ಮನೆ ರಾಷ್ಟ್ರೀಯ ದೆಹಲಿಯ ಗೋದಾಮಿನಲ್ಲಿ ಅಗ್ನಿ ದುರಂತ, ಮೂವರು ಸಜೀವದಹನ

ದೆಹಲಿಯ ಗೋದಾಮಿನಲ್ಲಿ ಅಗ್ನಿ ದುರಂತ, ಮೂವರು ಸಜೀವದಹನ

0

ನವದೆಹಲಿ : ದೆಹಲಿಯ ರೋಹಿಣಿ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಮಂಗೇರಾಮ್ ಪಾರ್ಕ್‌ನಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ, ಅಲ್ಲಿಯೇ ನಿರ್ಮಿಸಲಾಗಿದ್ದ ಗುಡಿಸಲುಗಳನ್ನು ಆಹುತಿ ಪಡೆದಿದೆ. ಈ ಘೋರ ಘಟನೆಯಲ್ಲಿ ಮಗುವೂ ಸೇರಿದಂತೆ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದಾರೆ.

ಬುದ್ಧ ವಿಹಾರ್ ಬಳಿಯ ಸುಮಾರು 400 ಚದರ ಗಜಗಳಷ್ಟು ವಿಸ್ತೀರ್ಣದ ಜಾಗದಲ್ಲಿ ಈ ಅನಾಹುತ ಸಂಭವಿಸಿದೆ. ಇಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿಡಲಾಗಿತ್ತು ಮತ್ತು ಅದರ ಪಕ್ಕದಲ್ಲೇ ಕಾರ್ಮಿಕರು ತಾತ್ಕಾಲಿಕ ಗುಡಿಸಲುಗಳನ್ನು ನಿರ್ಮಿಸಿಕೊಂಡಿದ್ದರು. ಬೆಳಗಿನ ಜಾವ ಸುಮಾರು 1.25 ರ ಸುಮಾರಿಗೆ ಎಲ್ಲರೂ ಗಾಢ ನಿದ್ರೆಯಲ್ಲಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ವಸ್ತುಗಳಿದ್ದ ಕಾರಣ ಜ್ವಾಲೆಗಳು ಕ್ಷಣಾರ್ಧದಲ್ಲಿ ವ್ಯಾಪಿಸಿ ಇಡೀ ಪ್ರದೇಶವನ್ನು ಆವರಿಸಿಕೊಂಡಿವೆ.

ಕಾರ್ಯಾಚರಣೆಗೆ ಅಡ್ಡಿಯಾದ ಕಿರಿದಾದ ರಸ್ತೆಗಳು ಬೆಂಕಿಯ ಸುದ್ದಿ ತಿಳಿಯುತ್ತಿದ್ದಂತೆಯೇ ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು. ಆದರೆ, ಈ ಪ್ರದೇಶದ ರಸ್ತೆಗಳು ಅತ್ಯಂತ ಕಿರಿದಾಗಿದ್ದರಿಂದ ದೊಡ್ಡ ವಾಹನಗಳು ಘಟನಾ ಸ್ಥಳವನ್ನು ತಲುಪಲು ಹರಸಾಹಸ ಪಡಬೇಕಾಯಿತು. ಅಗ್ನಿಶಾಮಕ ಅಧಿಕಾರಿ ಅಜಯ್ ಶರ್ಮಾ ನೇತೃತ್ವದಲ್ಲಿ ದೀರ್ಘಕಾಲದ ಕಾರ್ಯಾಚರಣೆಯ ನಂತರ ಬೆಂಕಿಯನ್ನು ಹತೋಟಿಗೆ ತರಲಾಯಿತು. ದುರದೃಷ್ಟವಶಾತ್, ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪುವಷ್ಟರಲ್ಲೇ ಮೂವರು ಪ್ರಾಣ ಕಳೆದುಕೊಂಡಿದ್ದರು.

ಸಾವನ್ನಪ್ಪಿದವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು, ಅವಶೇಷಗಳಡಿಯಿಂದ ಅವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. “ಈ ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸದ್ಯ ಬೆಂಕಿ ಸಂಪೂರ್ಣ ನಿಯಂತ್ರಣದಲ್ಲಿದೆ, ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ವಿಪತ್ತು ನಿರ್ವಹಣಾ ತಂಡಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿವೆ.