ಮಂಡ್ಯ ಕ್ರೀಡಾಂಗಣಗಳಿಗೆ ಆಗಮಿಸುವ ಸಾರ್ವಜನಿಕರಿಗೆ ಹಾಗೂ ಕ್ರೀಡಾಭ್ಯಾಸ ನಡೆಸುವ ಕ್ರೀಡಾಪಟುಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಯಾವುದೇ ರೀತಿಯ ಕೊರತೆ ಉಂಟಾಗಬಾರದು. ಜೆಲ್ಲೆಯ ಎಲ್ಲ ಕ್ರೀಡಾಂಗಣಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ವ್ಯವಸ್ಥೆ ಮಾಡಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಕ್ರೀಡಾಂಗಣಗಳ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯವಾಗಿ ಕ್ರೀಡಾಂಗಣ ಹಾಗೂ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ವಹಿಸಿ ಎಂದರು.
ಜಿಲ್ಲೆಯ ಕ್ರೀಡಾಂಗಣದಲ್ಲಿ ಪ್ರತ್ಯೇಕ ಕಬಡ್ಡಿ, ಬ್ಯಾಸ್ಕೆಟ್ ಬಾಲ್, ಶೆಟಲ್ ಕಾಕ್ ಹಾಗೂ ವಾಲಿಬಾಲ್ ಅಂಕಣಗಳನ್ನು ನಿರ್ಮಿಸುತ್ತಿದ್ದು, ಕ್ರೀಡಾಪಟುಗಳಿಗೆ ವಸ್ತ್ರ ಬದಲಾಯಿಸಲು ಅನುಕೂಲವಾಗುವಂತೆ ಸುವ್ಯವಸ್ಥಿತವಾದ ವಸ್ತ್ರ ಬದಲಾಯಿಸುವ ಕೊಠಡಿಗಳನ್ನು ನಿರ್ಮಿಸಿ ಎಂದು ತಿಳಿಸಿದರು.
ಕ್ರೀಡಾಂಗಣಗಳಲ್ಲಿ ಪ್ಲಾಸ್ಟಿಕ್ ಬಿಸಾಡುವುದು, ಕಸಗಳ ವಿಲೇವಾರಿಯಾಗದೆ ಇರುವುದು ಕಂಡು ಬಂದಿದ್ದು, ಸಾರ್ವಜನಿಕರಲ್ಲಿ ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಮತ್ತು ಕಸಗಳ ವಿಲೇವಾರಿಯಾಗದೆ ಇರುವುದು ಕಂಡುಬAದಲ್ಲಿ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿಯವರು ಮಾತನಾಡಿ ಜಿಲ್ಲೆಯಲ್ಲಿನ ಕ್ರೀಡಾಂಗಣಗಳಲ್ಲಿ ಕ್ರೀಡಾಭ್ಯಾಸ ಮಾಡುವ ಕ್ರೀಡಾಪಟುಗಳಿಗೆ ಏನಾದರೂ ಸಮಸ್ಯೆಗಳು ಹಾಗೂ ಮೂಲ ಸೌಕರ್ಯಗಳಲ್ಲಿ ಕೊರತೆ ಉಂಟಾಗುತಿದೆಯೇ ಎಂದು ತಿಳಿಯಲು ಜಿಲ್ಲೆಯ ಕ್ರೀಡಾಪಟುಗಳನ್ನು ಒಳಗೊಂಡAತೆ ಮುಂದಿನ ದಿನಗಳಲ್ಲಿ ಸಭೆಯನ್ನು ಆಯೋಜಿಸಿ ಎಂದು ಸಲಹೆ ನೀಡಿದರು.
ಕ್ರೀಡಾಂಗಣಗಳಲ್ಲಿ ವ್ಯಾಯಾಮ ಮಾಡುವವರಿಗಾಗಿ, ಕ್ರೀಡಾಪಟುಗಳಿಗಾಗಿ, ಸಾರ್ವಜನಿಕರಿಗಾಗಿ ಹಾಗೂ ಮಕ್ಕಳಿಗಾಗಿ ಅರೋಗ್ಯಕರವಾದ ತಂಪುಪಾನೀಯ, ಹಣ್ಣುಗಳನ್ನು ಒದಗಿಸಲು ಹಾಗೂ ಮಾರಾಟ ಮಾಡಲು ಪ್ರತ್ಯೇಕ ಸ್ಥಳದ ವ್ಯವಸ್ಥ ಮಾಡಿ ಎಂದರು.
ಸಭೆಯಲ್ಲಿ ಯುವಜನ ಸೇವಾ ಹಾಗೂ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಓಂ ಪ್ರಕಾಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವರಾಮೇಗೌಡ, ನೆಹರು ಯುವ ಕೇಂದ್ರದ ಮುಖ್ಯ ಲೆಕ್ಕಾಧಿಕಾರಿ ವಿ.ರವಿಚಂದ್ರನ್, ನಿರ್ಮಿತಿ ಕೇಂದ್ರದ ಅಧಿಕಾರಿ ಜಯಪ್ರಕಾಶ್, ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣಾಧಿಕಾರಿ ಲಿಂಗರಾಜು, ನಗರ ಸಭೆಯ ಕಾರ್ಯಪಾಲಕ ಅಭಿಯಂತರ ರವಿಕುಮಾರ್ ಉಪಸ್ಥಿತರಿದ್ದರು.














