ಮನೆ ರಾಷ್ಟ್ರೀಯ ಛತ್ತೀಸ್‌ ಗಢ ಗರಿಯಾಬಂದ್ ​ನಲ್ಲಿ ಎನ್ ​ಕೌಂಟರ್​: 12 ನಕ್ಸಲರ ಹತ್ಯೆ

ಛತ್ತೀಸ್‌ ಗಢ ಗರಿಯಾಬಂದ್ ​ನಲ್ಲಿ ಎನ್ ​ಕೌಂಟರ್​: 12 ನಕ್ಸಲರ ಹತ್ಯೆ

0

ಭುವನೇಶ್ವರ್: ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 12 ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

Join Our Whatsapp Group

ಸೋಮವಾರದ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿತ್ತು. ಒಬ್ಬ ಕೋಬ್ರಾ ಜವಾನ್ ಗಾಯಗೊಂಡಿದ್ದರು.

ಛತ್ತೀಸ್‌ ಗಢ-ಒಡಿಶಾ ಗಡಿಯಲ್ಲಿರುವ ಮೈನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಮತ್ತು ಮಂಗಳವಾರ ಮುಂಜಾನೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ), ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಛತ್ತೀಸ್‌ಗಢದ ಕೋಬ್ರಾ ಮತ್ತು ಒಡಿಶಾದ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಯ ಭದ್ರತಾ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಒಟ್ಟು 10 ತಂಡಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು.

ಒಡಿಶಾದಲ್ಲಿ ನಕ್ಸಲರ ಮುಖ್ಯಸ್ಥನಾಗಿದ್ದ, ಜೈರಾಮ್ ಅಲಿಯಾಸ್ ಚಲಪತಿ ಕೂಡ ಹತ್ಯೆಯಾದವರಲ್ಲಿ ಸೇರಿದ್ದಾನೆ ಎನ್ನಲಾಗಿದೆ. ಈತನ ಪತ್ತೆಗೆ ಸರ್ಕಾರ 1 ಕೋಟಿ ರೂಪಾಯಿ ಬಹುಮಾನ ಘೋಷಿಸಿತ್ತು. ಅಲ್ಲದೆ, ಈ ಎನ್‌ಕೌಂಟರ್‌ನಲ್ಲಿ ಕುಖ್ಯಾತ ನಕ್ಸಲರಾದ ಮನೋಜ್ ಮತ್ತು ಗುಡ್ಡು ಕೂಡ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ

ಕುಳರಿಘಾಟ್ ಮೀಸಲು ಅರಣ್ಯದಲ್ಲಿ ಮಾವೋವಾದಿಗಳು ಇರುವ ಬಗ್ಗೆ ಗುಪ್ತಚರ ಇಲಾಖೆ ನೀಡಿದ ಖಚಿತ ಮಾಹಿತಿಯ ಆಧಾರದ ಮೇಲೆ ಜನವರಿ 19 ರ ರಾತ್ರಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆ ನಡೆದ ಸ್ಥಳ ಛತ್ತೀಸ್‌ಗಢ, ಒಡಿಶಾದ ನುವಾಪಾಡಾ ಜಿಲ್ಲೆಯ ಗಡಿಯಿಂದ ಕೇವಲ 5 ಕಿಮೀ ದೂರದಲ್ಲಿದೆ.

ಎನ್‌ ಕೌಂಟರ್ ನಡೆದ ಸ್ಥಳದಿಂದ ಆಟೋ-ಲೋಡಿಂಗ್ ರೈಫಲ್ ಸೇರಿದಂತೆ ದೊಡ್ಡ ಪ್ರಮಾಣದ ಬಂದೂಕುಗಳು, ಮದ್ದುಗುಂಡುಗಳು ಮತ್ತು ಐಇಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾವೋವಾದಿಗಳ ಸಾವುನೋವುಗಳ ಸಂಖ್ಯೆ ಹೆಚ್ಚಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.