ಇಂದು ಎನಗೆ ಗೋವಿಂದ
ನಿನ್ನಯ ಪಾದಾರವಿಂದವ ತೋರೋ ಮುಕುಂದನೆ ||ಪ||
ಸುಂದರ ವದನನೆ ನಂದಗೋಪನ ಕಂದ
ಮಂದರೋದ್ಧಾರ ಆನಂದ ಇಂದಿರಾ ರಮಣ ||ಅಪ||
ನೊಂದೆನಯ್ಯ ಭವಬಂಧನದೊಳು ಸಿಲುಕಿ|
ಮುಂದೆ ದಾರಿ ಕಾಣದೆ ಕುಂದಿದೆ ಜಗದೊಳು|
ಕಂದನಂತೆಂದೆನ್ನ ಕುಂದುಗಳೆಣಿಸದೆ
ತಂದೆ ಕಾಯೊ ಕೃಷ್ಣ ಕಂದರ್ಪಜನಕನೆ ||೧||
ಮೂಢತನದಿ ಬಹು ಹೇಡಿ ಜೀವ ನಾನಾಗಿ
ದೃಢಭಕುತಿಯನು ಮಾಡಲಿಲ್ಲವೊ ಹರಿಯೆ|
ನೋಡಲಿಲ್ಲವೊ ನಿನ್ನ ಪಾಡಲಿಲ್ಲವೊ ಮಹಿಮೆ|
ಗಾಡಿಕಾರ ಕೃಷ್ಣ ಬೇಡಿ ಕೊಂಬೆನೊ ನಿನ್ನ ||೨||
ಧಾರುಣಿಯೊಳು ಭೂಭಾರಜೀವ ನಾನಾಗಿ
ದಾರಿತಪ್ಪಿ ನಡೆದೆ ಸೇರಿದೆ ಕುಜನರ|
ಆರೂ ಕಾಯುವರಿಲ್ಲ ಸೇರಿದೆ ನಿನಗಯ್ಯಾ
ಧೀರವೇಣುಗೋಪಾಲ ಪಾರುಗಾಣಿಸೊ ಹರಿಯೆ |೩|