ಮನೆ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ: ಗಡಿ ರಾಜ್ಯಗಳ ಜಿಲ್ಲೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಸಭೆ

ವಿಧಾನಸಭಾ ಚುನಾವಣೆ ಹಿನ್ನೆಲೆ: ಗಡಿ ರಾಜ್ಯಗಳ ಜಿಲ್ಲೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಸಭೆ

0

ಮೈಸೂರು: ಮುಂಬರಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣಾ ವೇಳೆ ಕಟ್ಟುನಿಟ್ಟಾಗಿ ಮಾದರಿ ನೀತಿ ಸಂಹಿತೆ ಅನುಷ್ಠಾನ ಮಾಡುವ ಸಂಬಂಧ ಮೈಸೂರು ಜಿಲ್ಲೆಯ ಗಡಿ ಭಾಗಗಳಲ್ಲಿ ಹೊಂದಿಕೊಂಡಿರುವ ಹೊರ ರಾಜ್ಯ ಜಿಲ್ಲೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರು ವಚ್ರ್ಯುವಲ್ ಮೂಲಕ ಸಭೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ  ಜಿಲ್ಲೆಯ ಅಧಿಕಾರಿಗಳು ಹಾಗೂ ಗಡಿ ವ್ಯಾಪ್ತಿಯಲ್ಲಿ ಬರುವ ಅಂತರರಾಜ್ಯ ಕೇರಳದ ವೈನಾಡು ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ವರ್ಚುವೆಲ್  ಮೂಲಕ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ ಕೆ. ವಿ. ರಾಜೇಂದ್ರ ಅವರು ಬರಲಿರುವ ವಿಧಾನಸಭಾ ಚುನಾವಣೆಯನ್ನು ನ್ಯಾಯಸಮ್ಮತ, ಪಾರದರ್ಶಕ ಹಾಗೂ ಶಾತಿಯುತ ಮತದಾನಕ್ಕೆ ಅವಕಾಶ ಕಲ್ಪಿಸಲು ಕಟ್ಟುನಿಟ್ಟಾಗಿ ಮಾದರಿ ನೀತಿ ಸಂಹಿತೆ ಅನುಷ್ಠಾನಕ್ಕೆ ಕೈ ಜೋಡಿಸುವಂತೆ ತಿಳಿಸಿದರು.

ಮೈಸೂರು ಜಿಲ್ಲೆಯು ಕೇರಳ ರಾಜ್ಯದೊಂದಿಗೆ  ಗಡಿ ಪ್ರದೇಶವನ್ನು  ಹೊಂದಿದೆ. ಗಡಿ ಭಾಗದಲ್ಲಿ ಚೆಕ್‍ ಪೋಸ್ಟ್‍ ಗಳನ್ನು ಗುರುತಿಸಲಾಗಿದ್ದು, ಇದಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಗಡಿ ಭಾಗಗಳ ಚೆಕ್‍ಪೋಸ್ಟ್‍ಗಳಲ್ಲಿ ರಾಜ್ಯಕ್ಕೆ ಬರುವ ಹಾಗೂ ಇಲ್ಲಿಂದ ಹೊರ ಹೋಗುವ ವಾಹನಗಳ ಮೇಲೆ ನಿಗಾ ಇಡಬೇಕಾಗುತ್ತದೆ. ಇದಕ್ಕಾಗಿ ಗಡಿ ಭಾಗದ ರಾಜ್ಯಗಳ ಗಡಿ ಜಿಲ್ಲೆಗಳಿಂದಲೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಚೆಕ್‍ ಪೋಸ್ಟ್‍ ಗಳಲ್ಲಿ 24*7 ಅವಧಿಯಲ್ಲಿಯೂ ಕಾರ್ಯ ನಿರ್ವಹಿಸಬೇಕಾಗುತ್ತದೆ. ಜಿಲ್ಲೆಯಿಂದ ನಿಯೋಜಿಸಲಾದ ನೋಡಲ್ ಅಧಿಕಾರಿಗಳೊಂದಿಗೆ ಹೊರ ಜಿಲ್ಲೆಗಳ ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ಕೈಗೊಳ್ಳಬೇಕಾಗುತ್ತದೆ. ನೇಮಕ ಮಾಡಲಾಗುವ ಹೊರ ಜಿಲ್ಲೆಗಳ ಅಧಿಕಾರಿಗಳ ಮಾಹಿತಿಯನ್ನು ಜಿಲ್ಲಾಡಳಿತ ಪೊಲೀಸ್, ಅಬಕಾರಿ ಇಲಾಖೆಗಳ ಕಚೇರಿಗೆ ಸಲ್ಲಿಸಬೇಕು ಎಂದರು.

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು, ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕಾಗುತ್ತದೆ. ಮತದಾನದ ಅವಧಿಯಲ್ಲಿ ಚೆಕ್‍ಪೋಸ್ಟ್‍ನಲ್ಲಿ ಕರ್ತವ್ಯ ನಿರತ ಅಧಿಕಾರಿಗಳು ಅತ್ಯಂತ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಬೇಕಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ಸಂಬಂಧ ಎಲ್ಲಾ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್  ಆಯುಕ್ತರಾದ ನಂದಿನಿ,ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜರಾಂ  ಹಾಗೂ ಕೇರಳ ರಾಜ್ಯದ ವೈನಾಡು ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್, ಅಬಕಾರಿ, ಅರಣ್ಯ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಹಿಂದಿನ ಲೇಖನಇವಿಎಂ ಮೂಲಕ ಮತದಾನ ಮಾಡುವುದರ ಬಗ್ಗೆ ಅರಿವಿರಲಿ: ಡಾ .ಕೆ .ವಿ ರಾಜೇಂದ್ರ
ಮುಂದಿನ ಲೇಖನಅಡುಗೆ ಅನಿಲ ದರ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್’ನಿಂದ ಪ್ರತಿಭಟನೆ