ನವದೆಹಲಿ: ರಾಜ್ಯದಲ್ಲಿ ಶೋಷಿತರ ಸಮಾವೇಶ ನಡೆಸಲು ಹೈಕಮಾಂಡ್ಗೆ ಮನವಿ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಸಮಾವೇಶದಲ್ಲಿ ಭಾಗವಹಿಸುವುದಾಗಿ ರಾಷ್ಟ್ರೀಯ ನಾಯಕರು ತಿಳಿಸಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೂ ಆಹ್ವಾನ ನೀಡುತ್ತೇವೆ’ ಎಂದು ಹೇಳಿದ್ದಾರೆ.
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಬಿಡುಗಡೆ ಮಾಡಿ ಎಂದು ಕೇಳಿರುವೆ. ನಾನು ತುಮಕೂರು ಜಿಲ್ಲೆ ಹಾಗೂ ಪಕ್ಷ ಸಂಘಟನೆಗೆ ಗಮನ ನೀಡಬೇಕಿದೆ. ಈ ಸಂಬಂಧ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ಪತ್ರ ನೀಡಿರುವೆ ಎಂದು ಅವರು ತಿಳಿಸಿದ್ದಾರೆ.
ಹಿರಿಯ ಮುಖಂಡರ ಭೇಟಿ
ನಮ್ಮ ಪಕ್ಷದ ಹಿರಿಯ ಮುಖಂಡರನ್ನು ಭೇಟಿ ಮಾಡಿದ್ದೇನೆ. ಖರ್ಗೆ ಅವರನ್ನು ಭೇಟಿಯಾಗಿ, ಸರ್ಕಾರ ಮತ್ತು ಪಕ್ಷದ ಬೆಳವಣಿಗೆ ಕುರಿತು ಗಮನಕ್ಕೆ ತಂದಿದ್ದೇನೆ. ಆದರೆ ಯಾವ ವಿಚಾರ ಚರ್ಚೆ ಮಾಡಿದ್ದೇನೆ ಎಂದು ಹೇಳಲು ಸಾಧ್ಯವಿಲ್ಲ
ಎಂದು ಅವರು ತಿಳಿಸಿದರು.
ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ. ಸುರ್ಜೇವಾಲಾ ಅವರಿಗೆ ನಾನು ಹೇಳಬೇಕಿದ್ದ ವಿಷಯ ಲಿಖಿತವಾಗಿ ತಿಳಿಸಿದ್ದೇನೆ. ಪಕ್ಷ ಸಂಘಟನೆ ಮಾಡಿ 2028ರಲ್ಲಿ ಸರ್ಕಾರ ಅಧಿಕಾರಕ್ಕೆ ಬರಬೇಕಿದೆ. ನಾನು ಗಮನಕ್ಕೆ ತಂದ ಅಂಶಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.
ಪಕ್ಷ ಸಂಘಟನೆಗೆ ಎರಡು ಅಂಶಗಳು ಹೇಳಿದ್ದೇನೆ. ಚುನಾವಣೆಯಲ್ಲಿ ಗೆಲ್ಲುಲು ಸಾಧ್ಯವಾಗದ ಕೆಳ ಸಮುದಾಯದ ನಾಯಕರಿಗೆ ಅವಕಾಶ ನೀಡಬೇಕು. ಇದರಿಂದ ಪಕ್ಷಕ್ಕೆ ಕೆಳ ಸಮುದಾಯದ ಬೆಂಬಲ ಸಿಗುತ್ತೆ ಎಂದು ಹೇಳಿದ್ದಾರೆ.