ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಇದರ ನಡುವೆ ಕಾಶ್ಮೀರದಲ್ಲಿ ಸಿಲುಕಿರುವ 13 ಕನ್ನಡಿಗ ವಿದ್ಯಾರ್ಥಿಗಳನ್ನು ವಾಪಸ್ ರಾಜ್ಯಕ್ಕೆ ಕರೆತರಲು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ನೆರವಾಗಿದ್ದಾರೆ.
ಭಾರತ-ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆಗೆ ರೆಡಿ ಎಂದಿದ್ದ ಟ್ರಂಪ್ ಕೊನೆಗೂ ಪಾಕ್ಗೆ ಬುದ್ಧಿ ಹೇಳಿದ್ದಾರೆ. ಭಾರತ-ಪಾಕಿಸ್ತಾನದ ನಡುವಿನ ಕದನಕ್ಕೆ ಬ್ರೇಕ್ ಬಿದ್ದಿದೆ ಎಂದು ಟ್ವೀಟ್ ಮೂಲಕ ಘೋಷಿಸಿದ್ದರು. ಆದರೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ದಾಳಿ ಮಾಡಿತ್ತು. ಹೀಗಾಗಿ ಪರಿಸ್ಥಿತಿಯನ್ನು ಅರಿತ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕಾಶ್ಮೀರದಲ್ಲಿ ಓದುತ್ತಿದ್ದ ಕರ್ನಾಟಕದ 13 ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಕರೆತರುವಲ್ಲಿ ನೆರವಾಗಿದ್ದಾರೆ.
ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ರಾಜ್ಯದ 13 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಪಾಕ್ನ ಡ್ರೋನ್ ದಾಳಿ ಭೀತಿಯಿಂದಾಗಿ ಪರದಾಡುತ್ತಿದ್ದರು. ಇದರಿಂದಾಗಿ ತಗಚಗೆರೆ ಗ್ರಾಮದ ಜೆಡಿಎಸ್ ಮುಖಂಡರೊಬ್ಬರು ತಮ್ಮ ಪುತ್ರ ಹರ್ಷಿತ್ ಕಾಶ್ಮೀರದಲ್ಲಿ ಓದುತ್ತಿದ್ದು, ಯುದ್ಧ ಭೀತಿಯಿರುವ ಕಾರಣ ಅವರನ್ನು ಕರ್ನಾಟಕಕ್ಕೆ ಹಿಂತಿರುಗಿಸಲು ಸಹಾಯ ಕೋರಿ, ಹೆಚ್ಡಿ ಕುಮಾರಸ್ವಾಮಿಯವರಿಗೆ ಮನವಿ ಮಾಡಿಕೊಂಡಿದ್ದರು.
ಇದೇ ವೇಳೆ ಕರ್ನಾಟಕದ ಹಲವು ವಿದ್ಯಾರ್ಥಿಗಳು ಅಲ್ಲಿ ಓದುತ್ತಿರುವ ಮಾಹಿತಿ ಸಿಕ್ಕಿದೆ. ಕೂಡಲೇ ಸ್ಪಂದಿಸಿದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ವಿದ್ಯಾರ್ಥಿಗಳ ರಕ್ಷಣೆಗಾಗಿ ತಮ್ಮ ಸಚಿವಾಲಯದ ಅಧಿಕಾರಿಗಳನ್ನು ನಿಯೋಜಿಸಿದ್ದರು. ಸದ್ಯ ವಿದ್ಯಾರ್ಥಿಗಳನ್ನು ದೆಹಲಿಯ ಕರ್ನಾಟಕ ಭವನಕ್ಕೆ ಕರೆತರಲಾಗಿದ್ದು, ಸದ್ಯ ಎಲ್ಲರೂ ಸುರಕ್ಷಿತರಾಗಿದ್ದಾರೆ.
ಇಡೀ ರಾಷ್ಟ್ರವು ಸವಾಲಿನ ಪರಿಸ್ಥಿತಿಯಲ್ಲಿರುವಾಗಲೂ ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ಸ್ಪಷ್ಟ ಮಾರ್ಗದರ್ಶನ ಮತ್ತು ದಿಟ್ಟ ಕ್ರಮಗಳಿಂದ ಈ ಕಾರ್ಯಾಚರಣೆ ಸಾಧ್ಯವಾಗಿದೆ. ಶ್ರೀನಗರದಿಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರಕಾರದ ಅಧಿಕಾರಿಗಳು, ಭದ್ರತಾ ಸಂಸ್ಥೆಗಳು, ರೈಲ್ವೆ ಸಿಬ್ಬಂದಿ ಮತ್ತು ಕೈಗಾರಿಕಾ ಸಚಿವಾಲಯದ ಅಧಿಕಾರಿಗಳು ಶ್ರಮಿಸಿದ್ದು, ಎಲ್ಲರನ್ನೂ ನಾನು ಶ್ಲಾಘಿಸುತ್ತೇನೆ. ಜೈ ಹಿಂದ್ ಎಂದು ಹೇಳಿದ್ದಾರೆ.
ನಾಳೆ ಬೆಳಿಗ್ಗೆ 8 ಗಂಟೆಗೆ ದೆಹಲಿಯಿಂದ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದು, ಇದೇ 14ರಂದು ಬೆಳಿಗ್ಗೆ 8 ಗಂಟೆಗೆ ಬೆಂಗಳೂರು ತಲುಪಲಿದ್ದಾರೆ.















