ಮನೆ ರಾಜ್ಯ ಸದಾ ಕಾಲ ಕಿವಿಯಲ್ಲಿ ಕಮಿಷನ್ ಸದ್ದು ಗುಯ್ಗುಡುವಾಗ ಬಡವರ ಕೂಗು ಕೇಳುವುದಾದರೂ ಹೇಗೆ ಮುಖ್ಯಮಂತ್ರಿಗಳೇ?: ಸಿದ್ದರಾಮಯ್ಯ...

ಸದಾ ಕಾಲ ಕಿವಿಯಲ್ಲಿ ಕಮಿಷನ್ ಸದ್ದು ಗುಯ್ಗುಡುವಾಗ ಬಡವರ ಕೂಗು ಕೇಳುವುದಾದರೂ ಹೇಗೆ ಮುಖ್ಯಮಂತ್ರಿಗಳೇ?: ಸಿದ್ದರಾಮಯ್ಯ ಕಿಡಿ

0

ಬೆಂಗಳೂರು: ಸದಾ ಕಾಲ ಕಿವಿಯಲ್ಲಿ ಕಮಿಷನ್ ಸದ್ದು ಗುಯ್ಗುಡುವಾಗ ಬಡವರ ಕೂಗು ಕೇಳುವುದಾದರೂ ಹೇಗೆ ಮುಖ್ಯಮಂತ್ರಿಗಳೇ? ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಪಿಂಚಣಿ ಮುಷ್ಕರ, ಶಾಲಾ ಶಿಕ್ಷಕ ಮುಷ್ಕರವನ್ನು ಉಲ್ಲೇಖಿಸಿ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮೂಲಕ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಶಿಕ್ಷಕರು ಕೇಳುತ್ತಿರುವುದು ತಮ್ಮ ಹಕ್ಕಿನ ಪಿಂಚಣಿಯನ್ನು ಎಂಬ ಕನಿಷ್ಠ ಜ್ಞಾನವಾದರೂ ಈ ಸರ್ಕಾರಕ್ಕೆ ಬೇಡವೇ? ಬೊಮ್ಮಾಯಿ ಅವರು ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು? ಎಂದು ಪ್ರಶ್ನಿಸಿದ್ದಾರೆ.

ಪಿಂಚಣಿಗಾಗಿ ಮುಷ್ಕರದಲ್ಲಿ ತೊಡಗಿದ್ದ ಬಾಗಲಕೋಟೆ ಮೂಲದ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ಮೂಲಕ ಶಂಕರಪ್ಪ ಬೋರಡ್ಡಿ ಅವರು ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನು ಸರ್ಕಾರಿ ಕೊಲೆಗಳು ಅನ್ನದೆ ಬೇರೇನು ಹೇಳಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.

ಕಳೆದ 141 ದಿನಗಳಿಂದ ಫ್ರೀಡಂ ಪಾರ್ಕ್’ನಲ್ಲಿ ಮುಷ್ಕರ ನಿರತರಾಗಿರುವ ಅನುದಾನಿತ ಶಾಲಾ ಶಿಕ್ಷಕರ ಗೋಳು ಕೇಳುವವರಿಲ್ಲ. ಶಿಕ್ಷಕರು ಪ್ರತಿಭಟನೆ ಆರಂಭಿಸಿ 141 ದಿನಗಳು ಕಳೆದರೂ ಇನ್ನು ಈ ವಿಚಾರ ತಮ್ಮ ಗಮನಕ್ಕೆ ಬಂದಿರಲಿಲ್ಲ ಎಂದು ಹೇಳುವ ಮೂಲಕ ರಾಜ್ಯ ಸರ್ಕಾರ ಇಷ್ಟು ದಿನ ಕೋಮಾದಲ್ಲಿತ್ತು ಎಂಬುದನ್ನು ಸ್ವತಃ ಒಪ್ಪಿಕೊಂಡಿದೆ. ಸದಾ ಕಾಲ ಕಿವಿಯಲ್ಲಿ ಕಮಿಷನ್ ಸದ್ದು ಗುಯ್ಗುಡುವಾಗ ಬಡವರ ಕೂಗು ಕೇಳುವುದಾದರೂ ಹೇಗೆ ಮುಖ್ಯಮಂತ್ರಿಗಳೇ? ಎಂದು ಪ್ರಶ್ನಿಸಿದ್ದಾರೆ.

ಕೋಮುಗಲಭೆ ನಡೆದು ಕೊಲೆಯಾದರೆ ಗಂಟೆಯೊಳಗೆ ಹೆಣದ ಸುತ್ತ ನೊಣದಂತೆ ಹೋಗಿ ಕೂರುವ ಬಿಜೆಪಿ ಸರ್ಕಾರಕ್ಕೆ, ಸಾವಿರಾರು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೀವಗಳು ಅಮೂಲ್ಯ ಅನ್ನಿಸುವುದಿಲ್ಲವೇ? ಇನ್ನಷ್ಟು ಜೀವಗಳು ಬಲಿಯಾಗುವ ಮುನ್ನ ಮುಷ್ಕರದಲ್ಲಿ ತೊಡಗಿರುವ ಅನುದಾನಿತ ಶಾಲಾ ಶಿಕ್ಷಕರನ್ನು ಕರೆದು ಸರ್ಕಾರ ಮಾತುಕತೆ ನಡೆಸಿ, ಅವರ ಬೇಡಿಕೆಗಳನ್ನು ತಕ್ಷಣ ಈಡೇರಿಸುವ ಕೆಲಸ ಮಾಡಬೇಕು ಮತ್ತು ಈಗಾಗಲೇ ಪ್ರಾಣ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಮಯ್ಯ ಆಗ್ರಹಿಸಿದ್ದಾರೆ.