ಬೆಂಗಳೂರು: ಹೈಕೋರ್ಟ್ ನಲ್ಲಿ 44 ವರ್ಷಗಳ ಹಿಂದಿನ ಪ್ರಕರಣವೊಂದನ್ನು ವಿಲೇವಾರಿ ಮಾಡಲಾಗಿದೆ. ಹೈಕೋರ್ಟ್ ನಲ್ಲಿನ ಕ್ರಿಮಿನಲ್ ಮೊಕದ್ದಮೆಗಳಲ್ಲೇ ಅತ್ಯಂತ ಹಳೆಯದಾದ ಪ್ರಕರಣವಾಗಿದೆ. ಈ ಸಂಬಂಧ ಬೆಂಗಳೂರಿನ 68 ವರ್ಷದ ವ್ಯಕ್ತಿಯೊಬ್ಬರ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಲಾಗಿದೆ.
ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸುವಂತೆ ಕೋರಿ ಮುತ್ಯಾಲ ನಗರದ ನಿವಾಸಿಯಾದ ಚಂದ್ರ ಅಲಿಯಾಸ್ ಚಂದ್ರಶೇಖರ ಭಟ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠದ ವಿಚಾರಣೆ ನಡೆಸಿತು. ಅರ್ಜಿದಾರ ಚಂದ್ರ ವಿರುದ್ಧದ ವಿಚಾರಣಾ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಉಡುಪಿ ಪೊಲೀಸ್ ಠಾಣೆಯಲ್ಲಿ 1980ರಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವೊಂದರಲ್ಲಿ ಅರ್ಜಿದಾರ ಚಂದ್ರ ಅವರನ್ನೂ ಆರೋಪಿಯನ್ನಾಗಿ ಮಾಡಲಾಗಿತ್ತು. ಆದರೆ, ಅವರಿಗೆ ಪೊಲೀಸ್ ಠಾಣೆಯಿಂದ ಯಾವುದೇ ಸಮನ್ಸ್ ಆಗಲಿ ನೋಟಿಸ್ ಆಗಲಿ ಬಂದಿರಲಿಲ್ಲ. ಅಷ್ಟಕ್ಕೂ ಪ್ರಕರಣದ ಬಗ್ಗೆ ಮಾಹಿತಿಯೇ ಇರಲಿಲ್ಲ.
ಚಂದ್ರ ತಲೆಮರೆಸಿಕೊಂಡಿದ್ದಾರೆ ಎಂಬ ಪೊಲೀಸರ ವಾದ ಸುಳ್ಳು ಮತ್ತು ಈ ಪ್ರಕರಣದ ಇನ್ನಿಬ್ಬರು ಆರೋಪಿಗಳನ್ನು ಈಗಾಗಲೇ ಖುಲಾಸೆಗೊಳಿಸಲಾಗಿದೆ ಎಂಬ ಅರ್ಜಿದಾರರ ಪರ ವಕೀಲರ ವಾದವನ್ನು ನ್ಯಾಯಪೀಠ ಎತ್ತಿಹಿಡಿದಿದೆ. ನ್ಯಾಯಾಂಗದ ಅಮೂಲ್ಯ ಸಮಯವನ್ನು ಉಳಿಸಬೇಕೆಂದರೆ ಇಂತಹ ಪ್ರಕರಣವನ್ನು ರದ್ದುಗೊಳಿಸುವುದೇ ಸೂಕ್ತ ಎಂದು ನ್ಯಾಯಪೀಠ ಹೇಳಿದೆ.














