ಮನೆ ರಾಜ್ಯ ಕಾವೇರಿ ನದಿಗೆ ಕಲುಷಿತ ನೀರು: ಅಧ್ಯಯನಕ್ಕೆ ಸಮಿತಿ ರಚಿಸಿ ಸರ್ಕಾರ ಆದೇಶ

ಕಾವೇರಿ ನದಿಗೆ ಕಲುಷಿತ ನೀರು: ಅಧ್ಯಯನಕ್ಕೆ ಸಮಿತಿ ರಚಿಸಿ ಸರ್ಕಾರ ಆದೇಶ

0

ಬೆಂಗಳೂರು:ರಾಜ್ಯದ ಜೀವನದಿ ಕಾವೇರಿ ನದಿಗೆ ಒಳಚರಂಡಿ ನೀರು, ಘನ ತ್ಯಾಜ್ಯ,ಕೈಗಾರಿಕ ತ್ಯಾಜ್ಯ ಹಾಗೂ ಇತರೆ ಸ್ವರೂಪದ ಮಲಿನಕಾರಕಗಳು ಸೇರ್ಪಡೆಗೊಂಡು ನೀರು ಕಲುಷಿತವಾಗಿ ನೈಸರ್ಗಿಕ ಗುಣ ಕಳೆದುಕೊಂಡು ಮಾಲಿನ್ಯ ಉಂಟಾಗುತ್ತಿರುವುದನ್ನು ಹಾಗೂ ನಾಗರಿಕರು ಮತ್ತು ಜಲಚರಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದರ ಬಗ್ಗೆ ರಾಜ್ಯ ಸರಕಾರಕ್ಕೆ ಶಾಸಕರಾದ ದಿನೇಶ್ ಗೂಳಿಗೌಡ ಪತ್ರ ಬರೆದಿದ್ದರು.

Join Our Whatsapp Group

ಈ ಬೆನ್ನಲ್ಲೇ ಪೂರಕ ಕ್ರಮ ಕೈಗೊಂಡಿರುವ ರಾಜ್ಯ ಸರಕಾರ, ತುರ್ತು ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಸಂಬಂಧಪಟ್ಟ ಇಲಾಖೆಗಳ 9 ಮಂದಿ ತಜ್ಞರನ್ನೊಳಗೊಂಡ ಸಮಿತಿಯನ್ನು ರಚಿಸಿ ಆದೇಶಿಸಿದೆ.
ಕಾವೇರಿ ನದಿ ನೀರು ಕಲುಷಿತಗೊಳ್ಳುತ್ತಿರುವ ಬಗ್ಗೆ ಶಾಸಕರಾದ ದಿನೇಶ್ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆ ಅವರಿಗೆ ಪತ್ರ ಬರೆದು ಸಮಸ್ಯೆಯ ತೀವ್ರತೆಯನ್ನು ವಿವರಿಸಿದ್ದರು. ಈಗ ಅವರ ಸೂಚನೆ ಮೇರೆಗೆ ಸಮಿತಿಯನ್ನು ರಚನೆ ಮಾಡಿ ಆದೇಶಿಸಲಾಗಿದೆ.
ಕಾವೇರಿ ನದಿಗೆ ಒಳಚರಂಡಿ ನೀರು, ಘನ ತ್ಯಾಜ್ಯ, ಕೈಗಾರಿಕೆ ತ್ಯಾಜ್ಯ ಹಾಗೂ ಇತರೆ ಸ್ವರೂಪದ ಮಲಿನಕಾರಕಗಳು ಸೇರ್ಪಡೆಗೊಂಡು ನೀರು ಕಲುಷಿತವಾಗಿ ಪರಿಸರಕ್ಕೆ ಆಗಿರುವ ಅನಾಹುತದ ತಡೆಯ ಬಗ್ಗೆ ಪರಿಶೀಲಿಸಿ‌, 10 ದಿನಗಳ ಒಳಗಾಗಿ ವರದಿ ಸಲ್ಲಿಸಲು ರಚಿಸಲಾದ ತಜ್ಞರ ಸಮಿತಿಗೆ ಅರಣ್ಯ ಇಲಾಖೆ ಸೂಚನೆ ನೀಡಿದೆ.
ಈ ಆದೇಶ ತಲುಪಿದ 10 ದಿನಗಳ ಒಳಗಾಗಿ ಸಮಿತಿಯು ಸರಕಾರಕ್ಕೆ ವರದಿ ಸಲ್ಲಿಸಬೇಕು. ಈ ವರದಿಯನ್ನು ಸರಕಾರಕ್ಕೆ ಸಲ್ಲಿಸಿದ ದಿನದಂದು ಸಮಿತಿಯ ಕಾರ್ಯಾವಧಿ ಮುಕ್ತಾಯಗೊಳ್ಳುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಸಚಿವರು, ಸರಕಾರಕ್ಕೆ ಅಭಿನಂದನೆ :
ನಮ್ಮ ರಾಜ್ಯ ಸರಕಾರವು ಈ ನೆಲ, ಜಲ, ರೈತರ, ನಾಗರಿಕರ ರಕ್ಷಣೆಗೆ ಸದಾ ಒಂದು ಹೆಜ್ಜೆ ಮುಂದೆ ಇರುತ್ತದೆ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ. ಜೀವನದಿ ಕಾವೇರಿ ಉಳಿವಿಗಾಗಿ ಈಗ ಸಮಿತಿಯನ್ನು ರಚನೆ ಮಾಡಿರುವುದು ಅಭಿನಂದನೀಯ ಕ್ರಮವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ. ಪಾಟೀಲ್, ಈಶ್ವರ್ ಖಂಡ್ರೆ ಅವರಿಗೆ ಧನ್ಯವಾದಗಳನ್ನು ಹೇಳಬಯಸುತ್ತೇನೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಹಿಂದಿನ ಲೇಖನಲೋಕ ಅದಾಲತ್‌: ಆಸ್ತಿ ತೆರಿಗೆ ಪಾವತಿ ಮಾಡಿದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ಅವಕಾಶ ಜುಲೈ 31ರವರೆಗೆ ವಿಸ್ತರಣೆ
ಮುಂದಿನ ಲೇಖನರಾಜ್ಯ, ದೇಶ ಮೊದಲು ಎಂಬ ನಿಷ್ಠೆಯಿಂದ ದುಡಿಯಿರಿ: ಕೆ.ಜೆ. ಜಾರ್ಜ್‌