ಬೆಳಗಾವಿ: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮವು ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮವಾಗಿರಲಿದೆ ಎಂದು ಬೆಳಗಾವಿಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಹೇಳಿದರು.
1924ರಲ್ಲಿ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದಾಗ ಜವಹಾರ್ ಲಾಲ್ ನೆಹರು ಹಾಗೂ ಕರ್ನಾಟಕದವರಾದ ಗಂಗಾಧರ ದೇಶಪಾಂಡೆ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಅವರಿಬ್ಬರು ಸೇರಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸಿ ಕಾಂಗ್ರೆಸ್ ಅಧ್ಯಕ್ಷರಾಗುವಂತೆ ಮಾಡಿದರು. ಇಲ್ಲಿಂದ ಗಾಂಧಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದರು. 2023ರ ಚುನಾವಣೆ ಸಮಯದಲ್ಲಿ ಇದೇ ಜಾಗದಿಂದ ಪ್ರಜಾಧ್ವನಿ ಯಾತ್ರೆ ಆರಂಭಿಸಿ ನಮ್ಮ ಹೋರಾಟ ಮಾಡಿದೆವು. ನಂತರ ರಾಜ್ಯದಲ್ಲಿ 136 ಕ್ಷೇತ್ರಗಳನ್ನು ಗೆದ್ದು ಸುಭದ್ರ ಸರ್ಕಾರ ಸ್ಥಾಪಿಸಿದೆವು ಎಂದು ಹೇಳಿದರು.
ಮತ್ತೆ ಇದೇ ಭೂಮಿಯಿಂದ ದೇಶ ಹಾಗೂ ರಾಜ್ಯವನ್ನು ಯಾವ ದಿಕ್ಕಿನಲ್ಲಿ ಕೊಂಡೊಯ್ಯಬೇಕು ಎಂದು ತೀರ್ಮಾನ ಮಾಡಲು ಈ ಕಾರ್ಯಕ್ರಮ ಮಾಡಲಾಗುತ್ತಿದೆ. ಈಗಿನ ಕಾಲಘಟ್ಟದಲ್ಲಿ ದೇಶ ಹಾಗೂ ರಾಜ್ಯ ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಿ ಯಾವ ರೀತಿ ಹೋರಾಟ ಮಾಡಬೇಕು ಎಂಬುದನ್ನು ದೇಶದ ಎಲ್ಲಾ ಪ್ರಮುಖ ನಾಯಕರು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಲಿದ್ದಾರೆ ಎಂದರು.
ಸುವರ್ಣ ಸೌಧದ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷಕ್ಕೂ ಆಹ್ವಾನವಿದೆ. ವಿರೋಧ ಪಕ್ಷಗಳ ನಾಯಕರು, ಸಂಸದರು, ಉಭಯ ಸದನಗಳ ಸಭಾಧ್ಯಕ್ಷರು ಹಾಗೂ ಸಭಾಪತಿಗಳು, ಎಲ್ಲಾ ಪಕ್ಷಗಳ ಶಾಸಕರು ಹಾಗೂ ಪರಿಷತ್ ಸದಸ್ಯರು ಸೇರಿ ಎಲ್ಲಾ ಪಕ್ಷಗಳಿಗೂ ಆಹ್ವಾನ ನೀಡಲಾಗುವುದು. ಇದು ಸಂಪೂರ್ಣ ಸರ್ಕಾರಿ ಕಾರ್ಯಕ್ರಮ. ಭದ್ರತಾ ದೃಷ್ಟಿಯಿಂದ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಆಹ್ವಾನ ಇಲ್ಲ. ಬೆಳಗಾವಿಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಇತರೆ ವಿಶೇಷ ಅತಿಥಿಗಳಿಗೆ ಆಹ್ವಾನ ನೀಡಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದರು.














