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿದರು.
ಪ್ರತಿಭಟನೆ ಹೆಸರಿನಲ್ಲಿ ಸಾರಿಗೆ ನೌಕರರು ಮುಂದಾದಾಗ ನೇತೃತ್ವ ವಹಿಸಿದ್ದ ಅವರು ಹಣ ಪಡೆದು ಪ್ರತಿಭಟನೆ ಕೈಬಿಟ್ಟಿದ್ದರು. ಈ ಸಂಬಂಧ ಮಾಧ್ಯಗಳಲ್ಲಿ ವರದಿಯಾಗಿದೆ ಎಂದು ಆರೋಪಿಸಿದರು.