ಬೆಂಗಳೂರು: ನಾಳೆಯಿಂದ ಎರಡು ದಿನಗಳ ಕಾಲ (ಮೇ 20 ಮತ್ತು 21) ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (CET) ನಡೆಯಲಿದೆ.
ನಾಳೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ ಇರುವ ಹಿನ್ನೆಲೆ ಪರೀಕ್ಷಾರ್ಥಿಗಳಿಗೆ ಟ್ರಾಫಿಕ್ ಬಿಸಿ ತಟ್ಟುವ ಸಾಧ್ಯತೆ ಇರುವುದಿಂದ ಟ್ರಾಫಿಕ್ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ.ಸಲೀಂ ಪರೀಕ್ಷಾರ್ಥಿಗಳಿಗೆ ವಿಶೇಷ ಸೂಚನೆಯನ್ನು ನೀಡಿದ್ದಾರೆ.
ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಹಾಗು ಡಿಸಿಎಂ ಸೇರಿ ಸಚಿವರ ಪ್ರಮಾಣ ವಚನ ಇರಲಿದೆ. ಈ ಕಾರ್ಯಕ್ರಮಕ್ಕೆ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನರು ಅಗಮಿಸುವ ಸಾಧ್ಯತೆ ಇದೆ. ಇದರಿಂದ ನಗರದ ಹೃದಯಭಾಗದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ನಾಳೆ ನಡೆಯುವ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಬೆಳಗ್ಗೆ 9 ಗಂಟೆಯ ಒಳಗಾಗಿ ಪರೀಕ್ಷಾ ಕ್ಷೇಂದ್ರಕ್ಕೆ ತಲುಪಬೇಕು. ಇಲ್ಲವಾದರೆ ಟ್ರಾಫಿಕ್ ನಲ್ಲಿ ಸಿಲುಕುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ
ಮುಂಜಾಗ್ರತಾ ಕ್ರಮವಾಗಿ ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ಸಿಇಟಿ ಪರೀಕ್ಷೆ ನಡೆಯುವ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ ಮಾಡಿ ಟ್ರಾಫಿಕ್ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿರುವಂತೆ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳು ಸಹ ತೆರೆಯುವಂತೆ ಇಲ್ಲ.
ಈ ಬಾರಿ 2.6 ಲಕ್ಷ ವಿಧ್ಯಾರ್ಥಿಗಳು ರಾಜ್ಯದ ಒಟ್ಟು 592 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆಗಳನ್ನು ಬರೆಯಲಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು 122 ಸೆಂಟರ್ ಗಳಿವೆ. ಸುಮಾರು 23 ಸಾವಿರ ಸಿಬ್ಬಂದಿಗಳು ಪರೀಕ್ಷಾ ನಿರ್ವಹಣೆಯ ಕೆಲಸದಲ್ಲಿ ತೊಡಗಲಿದ್ದಾರೆ.