ಮನೆ ಸುದ್ದಿ ಜಾಲ ಲಿಂಗತ್ವ ಅಲ್ಪಸಂಖ್ಯಾತರು ಮುಖ್ಯವಾಹಿನಿಗೆ ಬರಬೇಕು: ಬಿ.ಆರ್. ಪೂರ್ಣಿಮಾ

ಲಿಂಗತ್ವ ಅಲ್ಪಸಂಖ್ಯಾತರು ಮುಖ್ಯವಾಹಿನಿಗೆ ಬರಬೇಕು: ಬಿ.ಆರ್. ಪೂರ್ಣಿಮಾ

0

ಮೈಸೂರು: ಮತದಾರರ ಗುರುತಿನ ಚೀಟಿ ಪಡೆದು, ಲಿಂಗತ್ವ ಅಲ್ಪ ಸಂಖ್ಯಾತರು ಮುಖ್ಯವಾಹಿನಿಗೆ ಬರಬೇಕು ಎಂದು ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ ಅವರು ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಿದ್ದ ಲಿಂಗತ್ವ ಅಲ್ಪ ಸಂಖ್ಯಾತರಿಗೆ ಮತದಾರರ ಜಾಗೃತಿ ಕಾರ್ಯಕ್ರಮದ ಸಭೆಯಲ್ಲಿ ಅವರು ಮಾತನಾಡಿದರು.

ಸರಿಯಾದ ಮಾಹಿತಿಯೊಂದಿಗೆ ಮತದಾರರ ಗುರುತಿನ ಚೀಟಿ ಪಡೆದರೆ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಇತರೆ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅವಕಾಶವಾಗುತ್ತದೆ. ಎಲ್ಲಾ ಸೌಲಭ್ಯಗಳನ್ನು ಪಡೆಯುವ ಮೂಲಕ ಮುಖ್ಯವಾಹಿನಿಗೆ ಬರಬೇಕೆಂದು ತಿಳಿಸಿದರು.

ಜಿಲ್ಲೆಯ ಎಲ್ಲಾ ಲಿಂಗತ್ವ ಅಲ್ಪ ಸಂಖ್ಯಾತರಿಗೂ ಮತದಾರರ ಚೀಟಿ ಕೊಡಿಸುವ ಉದ್ದೇಶದಿಂದ ಈ ಸಭೆ ಆಯೋಜಿಸಲಾಗಿದೆ. ಈಗಾಗಲೇ ಕೆಲವರು ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ. ಪಡೆಯದೇ ಇರುವವರು ಮತದಾರರ ಚೀಟಿ ಪಡೆಯಿರಿ, ಇದರಿಂದ ಸೂಕ್ತ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಅನುಕೂಲವಾಗುತ್ತದೆ. ಹಾಗಾಗಿ ಪ್ರತಿಯೊಬ್ಬರು ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ತಿಳಿಸಿದರು.

ಲಿಂಗತ್ವ ಅಲ್ಪ ಸಂಖ್ಯಾತರಿಗೂ ನರೇಗಾದಡಿ ಅವಕಾಶ:

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಲಿಂಗತ್ವ ಅಲ್ಪ ಸಂಖ್ಯಾತರಿಗೂ ಪ್ರತ್ಯೇಕ ಜಾಬ್ ಕಾರ್ಡ್ ನೀಡುವ ಮೂಲಕ ನರೇಗಾ ಕಾಮಗಾರಿಯಲ್ಲಿ ಕೆಲಸ ಮಾಡಿ ಕೂಲಿ ಪಡೆಯಬಹುದು. ಕೆಲಸದ ಸ್ಥಳದಲ್ಲಿ ಯಾವುದೇ ಬೇಧ-ಭಾವವಿಲ್ಲದೇ ದುಡಿಯಲು ಅವಕಾಶವಿದೆ. 309 ರೂ. ಕೂಲಿ ಮೊತ್ತ ನೀಡಲಾಗುತ್ತದೆ. ನರೇಗಾದಡಿ ದೊರಕುವ ವೈಯಕ್ತಿಕ ಕಾಮಗಾರಿಗಳ ಬಗ್ಗೆ ಮಾಹಿತಿಯನ್ನುಹಾಗೂ ತಮ್ಮ ಹತ್ತಿರದ ಗ್ರಾಪಂ ಗಳಿಗೆ ಭೇಟಿ  ನೀಡಿ ಜಾಬ್ ಕಾರ್ಡ್ ಪಡೆದು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಜಿಪಂ ಉಪಕಾರ್ಯದರ್ಶಿ (ಅಭಿವೃದ್ಧಿ) ಡಾ.ಎಂ.ಕೃಷ್ಣರಾಜು ತಿಳಿಸಿದರು.

ಸಮುದಾಯದ ಹಲವು ವಿವಿಧ ಬಗೆಯ ವಿಧಗಳ ಬಗ್ಗೆ ಲಿಖಿತವಾಗಿ ಸಲ್ಲಿಸಿದರೇ ಆ ಕುರಿತು ಪರಿಶೀಲಿಸಿ ಕ್ರಮವಹಿಸಲಾಗುವುದು. ಈ ಕುರಿತು ಸಂಬಂಧಪಟ್ಟವರಿಗೆ ತಿಳಿಸಲಾಗುವುದು ಎಂದರು.

ಸ್ವ-ಸಹಾಯ ಸಂಘಗಳಂತೆ ಲಿಂಗತ್ವ ಅಲ್ಪ ಸಂಖ್ಯಾತರ ಸಂಘ ನಿರ್ಮಿಸಿಕೊಳ್ಳಲು ಗ್ರಾಮೀಣ ಪ್ರದೇಶಗಳಲ್ಲಿ ಅವಕಾಶವಿದೆ. ಅಲ್ಲದೇ ಲಿಂಗತ್ವ ಅಲ್ಪ ಸಂಖ್ಯಾತರು ಸ್ವಾವಲಂಬಿ ಜೀವನ ನಡೆಸಲು ಸ್ವ-ಸಹಾಯ ಸಂಘಗಳು ಸಹಾಯಕವಾಗುತ್ತವೆ. ಅದರಂತೆ ಲಿಂಗತ್ವ ಅಲ್ಪ ಸಂಖ್ಯಾತರು ಸಂಘ ನಿರ್ಮಿಸಿಕೊಳ್ಳುವ ಮೂಲಕ ಇತರೆ ಸೌಲಭ್ಯಗಳನ್ನು ಪಡೆಯುವ ಜತೆಗೆ ಆರ್ಥಿಕವಾಗಿ ಸಬಲರಾಗಬಹುದು ಎಂದರು.

ಈ ವೇಳೆ ಉಪಕಾರ್ಯದರ್ಶಿ (ಅಭಿವೃದ್ಧಿ) ಡಾ.ಎಂ.ಕೃಷ್ಣರಾಜು, ಸ್ವೀಪ್ ಸಮಿತಿಯ ಸಹಾಯಕ ಕಾರ್ಯದರ್ಶಿಗಳಾದ ಕೃಷ್ಣ ಹಾಗೂ ಕೆ.ಎನ್.ಪ್ರವೀಣ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಬಿ.ಬಸವರಾಜು ಸೇರಿದಂತೆ ಎಲ್ಲಾ ತಾಲ್ಲೂಕಿನ ಲಿಂಗತ್ವ ಅಲ್ಪ ಸಂಖ್ಯಾತರ ಸಮುದಾಯದ ಮುಖ್ಯಸ್ಥರು ಹಾಜರಿದ್ದರು.

ಹಿಂದಿನ ಲೇಖನಜೋಶಿಮಠ ಭೂಕುಸಿತ: ಸುಪ್ರೀಂ ಕೋರ್ಟ್’ಗೆ ಪಿಐಎಲ್ ಸಲ್ಲಿಸಿದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಮುಂದಿನ ಲೇಖನಕೋಲಾರ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ: ಸಿದ್ದರಾಮಯ್ಯ ಘೋಷಣೆ