ಮನೆ ರಾಜ್ಯ ರಾಜ್ಯಸಭೆಗೆ ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್‌, ನಟ ಜಗ್ಗೇಶ್‌ ಗೆ ಟಿಕೆಟ್‌

ರಾಜ್ಯಸಭೆಗೆ ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್‌, ನಟ ಜಗ್ಗೇಶ್‌ ಗೆ ಟಿಕೆಟ್‌

0

ಬೆಂಗಳೂರು (Bengaluru)-ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ನಟ, ರಾಜಕಾರಣಿ ಜಗ್ಗೇಶ್ ಅವರಿಗೆ ಟಿಕೆಟ್ ನೀಡಲಾಗಿದೆ.

ಈ ಬಾರಿ ನಿರ್ಮಲಾ ಸೀತಾರಾಮನ್ ಅವರಿಗೆ ರಾಜ್ಯದಿಂದ ಟಿಕೆಟ್ ನೀಡಲ್ಲ ಎಂಬ ಮಾತುಗಳು ಕೇಳಿಬಂದಿದ್ದವು. ಅದಾಗ್ಯೂ ಹೈಕಮಾಂಡ್ ಮತ್ತೊಮ್ಮೆ ಕೇಂದ್ರ ಸಚಿವೆಗೆ ರಾಜ್ಯದಿಂದಲೇ ಟಿಕೆಟ್ ನೀಡಿದೆ.

ಇನ್ನೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ನಟ ಜಗ್ಗೇಶ್ ಅವರಿಗೆ ರಾಜ್ಯಸಭೆ ಟಿಕೆಟ್ ನೀಡಿರೋದರಿಂದ ಸಚಿವ ಎಸ್. ಟಿ. ಸೋಮಶೇಖರ್ ನಿರಾಳರಾಗಿದ್ದಾರೆ. ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರಿದ್ದ ತುರುವೇಕೆರೆ ಮಾಜಿ ಶಾಸಕ ಜಗ್ಗೇಶ್ ಅವರು ವಿಧಾನ ಪರಿಷತ್ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. ಇದೀಗ ಅಚ್ಚರಿಯ ಬೆಳವಣಿಗೆಯಲ್ಲಿ ನಟ ಜಗ್ಗೇಶ್ ಅವರಿಗೆ ಬಿಜೆಪಿ ರಾಜ್ಯಸಭೆ ಟಿಕೆಟ್​ ನೀಡಿದೆ. 

ಕಾಂಗ್ರೆಸ್ ತೊರೆದು ಬಂದಿದ್ದ ರೆಡ್ಡಿ ಸಮುದಾಯದ ಕೆ.ಸಿ.ರಾಮಮೂರ್ತಿಯವರೆಗೆ ಟಿಕೆಟ್ ಮಿಸ್ ಆಗಿದ್ದು, ಒಕ್ಕಲಿಗ ಸಮುದಾಯದ ಜಗ್ಗೇಶ್ ಗೆ ಮಣೆ ಹಾಕಲಾಗಿದೆ.

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ನಡೆಯಲಿದ್ದು, ವಿಧಾನಸಭೆಯಲ್ಲಿ ಪಕ್ಷಗಳ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿಯಿಂದ ಇಬ್ಬರು ಹಾಗೂ ಕಾಂಗ್ರೆಸ್ ನಿಂದ ಒಬ್ಬರನ್ನು ಆಯ್ಕೆ ಮಾಡಲು ಅವಕಾಶ ಇದೆ. ನಾಲ್ಕನೇ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮೂರೂ ಪಕ್ಷಗಳಲ್ಲಿ ಯಾವುದೇ ಬಹುಮತವಿಲ್ಲ. ಒಂದು ಪಕ್ಷ ಮತ್ತೊಂದು ಪಕ್ಷವನ್ನ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.