ಚೆನ್ನೈ : ಕರೂರಿನ ರ್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬೆನ್ನಲ್ಲೇ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಬಿಗಿ ಭದ್ರತೆ ಮಾಡಲಾಗಿದೆ.
ಚೆನ್ನೈನಲ್ಲಿರುವ ತಮ್ಮ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೇ ಸ್ಥಳೀಯ ಚೆನ್ನೈ ನಗರ ಮತ್ತು ಸಿಆರ್ಪಿಎಫ್ ಸಿಬ್ಬಂದಿಯನ್ನ ಮನೆಯ ಸುತ್ತಲೂ ನಿಯೋಜಿಸಲಾಗಿದೆ. ಕಾಲ್ತುಳಿತದಲ್ಲಿ ಸಾವು ನೋವು ಸಂಭವಿಸಿದ ಹಿನ್ನೆಲೆ ಶನಿವಾರ ಮಧ್ಯರಾತ್ರಿಯಿಂದಲೇ ವಿಜಯ್ ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ. ಬೆದರಿಕೆ ಬಂದ ಹಿನ್ನೆಲೆ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳಗಳಿಂದ ಮನೆಯ ಸುತ್ತಲೂ ಹಾಗೂ ಮನೆಯ ಒಳಾಂಗಣವನ್ನ ಪರಿಶೀಲನೆ ಮಾಡಲಾಗಿದೆ.
ತಮಿಳುನಾಡು ರಾಜಕೀಯ ಪ್ರವೇಶಿಸಿರುವ ನಟ ದಳಪತಿ ವಿಜಯ್ ಕರೂರು ಜಿಲ್ಲಾ ಕೇಂದ್ರದ 2 ಕಿ.ಮೀ. ದೂರದ ವೇಲುಸ್ವಾಮಿಪುರಂನ ಹೆದ್ದಾರಿಯಲ್ಲಿ ಚುನಾವಣಾ ರ್ಯಾಲಿ ಹಮ್ಮಿಕೊಂಡಿದ್ದರು. ಶನಿವಾರ ರಾತ್ರಿ 7:15 ಸುಮಾರಿಗೆ ಏಕಾಏಕಿ ಕಾಲ್ತುಳಿತ ಸಂಭವಿಸಿತ್ತು. ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.
ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಪೈಕಿ 2 ವರ್ಷದ ಮಗು ಸೇರಿ 10 ಮಕ್ಕಳು, 17 ಮಹಿಳೆಯರೂ ಸೇರಿದ್ದಾರೆ. ಮೃತ 28 ಜನ ಕರೂರು ಜಿಲ್ಲೆಯವರಾಗಿದ್ದರೆ ಉಳಿದವರು ಈರೋಡ್, ತಿರುಪುರ, ಧಾರಾಪುರಂ, ಸೇಲಂ ಜಿಲ್ಲೆಯವರಾಗಿದ್ದಾರೆ.
ಎಲ್ಲಾ 40 ಜನರ ದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿಯೇ ಸಾವನ್ನಪ್ಪಿರೋದು ಅಂತ ದೃಢವಾಗಿದೆ. ಶವಗಳ ರಾಶಿ ನೋಡಿದ ಸಚಿವ ಅನ್ಬಿಲ್ ಮಹೇಶ್ ಕಣ್ಣೀರು ಹಾಕಿದರು.
ಮೃತರಿಗೆ ವಿಜಯ್ 20 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಿಸಿದರೆ, ಸಿಎಂ ಸ್ಟಾಲಿನ್ ಅವರು ಮೃತರಿಗೆ 10 ಲಕ್ಷ ಹಾಗೂ ಗಾಯಾಳುಗಳಿಗೆ 1 ಲಕ್ಷ ಘೋಷಿಸಿದ್ದಾರೆ. ಪ್ರಧಾನಿ ಮೋದಿ ಕೂಡ ಮೃತರಿಗೆ 2 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ಪರಿಹಾರ ಪ್ರಕಟಿಸಿದ್ದಾರೆ. ತಮಿಳುನಾಡು ಬಿಜೆಪಿ ಕೂಡ 1 ಲಕ್ಷ ಪರಿಹಾರ ಪ್ರಕಟಿಸಿದೆ.
ಕರೂರು ಕಾಲ್ತುಳಿದಲ್ಲಿ ಗಾಯಾಗಳುಗಳ ಸಂಖ್ಯೆ 150ಕ್ಕೆ ಏರಿದೆ. ಕರೂರು, ತಿರುಚ್ಚಿ ಸರ್ಕಾರಿ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗ್ತಿದೆ. ದುರ್ಘಟನೆ ಹಿನ್ನೆಲೆಯಲ್ಲಿ ಇಡೀ ಕರೂರು ಜಿಲ್ಲೆಯಲ್ಲಿ ವ್ಯಾಪಾರ-ವಹಿವಾಟುಗಳನ್ನು ವರ್ತಕರೇ ಸ್ವಯಂಪ್ರೇರಿತರಾಗಿ ಬಂದ್ ಮಾಡಿದ್ದರು.
ಈ ಕಾಲ್ತುಳಿತ ಘಟನಾ ಸ್ಥಳವಾದ ಹೆದ್ದಾರಿಯಲ್ಲಿ ಚಪ್ಪಲಿ-ಶೂಗಳ ರಾಶಿ, ಹರಿದ ಬಟ್ಟೆಗಳು, ಮುರಿದು ಹೋಗಿರುವ ಮರದ ಕಂಬಗಳು, ನಜ್ಜುಗುಜ್ಜಾಗಿರುವ ನೀರಿನ ಬಾಟೆಲ್ಗಳ ರಾಶಿಯೇ ಕಂಡು ಬಂದಿತ್ತು ಎನ್ನಲಾಗಿದೆ.















