ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದ ಹೂಗ್ಯಂ ವಲಯದಲ್ಲಿ ಸಂಭವಿಸಿದ ಐದು ಹುಲಿಗಳ ಸಾವಿನ ಘಟನೆ ಅತೀವ ನೋವು ತಂದಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಟ್ವೀಟ್ ಮಾಡಿದ್ದಾರೆ.ಒಂದು ದಿನದಲ್ಲೇ 5 ಹುಲಿಗಳು ಸಾವಿಗೀಡಾಗಿರುವುದು ಹೃದಯ ವಿದ್ರಾವಕ ಘಟನೆ.ಈ ದುರ್ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಈ ಘಟನೆ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿಷಪ್ರಾಶನದಿಂದ ಸಾವನ್ನಪ್ಪಿದ್ದ ಲಕ್ಷಣಗಳು ತಜ್ಞರಿಂದ ವ್ಯಕ್ತವಾಗಿವೆ. ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರ (NTCA) ಅಧಿಕಾರಿಗಳು, ವನ್ಯಜೀವಿ ತಜ್ಞರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಈಗಾಗಲೇ ಆದೇಶ ನೀಡಲಾಗಿದೆ. ಮರಣೋತ್ತರ ಪರೀಕ್ಷೆ ನೆರವೇರಿದ್ದು, ಪ್ರೋಟೋಕಾಲ್ ಪ್ರಕಾರ ಹುಲಿಗಳ ಅಂತಿಮ ಸಂಸ್ಕಾರವೂ ಆಗಿದೆ.ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಇನ್ನಷ್ಟು ಕ್ರಮ ಕೈಗೊಳ್ಳಲಾಗುವುದು ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ.
ಇನ್ನು ವನ್ಯಜೀವಿಗಳ ಸಂರಕ್ಷಣೆಯತ್ತ ನಮ್ಮ ನಿಷ್ಠೆ ಬದ್ಧವಾಗಿದೆ. ಎಲ್ಲರ ಸಹಕಾರದಿಂದ ಅರಣ್ಯ ಸಂರಕ್ಷಣೆಯನ್ನು ಇನ್ನಷ್ಟು ಬಲಪಡಿಸೋಣ ಎಂದು ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.














