ಮನೆ ರಾಜ್ಯ ಇಂದು ನೀಲಿ ಜರಿ ಸೀರೆಯಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿ

ಇಂದು ನೀಲಿ ಜರಿ ಸೀರೆಯಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿ

0

ಮೈಸೂರು : ದಸರಾ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ ನವರಾತ್ರಿ ಆರಂಭವಾಗಿದ್ದು, ತಾಯಿ ಚಾಮುಂಡಿಯ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಕೂರಿಸಲಾಗಿದೆ. ನೀಲಿ ಜರಿ ಸೀರೆಯನ್ನು ತಾಯಿ ಚಾಮುಂಡಿಗೆ ಉಡಿಸಿದ್ದು, ವಜ್ರದ ಕಣ್ಣುಗಳಿಂದ ದೇವಿ ಕಂಗೊಳಿಸುತ್ತಿದೆ. ಈ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟನೆ ಆಗಲಿದೆ.

ಚಾಮುಂಡಿ ದೇವಸ್ಥಾನವನ್ನು ಕಬ್ಬಿನ ಜಲ್ಲೆ ಮತ್ತು ಹೂಗಳಿಂದ ಅಲಂಕೃತ ಮಾಡಲಾಗಿದೆ. ದೇವಸ್ಥಾನ ಒಳ ಭಾಗದಲ್ಲಿನ ಪ್ರತಿ ಕಂಬಕ್ಕೂ ಕಬ್ಬು ಕಟ್ಟಿ ಅಲಂಕಾರ ಮಾಡಲಾಗಿದೆ. ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿ ನಾಡಹಬ್ಬಕ್ಕೆ ಅದ್ದೂರಿ ಚಾಲನೆ ನೀಡಲು ಜಿಲ್ಲಾಡಳಿತ ಸಜ್ಜಾಗಿದೆ.

ವಿರೋಧದ ನಡುವೆಯೂ ಲೇಖಕಿ ಬಾನು ಮುಷ್ತಾಕ್ ಈ ಬಾರಿ ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ, ಹೀಗಾಗಿ ಜಿಲ್ಲಾಡಳಿತದ ವತಿಯಿಂದ ಬಾನು‌ ಮುಷ್ತಾಕ್ ಮತ್ತು ದಸರಾ ಉದ್ಘಾಟನಾ ಸಮಯದಲ್ಲಿ ಬಿಗಿ ಭದ್ರತೆ ನೀಡಲಾಗಿದೆ. ಇಂದು ಮುಂಜಾನೆಯಿಂದಲೇ ವಿವಿಧ ಅಭಿಷೇಕ, ಪೂಜಾಕೈಂಕರ್ಯಗಳು ನೆರವೇರಿದೆ.

ಬಳಿಕ ಬೆಳ್ಳಿರಥಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನ ವೇದಿಕೆಗೆ ತಂದು ಪುಷ್ಪಾರ್ಚನೆ ಮಾಡಲಿದ್ದಾರೆ. ಬೆಳಿಗ್ಗೆ 10:10ರಿಂದ 10:40ರ ವೃಶ್ಚಿಕ ಶುಭ ಲಗ್ನದಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಲೇಖಕಿ ಬಾನು ಮುಷ್ತಾಕ್ ಪುಷ್ಪಾರ್ಚನೆ ಮಾಡಿ ದಸರಾ ಉದ್ಘಾಟನೆ ಮಾಡಲಿದ್ದಾರೆ.

ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, 1 ಸಾವಿರ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಮಳೆ ಹಿನ್ನೆಲೆ ಜರ್ಮನ್ ಟೆಂಟ್ ವ್ಯವಸ್ಥೆ ಮಾಡಲಾಗಿದ್ದು, ವಿವಿಐಪಿ, ವಿಐಪಿ ಹಾಗೂ ಪಾಸ್ ಹೊಂದಿದವರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ. ದಸರಾ ಉದ್ಘಾಟನೆ ಮುಗಿಯುವವರೆಗೂ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ನಿರ್ಬಂಧ ಹೇರಲಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಸಚಿವರು, ಶಾಸಕರು, ಸಂಸದರು ಭಾಗಿಯಾಗಲಿದ್ದಾರೆ.

ದಸರಾ ಉದ್ಘಾಟನೆಗೊಂಡ ಬಳಿಕ ಹಲವು ದಸರಾ ಕಾರ್ಯಕ್ರಮಗಳಿಗೆ ಇಂದೇ ಚಾಲನೆ ಸಿಗಲಿದೆ. ಮಧ್ಯಾಹ್ನ 12:30ಕ್ಕೆ ಫಲಪುಷ್ಪ ಪ್ರದರ್ಶನ ಉದ್ಘಾಟನೆ, ಬಳಿಕ ಮಹಾರಾಜ ಕಾಲೇಜು ಮೈದಾನದಲ್ಲಿ ಆಹಾರ ಮೇಳಕ್ಕೆ ಚಾಲನೆ, ಸಂಜೆ 4ಕ್ಕೆ ದೇವರಾಜ ಅರಸು ಕ್ರೀಡಾಂಗಣದಲ್ಲಿ ದಸರಾ ಕುಸ್ತಿ ಪಂದ್ಯಾವಳಿಗೆ ಉದ್ಘಾಟನೆ ಭಾಗ್ಯ, ಅರಮನೆ ಆರವಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಗುತ್ತೆ. ಸಂಜೆ 6:30ಕ್ಕೆ ಸಯ್ಯಾಜಿರಾವ್ ರಸ್ತೆಯಲ್ಲಿ ವಿದ್ಯುತ್ ದೀಪಾಲಂಕಾರ ಉದ್ಘಾಟನೆಯಾಗಲಿದೆ.

ದಸರಾ ಉದ್ಘಾಟನೆ ಆಗುತ್ತಿದ್ದಂತೆ ಅರಮನೆಯಲ್ಲಿ ಖಾಸಗಿ ದರ್ಬಾರ್ ಸಹ ನಡೆಯಲಿದೆ, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರತ್ನಖಚಿತ ಸಿಂಹಾಸವನ್ನೇರಿ ಖಾಸಗಿ ದರ್ಬಾರ್ ನೆರವೇರಿಸಲಿದ್ದಾರೆ. ಹೀಗಾಗಿ ಸಿಂಹಾಸನವನ್ನು ಅರಮನೆಯ ಸ್ಟ್ರಾಂಗ್ ರೂಂನಿಂದ ತಂದು ಕನ್ನಡಿ ತೊಟ್ಟಿಯಲ್ಲಿ ಜೋಡಣೆ ಮಾಡಲಿದ್ದಾರೆ.

ಒಂದೆಡೆ ದಸರಾ ಉದ್ಘಾಟನೆಗೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದ್ರೆ, ಅತ್ತ ಅರಮನೆಯಲ್ಲೂ ಇಂದಿನಿಂದ ವಿವಿಧ ಪೂಜಾ ಕೈಂಕರ್ಯ ಹಾಗೂ ಖಾಸಗಿ ದರ್ಬಾರ್ ಆರಂಭಗೊಳ್ಳಲಿದೆ. ನವರಾತ್ರಿಯ ವೈಭವ ಕಣ್ತುಂಬಿಕೊಳ್ಳಲು ಲಕ್ಷಾಂತರ ಪ್ರವಾಸಿಗರು ಮೈಸೂರಿನತ್ತ ಬರುತ್ತಿದ್ದು, ಪ್ರವಾಸಿಗರ ಆಕರ್ಷಿಸಲು ಮೈಸೂರು ಸಜ್ಜಾಗಿದೆ.