ಬೆಂಗಳೂರು (Bengaluru)- ಕೋವಿಡ್ (Covid) 4ನೇ ಅಲೆ ಎದುರಾಗುವ ಭೀತಿಯಿರುವುದರಿಂದ ಕೇಂದ್ರ ಸರ್ಕಾರ ಜಾಗ್ರತೆಯಾಗಿರಬೇಕೆಂದು ಸೂಚನೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಏ.27 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಇಡೀ ರಾಷ್ಟ್ರದಲ್ಲಿರುವ ಕೋವಿಡ್ ಪರಿಸ್ಥಿತಿ ಮತ್ತು ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಸಂವಾದ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ನಂತರ ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಸ್ಪಷ್ಟವಾದ ಸೂಚನೆಗಳನ್ನು ನೀಡುತ್ತೇವೆ. ಜನರು ಎಚ್ಚರಿಕೆಯಿಂದ ಇರಬೇಕು ಎಂದರು.
ಕಳೆದ ಎಂಟತ್ತು ದಿನಗಳಿಂದ ಅಲ್ಲಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದೆ. ವಿಶೇಷವಾಗಿ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹಿಂದಿನ ಮೂರು ಕೋವಿಡ್ ಅಲೆಗಳ ಸಂದರ್ಭಗಳಲ್ಲಿನ ಅನುಭವಗಳ ಆಧಾರದ ಮೇಲೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಸೂಕ್ತ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ. ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್ ಅವರು ಹಲವಾರು ಸೂಚನೆಗಳನ್ನು ನೀಡಿದ್ದಾರೆ ಎಂದು ಹೇಳಿದರು.