ಮನೆ ಸ್ಥಳೀಯ ಆರೋಗ್ಯ ಮತ್ತು ಆರ್ಥಿಕ ಅಭಿವೃದ್ಧಿಗೆ ಸಿರಿಧಾನ್ಯ ಸಹಕಾರಿ: ಡಾ.ಹೆಚ್‌.ಸಿ.ಮಹದೇವಪ್ಪ

ಆರೋಗ್ಯ ಮತ್ತು ಆರ್ಥಿಕ ಅಭಿವೃದ್ಧಿಗೆ ಸಿರಿಧಾನ್ಯ ಸಹಕಾರಿ: ಡಾ.ಹೆಚ್‌.ಸಿ.ಮಹದೇವಪ್ಪ

0

ಮೈಸೂರು: ಜನರ ಆರೋಗ್ಯ ಮತ್ತು ಆರ್ಥಿಕ ಅಭಿವೃದ್ಧಿಯ ಜೊತೆಗೆ ರೈತರೂ ಹೆಚ್ಚಿನ ಮಟ್ಟದಲ್ಲಿ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಾವಯವ ಕೃಷಿಯ ಸಿರಿಧಾನ್ಯ ಸಹಕಾರಿಯಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.

ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದ ವತಿಯಿಂದ ನಗರದ ನಂಜರಾಜ ಬಹದ್ಧೂರ್ ಛತ್ರದಲ್ಲಿ ಮಂಗಳವಾರ ಆಯೋಜಿಸಿದ್ದ ಮೂರು ದಿನಗಳ ‘ಸಿರಿಧಾನ್ಯ ಸಂಭ್ರಮಕ್ಕೆ’ ಚಾಲನೆ ನೀಡಿ ಮಾತನಾಡಿದ ಅವರು, ಮೈಸೂರು ಹಾಗೂ ಚಾಮರಾಜನಗರ ಭಾಗದ ರೈತರು ಹೆಚ್ಚಾಗಿ ಸಾವಯವ ಕೃಷಿಯಲ್ಲಿ ತೊಡಸಿಕೊಳ್ಳುವಂತಾಗಲಿ ಎಂದು ಹೇಳಿದರು.

ಭಾರತವು ಮೂಲತಃ ಕೃಷಿ ಪ್ರಧಾನ ರಾಷ್ಟ್ರವಾಗಿದ್ದು, ಗ್ರಾಮೀಣ ಭಾಗದ ಜನರ ಮೂಲ ಕಸುಬು ಕೃಷಿಯಾಗಿದೆ. ಅಗತ್ಯಕ್ಕೆ ತಕ್ಕಂತೆ ವೈಜ್ಞಾನಿಕವಾಗಿ ಆಹಾರ ಉತ್ಪಾದಿಸುವ ಜೊತೆಗೆ ಕೃಷಿಯು ರೈತರ ಕೈಯಲ್ಲೆ ಇರಬೇಕು. ಕೃಷಿ ಕೈಗಾರಿಕೆಯಾಗಿ ಪರಿವರ್ತನೆಯಾಗುತ್ತಿರುವಾಗ ರೈತರಿಗೆ ನೇರವಾಗಿ ಹೆಚ್ಚಿನ ಲಾಭ ದೊರಕಬೇಕು. ಕೈಗಾರಿಕೋದ್ಯಮಿಗಳ ಕೈಗೆ ಸಿಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.

ರೈತರು ಸಾವಯವ ಕೃಷಿಯಲ್ಲಿ ತೊಡಗಲು ರಾಜ್ಯ ಸರ್ಕಾರ ಹೆಕ್ಟೇರ್‌ಗೆ ಹತ್ತು ಸಾವಿರ ರೂ. ನೀಡುವ ಮೂಲಕ ಸಿರಿಧಾನ್ಯ ಉತ್ಪಾದನೆಯನ್ನು ಉತ್ತೇಜಿಸುತ್ತಿದೆ. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಕೃಷಿ ಸಚಿವರು ನಮ್ಮೆಲ್ಲರನ್ನೂ ಸೇರಿಸಿ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಆಚರಣೆಯನ್ನು ಮಾಡಿದ್ದರು ಎಂದು ತಿಳಿಸಿದರು‌.

ಕೊಲಂಬಸ್ ಭಾರತಕ್ಕೆ ಬರುವ ಮುನ್ನವೇ ಬಣ್ಣದ ಜೋಳ ಬೆಳೆಯಲಾಗುತ್ತಿತ್ತು ಎಂಬ ಮಾಹಿತಿ ಇದೆ. ರಾಸಯನಿಕ ಗೊಬ್ಬರ ಬಳಸದೇ ಮಣ್ಣಿನ ಫಲವತ್ತತೆ ಕಾಪಾಡುವ ಸಾವಯವ ಕೃಷಿಗೆ ನಾವೆಲ್ಲರೂ ಬೆಂಬಲ ಕೊಡಬೇಕು ಎಂದರು.

ನಟಿ, ರಂಗಕರ್ಮಿ ಅಕ್ಷತಾ ಪಾಂಡವಪುರ ಅವರು ಪೌಷ್ಠಿಕ ಪಾಕ ಪುಸ್ತಕವನ್ನು ಲೋಕಾರ್ಪಣೆ ಮಾಡಿದರು. ಹಾವೇರಿಯ ಸಿರಿಧಾನ್ಯ ಸಂರಕ್ಷಕ ವೀರಭದ್ರಯ್ಯ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ದೇವಧಾನ್ಯ ರೈತ ಉತ್ಪಾದಕರ ಕಂಪನಿ ನಿರ್ದೇಶಕಿ ಸಾವಿತ್ರಿ ಕೊಡ್ಲಿ, ಸಹಜ ಸಮೃದ್ಧ ಸಂಸ್ಥೆಯ ನಿರ್ದೇಶಕ ಜಿ.ಕೃಷ್ಣಪ್ರಸಾದ್ ಸೇರಿದಂತೆ ಮುಂತಾದವರು ಹಾಜರಿದ್ದರು.

ಹಿಂದಿನ ಲೇಖನಜಿಲ್ಲಾಮಟ್ಟದಲ್ಲಿ ಅರ್ಥಪೂರ್ಣವಾಗಿ ಜಯಂತಿಗಳ ಆಚರಣೆ: ಆರ್. ಲೋಕನಾಥ್
ಮುಂದಿನ ಲೇಖನಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ 33 ಪ್ಯೂನ್, ಪ್ರೊಸೆಸ್ ಸರ್ವರ್ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ