ನವದೆಹಲಿ : ರಾಜಕೀಯ ಪಕ್ಷಗಳು ಚುನಾವಣೆಗೆ ಮುನ್ನ ಪ್ರಕಟಿಸುವ ಉಚಿತ ಕೊಡುಗೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲು ಸಿದ್ಧ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಬಿಜೆಪಿ ನಾಯಕ ಮತ್ತು ಅರ್ಜಿದಾರರಾದ ಅಶ್ವಿನಿ ಉಪಾಧ್ಯಾಯ ಅವರು, ಮುಂಬರುವ ಹಲವಾರು ರಾಜ್ಯ ವಿಧಾನಸಭಾ ಚುನಾವಣೆಗಳು ನಡೆಯಲಿರುವುದರಿಂದ ಈ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ಕೋರಿದರು.
ಈ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಸೂರ್ಯ ಕಾಂತ್ ಮತ್ತು ನ್ಯಾ. ಜೋಯ್ಮಲ್ಯ ಬಾಗ್ಚಿ ನೇತೃತ್ವದ ಪೀಠವು ಈ ವಿಷಯವು ಪ್ರಮುಖ ಸಾರ್ವಜನಿಕ ಪ್ರಾಮುಖ್ಯತೆಯನ್ನು ಹೊಂದಿದೆ ಮತ್ತು ಇದನ್ನು ಮೂವರು ನ್ಯಾಯಾಧೀಶರ ಪೀಠವು ವಿಚಾರಣೆ ನಡೆಸಬೇಕು ಎಂದು ಹೇಳಿದೆ. ಈ ವಿಷಯವು ಗಂಭೀರ ಕಳವಳಗಳನ್ನು ಹುಟ್ಟುಹಾಕುತ್ತದೆ ಎಂದ ಸಿಜೆಐ ಮಾರ್ಚ್ವರೆಗೆ ಕಾಯಿರಿ ಎಂದು ಹೇಳಿದರು.
ಅರ್ಜಿಯಲ್ಲಿ ಏನಿದೆ? – ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಗಳಲ್ಲಿ ನೀಡಿದ ಭರವಸೆಗಳು ಚುನಾವಣಾ ದುಷ್ಕೃತ್ಯಕ್ಕೆ ಸಮನಾಗಿದೆ. ಮುಂದೆ 5 ವಿಧಾನಸಭಾ ಚುನಾವಣೆಗಳು ಬರಲಿವೆ. ಉಚಿತ ಘೋಷಣೆಗಳು ಭ್ರಷ್ಟ ಪದ್ದತಿಗಳಾಗಿದ್ದು ಇದು ರಾಜ್ಯದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಸೂರ್ಯ, ಚಂದ್ರನನ್ನು ಬಿಟ್ಟು ಉಳಿದೆಲ್ಲವನ್ನೂ ಕೊಡುವುದಾಗಿ ಪಕ್ಷಗಳು ಭರವಸೆ ನೀಡುತ್ತವೆ.
ಇದು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಮಾರಕವಾಗಿದ್ದು ಸಂವಿಧಾನಕ್ಕೂ ಹಾನಿಯುಂಟುಮಾಡುತ್ತದೆ. ಚುನಾವಣಾ ಪ್ರಣಾಳಿಕೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಮತ್ತು ಮತ್ತು ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶನಗಳನ್ನು ನೀಡುವಂತೆ ಕೋರಲಾಗಿದೆ. ಮುಂದೆ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯವ ಸಂದರ್ಭದಲ್ಲಿ ಈ ಅರ್ಜಿಯ ವಿಚಾರಣೆ ಭಾರೀ ಮಹತ್ವ ಪಡೆದಿದೆ.















