ಮನೆ ರಾಜಕೀಯ ಐದು ಗ್ಯಾರಂಟಿ ಜಾರಿ ಸರಕಾರದ ಜವಾಬ್ದಾರಿ: ಹೆಚ್.ಡಿ.ಕುಮಾರಸ್ವಾಮಿ

ಐದು ಗ್ಯಾರಂಟಿ ಜಾರಿ ಸರಕಾರದ ಜವಾಬ್ದಾರಿ: ಹೆಚ್.ಡಿ.ಕುಮಾರಸ್ವಾಮಿ

0

ಬೆಂಗಳೂರು: ಭರವಸೆ ನೀಡಿದ್ದೀರಿ, ಗೆದ್ದು ಅಧಿಕಾರ ಹಿಡಿದಿದ್ದೀರಿ. ಐದು ಗ್ಯಾರಂಟಿ ಜಾರಿ ಮಾಡುವುದು ನಿಮ್ಮ ಜವಾಬ್ದಾರಿ ಎಂದು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಚಾಟಿ ಬೀಸಿದ್ದಾರೆ.

Join Our Whatsapp Group

ಈ ಬಗ್ಗೆ ಟ್ವೀಟ್ ಮಾಡಿರುವ ಅವರು; ನೆಪ ಹೇಳದೆ ಗ್ಯಾರಂಟಿಗಳನ್ನು ಜಾರಿ ಮಾಡಿ ಎಂದು ಒತ್ತಾಯ ಮಾಡಿದ್ದಾರೆ.

ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ ‘ಗ್ಯಾರಂಟಿ ಬೇಡಿಕೆ’ಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ ರಾಜ್ಯ ಕಾಂಗ್ರೆಸ್ ಸರಕಾರದ ಜವಾಬ್ದಾರಿ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ದಿನನಿತ್ಯವೂ ಗ್ಯಾರಂಟಿಗಳ ಬಗ್ಗೆ ಜನರಲ್ಲಿ ನಿರೀಕ್ಷೆಯೂ ಮೇರೆ ಮೀರುತ್ತದೆ, ಆಕ್ರೋಶವೂ ಹೆಚ್ಚುತ್ತಿದೆ. ಜನಾಕ್ರೋಶಕ್ಕೆ ಸಬೂಬು ಸರಿಯಲ್ಲ. ಏಕೆಂದರೆ, ನಿರೀಕ್ಷೆ ಮೂಡಿಸಿದ್ದು ಇವರೇ. ಈಗ ಷರತ್ತು ನೆಪದಲ್ಲಿ ಜನರನ್ನು ಸತಾಯಿಸುವುದು ನ್ಯಾಯವಲ್ಲ.ಗ್ಯಾರಂಟಿಗಳ ಬಗ್ಗೆ ಮಾಧ್ಯಮಗಳಲ್ಲಿ ಅಬ್ಬರಿಸಿದ ಇವರೇ, ಈಗ ಮೀನಾಮೇಷ ಎಂದರೆ ಜನ ಒಪ್ಪುವರೇ? ಎಂದು ಮಾಜಿ ಮುಖ್ಯಮಂತ್ರಿ ಅವರು ಕೇಳಿದ್ದಾರೆ.

ನನಗೂ ಫ್ರೀ, ನಿನಗೂ ಫ್ರೀ, ಸರ್ವರಿಗೂ ಫ್ರೀ ಎಂದ ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ? ಅವರ ಅಕ್ಕಪಕ್ಕದವರ ಹೇಳಿಕೆಗಳನ್ನು ಜನರು ನಂಬುತ್ತಿಲ್ಲ. ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಹೇಳಲಿ, ಜನರಲ್ಲಿ ವಿಶ್ವಾಸ ಮೂಡಿಸಲಿ. ಮಾಧ್ಯಮಗಳಲ್ಲಿ ಕಾಂಗ್ರೆಸ್ ಕೊಟ್ಟ ‘ಗ್ಯಾರಂಟಿ ಜಾಹೀರಾತು’ಗಳೂ ಇನ್ನೂ ಜನಮಾನಸದಿಂದ ಮಾಸಿಲ್ಲ. ಅದೇ ರೀತಿ; ಸ್ವತಃ ಮುಖ್ಯಮಂತ್ರಿಗಳೇ ಜೂನ್ 1ಕ್ಕೆ ಜಾರಿ ಮಾಡುವ ಬಗ್ಗೆ ಜಾಹೀರಾತು ನೀಡಿ ಜನರಿಗೆ ಖಾತರಿ ಕೊಡಲಿ. ವಿಳಂಬದಿಂದ ಸರಕಾರದ ವಿಶ್ವಾಸಾರ್ಹತೆಗೆ ಪೆಟ್ಟು ಬೀಳುವುದೇ ಹೆಚ್ಚು. ಜನರಿಗೆ ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ ಎಂದು ಅವರು ಹೇಳಿದ್ದಾರೆ.

ಅದು ಬಿಟ್ಟು ‘ಕೆಲ ಸಚಿವರು, ಶಾಸಕ’ರನ್ನು ನನ್ನ ಮೇಲೆ ಛೂ ಬಿಟ್ಟರೆ ಪ್ರಯೋಜನವಿಲ್ಲ. ಅಂಥ ರಾಜಕಾರಣ ಉಪಯೋಗವೂ ಇಲ್ಲ. ಗ್ಯಾರಂಟಿಗಳ ಬಗ್ಗೆ ಜನಕ್ಕೆ ಬೆಟ್ಟದಷ್ಟು ನಿರೀಕ್ಷೆ ಇದೆ. ಜಾರಿ ಮಾಡಿ, ಅದರ ಹೊರತಾಗಿ ಈ  ಭರವಸೆಗಳೇ ಅಗಮ್ಯಗೋಚರವಾಗಿ ಗಮ್ಯವೇ ಇಲ್ಲದ ಆಡಳಿತ ಕೊಡುವುದು ಬೇಡ. ಇಷ್ಟೇ ನನ್ನ ಕಾಳಜಿ ಎಂದಿದ್ದಾರೆ ಅಲ್ಲದೆ, ‘ಗ್ಯಾರಂಟಿ ಜಾರಿ ಸರಕಾರದ ಜವಾಬ್ದಾರಿ’ ಎಂದು ಹ್ಯಾಷ್ ಟ್ಯಾಗ್ ಮಾಡಿದ್ದಾರೆ.