ಮನೆ ಕಾನೂನು ಚಾಮುಂಡೇಶ್ವರಿ ದೇವಾಲಯದ ಸ್ಥಿರ, ಚರ ಆಸ್ತಿ ಹಸ್ತಾಂತರಿಸದಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಚಾಮುಂಡೇಶ್ವರಿ ದೇವಾಲಯದ ಸ್ಥಿರ, ಚರ ಆಸ್ತಿ ಹಸ್ತಾಂತರಿಸದಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

0

ಬೆಂಗಳೂರು: ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದ ಚರ ಮತ್ತು ಸ್ಥಿರ ಆಸ್ತಿಗಳನ್ನು ಸದ್ಯ ಯಾವುದೇ ರೀತಿಯಲ್ಲಿ ಹಸ್ತಾಂತರ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಯ ಸಿಂಧುತ್ವ ಪ್ರಶ್ನಿಸಿ ಮೈಸೂರು ರಾಜಮನೆತನದ ರಾಣಿ ಪ್ರಮೋದಾದೇವಿ ಒಡೆಯರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಈ ಆದೇಶ ನೀಡಿದೆ.

Join Our Whatsapp Group

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಚಾಮುಂಡೇಶ್ವರಿ ಕ್ಷೇತ್ರದ ಮಾಲೀಕತ್ವದ ಬಗ್ಗೆ ಕಳೆದ 20 ವರ್ಷಗಳಿಗೂ ಅಧಿಕ ಕಾಲದಿಂದ ನ್ಯಾಯಾಲಯದಲ್ಲಿ ವ್ಯಾಜ್ಯವಿದೆ. 2004ರಲ್ಲಿ ರಾಜಮನೆತನ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆದರೆ, ಅದರ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿದೆ. ಅದು ಈಗಲೂ ವಿಚಾರಣೆಯ ಹಂತದಲ್ಲಿದೆ. ಪ್ರಕರಣ ನ್ಯಾಯಾಲಯದಲ್ಲಿರುವಾಗ ವಿಧಾನಮಂಡಲದಲ್ಲಿ ವಿಧೇಯಕ ಮಂಡಿಸಿ ಪ್ರಾಧಿಕಾರ ರಚನೆ ಮಾಡಿರುವುದು ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮ 81 ಹಾಗೂ 161ಕ್ಕೆ ತದ್ವಿರುದ್ಧವಾಗಿದೆ. 2024ರ ಫೆ.19ರಂದು ವಿಧೇಯಕ ಮಂಡಿಸಿ, ಫೆ.21ಕ್ಕೆ ಅನುಮೋದನೆ ಪಡೆದುಕೊಳ್ಳಲಾಗಿದೆ. ವಿಧೇಯಕದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಹಾಗಾಗಿ, ಅದರ ಸಿಂಧುತ್ವ ಪ್ರಶ್ನಾರ್ಹ ಎಂದು ಪೀಠಕ್ಕೆ ತಿಳಿಸಿದರು.

ಅದೇ ರೀತಿ, ಕಳೆದ 23 ರ್ಷಗಳಿಂದ ನ್ಯಾಯಾಲಯದಲ್ಲಿ ವ್ಯಾಜ್ಯವಿದೆ. ಈ ಬಗ್ಗೆ ಸರ್ಕಾರ ಏನನ್ನೂ ಮಾಡಿಲ್ಲ. ಬದಲಿಗೆ ರಾಜಮನೆತನವೇ ಮೇಲ್ಮನವಿಯ ತ್ವರಿತ ವಿಚಾರಣೆಗೆ ನ್ಯಾಯಾಲಯಕ್ಕೆ ಮನವಿ ಮಾಡುತ್ತಿದೆ. ಅಲ್ಲದೇ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿಗಳನ್ನು ಕೈಗೊಳ್ಳದೆ ಯಥಾಸ್ಥಿತಿ ಕಾಯ್ದುಕೊಳ್ಳಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕಳೆದೊಂದು ವರ್ಷದಿಂದ ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಲಾಗುತ್ತಿದೆ. ಪ್ರಕರಣ ನ್ಯಾಯಾಲಯದಲ್ಲಿರುವಾಗ ವಿಧೇಯಕ ತರುವುದಕ್ಕೆ ಮೊದಲು ಸರ್ಕಾರ ನ್ಯಾಯಾಲಯದ ಮೊರೆ ಹೋಗಬಹುದಿತ್ತು. ಅದನ್ನು ಮಾಡದೇ ಪ್ರಾಧಿಕಾರ ರಚಿಸಲಾಗಿದೆ. ಇದೊಂದು ರೀತಿ ನ್ಯಾಯಾಲಯಕ್ಕೆ ಅಗೌರವ ತೋರಿದಂತೆ ಎಂದು ಅರ್ಜಿದಾರರು ಪರ ವಕೀಲರು ಆರೋಪಿಸಿದರು.

ಚಾಮುಂಡೇಶ್ವರಿ ಕ್ಷೇತ್ರ ಮೈಸೂರು ರಾಜಮನೆತನದ ಖಾಸಗಿ ಆಸ್ತಿ. ಅದರಲ್ಲಿ ಹಸ್ತಕ್ಷೇಪ ಮಾಡುವ ಅಧಿಕಾರ ಸರ್ಕಾರಕ್ಕೆ ಇಲ್ಲ. ಪ್ರಾಧಿಕಾರ ರಚನೆಯಿಂದ ಕ್ಷೇತ್ರದ ಆಸ್ತಿ, ವಜ್ರ-ವೈಢೂರ್ಯಗಳು ಸರ್ಕಾರದ ಸುಪರ್ದಿಗೆ ಹೋಗಲಿವೆ. ಕ್ಷೇತ್ರದ ಧಾರ್ಮಿಕ ವಿಧಿ-ವಿಧಾನಗಳು, ಸಂಪ್ರದಾಯಗಳಲ್ಲಿ ಸರ್ಕಾರದ ಹಸ್ತಕ್ಷೇಪ ಇರಲಿದೆ. ಕ್ಷೇತ್ರದಲ್ಲಿ ಯಾರಾದರೂ ಸಾವನ್ನಪ್ಪಿದರೆ ಆ ಇಡೀ ದಿನ ದೇವಸ್ಥಾನ ಬಂದ್ ಮಾಡಲಾಗುತ್ತದೆ. ಆದರೆ, ಇತ್ತೀಚಿಗೆ ಸಾವು ಸಂಭವಿಸಿದ್ದರೂ, ಪ್ರಭಾವಿ ರಾಜಕಾರಣಿಯೊಬ್ಬರಿಗಾಗಿ ದೇವಸ್ಥಾನವನ್ನು ತೆರೆಯಲಾಗಿತ್ತು. ಚರ ಮತ್ತು ಸ್ಥಿರ ಆಸ್ತಿಗಳಲ್ಲಿ ವೇಗವಾಗಿ ಬದಲಾವಣೆ ತರಲಾಗುತ್ತಿದೆ. ಪ್ರಾಧಿಕಾರ ರಚನೆಗೆ ಮಧ್ಯಂತರ ತಡೆ ನೀಡುವುದರ ಜೊತೆಗೆ, ದೇವಾಲಯದ ಸಂಪ್ರದಾಯಗಳಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡಬಾರದು ಮತ್ತು ಚರ ಮತ್ತು ಸ್ಥಿರ ಆಸ್ತಿಗಳಲ್ಲಿ ಬದಲಾವಣೆ ಮಾಡಬಾರದು ಎಂದು ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.

ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎನ್.ದೇವದಾಸ್ ವಾದ ಮಂಡಿಸಿ, ಅರ್ಜಿದಾರರ ಪರ ವಕೀಲರು ಸಂಬಂಧಪಡದ ವಿಷಯಗಳನ್ನು ಉಲ್ಲೇಖ ಮಾಡುತ್ತಿದ್ದಾರೆ. ಸಂವಿಧಾನದ 212 ವಿಧಿಯಡಿ ಸರ್ಕಾರಕ್ಕೆ ಅಧಿಕಾರವಿದೆ. ಕಾಯ್ದೆ, ಪ್ರಾಧಿಕಾರದ ಸಿಂಧುತ್ವ ಬೇಕಿದ್ದರೆ ಅರ್ಜಿದಾರರು ಪ್ರಶ್ನಿಸಲಿ. ಆದರೆ, ವಿಧಾನಮಂಡಲದ ಪ್ರಕ್ರಿಯೆ ಪ್ರಶ್ನಿಸುವಂತಿಲ್ಲ. ಅರ್ಜಿದಾರರ ವಾದಗಳಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶಬೇಕು ಎಂದು ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಿತು. ಅಲ್ಲಿಯವರೆಗೆ ದೇವಸ್ಥಾನದ ಚರ ಮತ್ತು ಸ್ಥಿರ ಆಸ್ತಿಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಬಾರದು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿತು.