ಹೈದರಾಬಾದ್: ರಾಜ್ಯ ಬಿಜೆಪಿ ಅಧ್ಯಕ್ಷ ಮತ್ತು ಸಂಸದ ಬಂಡಿ ಸಂಜಯ್ ಕುಮಾರ್ ಅವರನ್ನು ಬುಧವಾರ ತಡರಾತ್ರಿ ಕರೀಂನಗರದ ಅವರ ನಿವಾಸದಿಂದ ವಶಕ್ಕೆ ಪಡೆಯಲಾಗಿದೆ.
ಕರೀಂನಗರದಲ್ಲಿರುವ ಸಂಸದರ ನಿವಾಸಕ್ಕೆ ಆಗಮಿಸಿದ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡರು.
ಬಂಡಿ ಸಂಜಯ್ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಪೊಲೀಸರನ್ನು ತಡೆಯಲು ಯತ್ನಿಸಿದ್ದರಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಏ.8ರಂದು ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣಕ್ಕೆ ಭೇಟಿ ನೀಡಲಿದ್ದು, ಸಿಕಂದರಾಬಾದ್ನಿಂದ ತಿರುಪತಿಗೆ ವಂದೇ ಭಾರತ್ ಎಕ್ಸ್’ಪ್ರೆಸ್ ರೈಲನ್ನು ಉದ್ಘಾಟಿಸುವ ಜೊತೆಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದಕ್ಕೂ ಮುನ್ನ ಸಂಜಯ್ ಕುಮಾರ್ ಅವರನ್ನು ಬಂಧಿಸಿರುವುದಕ್ಕೆ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರು ಖಂಡನೆ ವ್ಯಕ್ತಪಡಿಸಿದ್ದಾರೆ.
ಸಂಜಯ್ ಕುಮಾರ್ ಬಂಧನದ ವೇಳೆ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಅವರನ್ನು ನಲಗೊಂಡ ಜಿಲ್ಲೆಯ ಬೊಮ್ಮಲ ರಾಮರಾಮ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.
ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಅವರನ್ನು ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೇಮೇಂದ್ರ ರೆಡ್ಡಿ ಕಿಡಿಕಾರಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಕೆಸಿಆರ್ ಸರ್ಕಾರದ ವಿರುದ್ಧ ಧ್ವನಿ ಎತ್ತುತ್ತಿರುವುದು ಈ ಕ್ರಮದ ಹಿಂದಿನ ಕಾರಣ. ಇದೆಲ್ಲವೂ ‘ಪ್ರಜಾಪ್ರಭುತ್ವ’ಕ್ಕೆ ವಿರುದ್ಧವಾಗಿದೆ ಎಂದು ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
ಬಂಡಿ ಸಂಜಯ್ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಪೊಲೀಸರ ಕ್ರಮ ಖಂಡಿಸಿ, ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.














