ಮೈಸೂರು : ಸಾಂಸ್ಕತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್ಗೆ ಮತ್ತೊಂದು ವಿಮಾನ ಸಂಚಾರ ಅತಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಮೈಸೂರಿನಿಂದ ಹೈದರಾಬಾದ್ಗೆ ಇಂದಿನಿಂದ ಈ ವಿಮಾನ ಸೇವೆ ಆರಂಭವಾಗಲಿದ್ದು, ಮಧ್ಯಾಹ್ನ 2.20ಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ ಹೊರಡಲಿರುವ ವಿಮಾನ ಮಧ್ಯಾಹ್ನ ನಾಲ್ಕು ಗಂಟೆಗೆ ಹೈದರಾಬಾದ್ ತಲುಪಲಿದೆ. ಈಗಾಗಲೇ ಎರಡು ವಿಮಾನಗಳು ಚೆನ್ನೈ ಹಾಗೂ ಹೈದರಾಬಾದ್ಗೆ ತೆರಳುತ್ತಿದ್ದು, ಈ ವಿಮಾನ ಸೇವೆಯಿಂದ ನಾಗರಿಕರಿಗೆ ಮತ್ತಷ್ಟು ಅನುಕೂಲವಾಗಲಿದೆ.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಮಾಹಿತಿ ಹಂಚಿಕೊಂಡಿರುವ ಸಂಸದ ಯದುವೀರ್ ಒಡೆಯರ್, ಮುಂದಿನ ದಿನಗಳಲ್ಲಿ ಮೈಸೂರಿನಿಂದ ಹೆಚ್ಚುವರಿ ವಿಮಾನ ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಮೈಸೂರಿನಿಂದ ವಾಯು ಸಂಚಾರ ಹೆಚ್ಚಳಕ್ಕೆ ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ.
ಈ ನಿಟ್ಟಿನಲ್ಲಿ ಹಲವಾರು ಬಾರಿ ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸಿದ್ದೇನೆ. ವಿಮಾನ ನಿಲ್ದಾಣ ವಿಸ್ತರಣೆಗೆ ತೊಡಕಾಗಿರುವ ಭೂ ಸ್ವಾಧೀನ ಪ್ರಕ್ರಿಯೆ ಕೂಡ ಬಹುತೇಕ ಪೂರ್ಣಗೊಂಡಿದೆ. ಮುಂದಿನ ಕೆಲವೇ ದಿನಗಳಲ್ಲಿ ಇದು ಹಸ್ತಾಂತರಗೊಂಡ ನಂತರ ಕೇಂದ್ರದ ಮೇಲೆ ಇನ್ನಷ್ಟು ಒತ್ತಡ ಹೇರಿ ವಿಮಾನ ನಿಲ್ದಾಣ ವಿಸ್ತರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದರು ವಿವರಿಸಿದ್ದಾರೆ.
ಒಮ್ಮೆ ವಿಮಾನ ನಿಲ್ದಾಣ ವಿಸ್ತರಣೆಗೊಂಡ ನಂತರ ದೇಶದ ನಾನಾ ಪ್ರಮುಖ ನಗರಗಳಿಗೆ ಮೈಸೂರಿನಿಂದ ನೇರ ವಿಮಾನ ಸಂಚಾರ ಸೇವೆ ಆರಂಭಗೊಳ್ಳಲಿದೆ. ಇದರೊಂದಿಗೆ ಮೈಸೂರಿನ ಅಭಿವೃದ್ಧಿಯೂ ಸಮಾನಾಂತರವಾಗಿ ಆಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.















