ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆಯಲ್ಲಿ ನಾಡದೇವತೆ ಚಾಮುಂಡಿ ಬೆಟ್ಟದಲ್ಲಿ ಸಡಗರ, ಸಂಭ್ರಮ ಮನೆ ಮಾಡಿದೆ. ಚಾಮುಂಡೇಶ್ವರಿ ದೇವಸ್ಥಾನವನ್ನು ವಿವಿಧ ಹೂವುಗಳಿಂದ ಅಲಂಕರಿಸಿದ್ದು, ಮುಂಜಾನೆಯಿಂದಲೇ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.
ರಾಜ್ಯ ಹಾಗೂ ಹೊರ ರಾಜ್ಯದಿಂದ ಸಾವಿರಾರು ಭಕ್ತಾಧಿಗಳು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ. ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಮುಂಜಾನೆಯಿಂದ ಅಭಿಷೇಕ ನೆರೆವೇರಿಸಿ ಪೂಜೆ ಸಲ್ಲಿಸಲಾಗುತ್ತಿದೆ ಎಂದು ದೇವಸ್ಥಾನದ ಪ್ರಮುಖ ಅರ್ಚಕರಾದ ಶಶಿಧರ್ ದೀಕ್ಷಿತ್ ತಿಳಿಸಿದ್ದಾರೆ.
ಈ ಮಧ್ಯೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಮುಂಡೇಶ್ವರಿ ಬೆಟ್ಟಕ್ಕೆ ಆಗಮಿಸಿ, ದೇವರ ದರ್ಶನ ಪಡೆದರು. ನಂತರ ಸರತಿ ಸಾಲಿನಲ್ಲಿ ನಿಂತ ಅಭಿಮಾನಿಗಳಿಗೆ ಹಸ್ತಲಾಘವ ಮಾಡಿದರು.
ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಬೆಟ್ಟದಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಕಿರಿದಾದ ಬೆಟ್ಟದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಬಾರದೆಂದು ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ. ಬೆಟ್ಟಕ್ಕೆ ಹೋಗಲು ಭಕ್ತರಿಗೆ ಜಿಲ್ಲಾಡಳಿತ 50 ಕೆಎಸ್ ಆರ್ ಟಿಸಿ ಬಸ್ಸಿನ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ.
ನಗರದ ಲಲಿತಮಹಲ್ ಹೆಲಿಪ್ಯಾಡ್ ಸಮೀಪದಿಂದ ಸಾರ್ವಜನಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಲಲಿತಾ ಮಹಲ್ ಪ್ಯಾಲೆಸ್ ಹೆಲಿಪ್ಯಾಡ್ ನಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ 300 ಮತ್ತು 50 ರೂಪಾಯಿ ಟಿಕೆಟ್ ಇರಲಿದೆ.