ಬೆಂಗಳೂರು: ರಾಜ್ಯದಲ್ಲಿ ಜೂನ್ 20ರಿಂದ ಆರಂಭವಾಗಲಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಕಾಂಗ್ರೆಸ್ ನಾಯಕತ್ವ ಗಂಭೀರ ಎಚ್ಚರಿಕೆ ವಹಿಸಿದೆ. ಮತದಾರರ ಪಟ್ಟಿಯಿಂದ ನೈಜ ಮತದಾರರ ಹೆಸರುಗಳನ್ನು ತೆಗೆದುಹಾಕುವ ಸಾಧ್ಯತೆ ಇದೆ ಎಂಬ ಆತಂಕದ ಹಿನ್ನೆಲೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಜಾಗರೂಕರಾಗಿರಲು ಸೂಚನೆ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ನೇತೃತ್ವದಲ್ಲಿ ಪಕ್ಷದ ಶಾಸಕರು ಮತ್ತು ಹಿರಿಯ ನಾಯಕರೊಂದಿಗೆ ಮಹತ್ವದ ಸಭೆ ನಡೆಸಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ನಡೆದ ಬೆಳವಣಿಗೆಗಳ ಬಳಿಕ ಕರ್ನಾಟಕದಲ್ಲಿಯೂ ಲಕ್ಷಾಂತರ ನಿಜವಾದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನ ನಡೆಯಬಹುದು ಎಂಬ ಅನುಮಾನ ಕಾಂಗ್ರೆಸ್ ವಲಯದಲ್ಲಿ ವ್ಯಕ್ತವಾಗಿದೆ ಎಂದು ಹೇಳಲಾಗಿದೆ.ಈ ಹಿನ್ನೆಲೆ ಬೆಂಗಳೂರಿನ ನಂದಿ ಬೆಟ್ಟದ ಸಮೀಪದ ರೆಸಾರ್ಟ್ನಲ್ಲಿ ಸಚಿವರು, ಹಾಲಿ ಹಾಗೂ ಮಾಜಿ ಶಾಸಕರ ಸಭೆ ನಡೆಸಿ SIR ಪ್ರಕ್ರಿಯೆ ಕುರಿತು ವಿಸ್ತೃತ ಚರ್ಚೆ ನಡೆಸಿದರು.
ಸಭೆಯಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರು ಅಳಿಸದಂತೆ ಕಟ್ಟುನಿಟ್ಟಿನ ನಿಗಾ ವಹಿಸಲು ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಭಾಗಿಯಾಗಿರುವ ಬೂತ್ ಲೆವೆಲ್ ಅಧಿಕಾರಿಗಳ (BLO) ಚಟುವಟಿಕೆಗಳ ಮೇಲೆ ಗಮನ ಹರಿಸುವಂತೆ ಹಾಗೂ ಕಾಂಗ್ರೆಸ್ ಬೆಂಬಲಿತ BLOಗಳನ್ನು ಸಕ್ರಿಯಗೊಳಿಸುವಂತೆ ಸೂಚಿಸಲಾಗಿದೆ.
ಮುಂದಿನ ದಿನಗಳಲ್ಲಿ ನಡೆಯಲಿರುವ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ SIR ಪ್ರಕ್ರಿಯೆ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಸುಪ್ರೀಂ ಕೋರ್ಟ್ ಆಗಸ್ಟ್ 31ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಗಡುವು ನೀಡಿರುವ ಕಾರಣ, ಈ ಚುನಾವಣೆಗಳನ್ನು ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ 2028ರ ವಿಧಾನಸಭಾ ಚುನಾವಣೆಯ ದಿಕ್ಕು ನಿರ್ಧರಿಸುವ ಪ್ರಮುಖ ಹಂತವಾಗಿ ಕಾಂಗ್ರೆಸ್ ಪರಿಗಣಿಸಿದೆ.
ಸಭೆಯಲ್ಲಿ ಬಿಜೆಪಿ ಹಲವು ರಾಜ್ಯಗಳಲ್ಲಿ SIR ಪ್ರಕ್ರಿಯೆಯನ್ನು ದುರುಪಯೋಗ ಮಾಡಿಕೊಂಡು ಚುನಾವಣೆಯಲ್ಲಿ ಲಾಭ ಪಡೆದಿದೆ ಎಂಬ ಆರೋಪದ ಕುರಿತಾಗಿಯೂ ಚರ್ಚೆ ನಡೆದಿದೆ ಎನ್ನಲಾಗಿದೆ.ಕರ್ನಾಟಕದ 136 ಕಾಂಗ್ರೆಸ್ ಶಾಸಕರಲ್ಲಿ ಸುಮಾರು 70 ರಿಂದ 80 ಮಂದಿ ಸಭೆಯಲ್ಲಿ ಭಾಗವಹಿಸಿದ್ದು, ಉಳಿದವರು ಸೋಮವಾರ ನಡೆಯಲಿರುವ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ ಕೆಪಿಸಿಸಿ ಕಚೇರಿಯಲ್ಲಿ ವಿಶೇಷ ‘ವಾರ್ ರೂಂ’ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, SIR ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ಅಥವಾ ಅನುಮಾನಾಸ್ಪದ ಬೆಳವಣಿಗೆ ಕಂಡುಬಂದರೆ ಕಾರ್ಯಕರ್ತರು ತಕ್ಷಣ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಹಾಗೂ ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, SIR ಪ್ರಕ್ರಿಯೆಯನ್ನು “ಅಸಂವಿಧಾನಿಕ” ಎಂದು ಟೀಕಿಸಿದ್ದಾರೆ.“ಪಶ್ಚಿಮ ಬಂಗಾಳದಲ್ಲಿ ಲಾಜಿಕಲ್ ಡಿಸ್ಕ್ರೆಪೆನ್ಸಿ ಹೆಸರಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ. ಕರ್ನಾಟಕದಲ್ಲಿಯೂ ಇದೇ ರೀತಿಯ ಪ್ರಯತ್ನ ನಡೆಯುವ ಭೀತಿ ಇದೆ,” ಎಂದು ಅವರು ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ತನ್ನ ಆಡಳಿತ ವೈಫಲ್ಯಗಳನ್ನು ಮುಚ್ಚಿಹಾಕಲು SIR ವಿಚಾರವನ್ನು ಮುಂದಿಟ್ಟಿದೆ ಎಂದು ಆರೋಪಿಸಿದ್ದಾರೆ.ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ಕಾಂಗ್ರೆಸ್ ಹೊಸ ವಿಚಾರಗಳನ್ನು ಮುಂದಿಟ್ಟುಕೊಂಡು ಜನರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಿದೆ ಎಂದು ಅವರು ಟೀಕಿಸಿದ್ದಾರೆ.















