ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಓರ್ವ ಮೃತಪಟ್ಟಿದ್ದಾನೆ. ಗುಂಡ್ಲುಪೇಟೆಯ ಹಂಗಳ ರಸ್ತೆಯಲ್ಲಿ ಘಟನೆ ನಡೆದಿದೆ.
ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಗಣೇಶ್ (23) ಎಂಬಾತ ಮೃತಪಟ್ಟ ಬೈಕ್ ಸವಾರ.
ಈತನ ಸ್ನೇಹಿತ ಅಪಘಾತದಿಂದ ಪಾರಾಗಿದ್ದಾನೆ. ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಹಿಂಬದಿ ಸವಾರ ಮೂತ್ರ ವಿಸರ್ಜನೆಗೆಂದು ರಸ್ತೆ ಪಕ್ಕಕ್ಕೆ ತೆರಳಿದ್ದ. ಇದೇ ವೇಳೆ ಎದುರಿನಿಂದ ಬಂದ ಕೇರಳ ಮೂಲದ ಕಾರು ನಿಂತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ.
ತಲೆಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಬೈಕ್ನಲ್ಲಿ ಕುಳಿತಿದ್ದ ಸವಾರ ಗಣೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೂತ್ರ ವಿಸರ್ಜನೆಗೆ ತೆರಳಿದ್ದ ಈತನ ಸ್ನೇಹಿತ ಅವಘಡದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಗುಂಡ್ಲುಪೇಟೆ ಠಾಣೆ ಪೊಲೀಸರು ಕಾರು, ಬೈಕ್ ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.