ಬೀದರ್ : ಲಿಂಗೈಕ್ಯ ಚನ್ನಬಸವಪಟ್ಟದ್ದೇವರಿಂದಲೇ ಲೋಕನಾಯಕ ಎಂಬ ಬಿರುದು ಪಡೆದಿದ್ದ, ಶತಾಯುಷಿ ಭೀಮಣ್ಣ ಖಂಡ್ರೆ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಮನವಿ ಮಾಡಿಕೊಂಡಿದ್ದಾರೆ.
ಕಳೆದ ಒಂದು ವಾರದಿಂದ ವಯೋಸಹಜ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೀದರ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಮನೆಯಲ್ಲಿಯೇ ಅವರಿಗೆ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.
ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪೂಜ್ಯ ತಂದೆಯವರ ಕುರಿತಂತೆ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದು, ಯಾರೂ ವದಂತಿಗಳಿಗೆ ಕಿವಿಗೊಡಬಾರದು. ತಮ್ಮ ತಂದೆಯವರ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥಿಸಬೇಕು ಎಂದು ಕೇಳಿಕೊಂಡಿದ್ದಾರೆ.















