ಮೈಸೂರು: ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವುದು ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತು ಜಾಗೃತರಾಗಬೇಕು ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ತಿಳಿಸಿದರು.
ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಮದ್ಯ ಮತ್ತು ಮಾದಕವಸ್ತುಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯು ನಿರ್ಮಿಸಿರುವ ಜಾಗೃತಿ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸಾರ್ವಜನಿಕರು ಹಾಗೂ ವಿಶೇಷವಾಗಿ ದೇಶದ ಮುಂದಿನ ಜವಾಬ್ದಾರಿಯುತು ಪ್ರಜೆಗಳಾಗುವ ವಿದ್ಯಾರ್ಥಿಗಳಲ್ಲಿ ಮದ್ಯ ಮತ್ತು ಮಾದಕವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ, ಪ್ರಸ್ತುತ ಮುಖ್ಯವಾದ ವಿಶೇಷವಾಗಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಜಾಗೃತಿ ಮಳಿಗೆ ಬಹಳ ಅರ್ಥಪೂರ್ಣವಾಗಿ ಮೂಡಿಬಂದಿದೆ. ಮಳಿಗೆಯಲ್ಲಿ ಅನಾವರಣಗೊಳಿಸಿರುವ ವಿಷಯಗಳು, ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಸೇರಿದಂತೆ ಸಮಾಜದಲ್ಲಿ ಉತ್ತುಂಗ ಸ್ಥಾನದಲ್ಲಿರುವ ಗಣ್ಯರ ಜಾಗೃತಿ ಸಂದೇಶ, ಸಮಾಜದಲ್ಲಿ ಗಟ್ಟಿಯಾಗಿ ಬೇರೂರಲು ಪ್ರಯತ್ನಿಸುತ್ತಿರು ದುಷ್ಟ ಚಟಗಳನ್ನು ನಿಯಂತ್ರಿಸುವ ಸಂಬಂಧ ಒಳ್ಳೆಯ ಕಾರ್ಯವಾಗಿದೆ ಎಂದರು.
ಮೈಸೂರು ದಸರಾ ಪ್ರಯುಕ್ತ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಆಯೋಜಿಸಿರುವ ವಸ್ತು ಪ್ರದರ್ಶನವನ್ನು ವೀಕ್ಷಣೆಗೆ
ಬರುವ ಪ್ರತಿಯೊಬ್ಬರೂ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಮಳಿಗೆ ಭೇಟಿ ನೀಡಬೇಕು ಮತ್ತು ಇಲ್ಲಿ ಅನಾವರಣಗೊಳಿಸಿರುವ ಮಾಹಿತಿಯನ್ನು ತಮ್ಮ ಕುಟುಂಬಸ್ಥರು, ಸ್ನೇಹಿತರು, ನೆರೆಹೊರೆಯವರೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳುವುದರಿಂದ ಮದ್ಯ ಮತ್ತು ಮಾದಕವಸ್ತುಗಳಿಂದ ಕುಟುಂಬ ಮತ್ತು ಸಮಾಜದ ಮೇಲಾಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮಾಡಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಇದೇ ವೇಳೆ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ಅವರು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಪ್ರಕಟಿಸಿರುವ ಮದ್ಯ ಮತ್ತು ಮಾದಕವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಪುಸ್ತಕ ಮತ್ತು ಮಡಕೆ ಪತ್ರವನ್ನು ಬಿಡುಗಡೆ ಗೊಳಿಸಿದರು.
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿ ಮಹೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಹರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.