ಬೆಂಗಳೂರು: ಜಾರಿ ನಿರ್ದೇಶನಾಲಯ ಮುಡಾ ಸೈಟ್ಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದು ಮತ್ತು ಹಗರಣ ಸಂಬಂಧ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆ ಸಂಬಂಧ ಸಿಎಂ ಸಿದ್ದರಾಮಯ್ಯ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ರಾಜಕೀಯ ಉದ್ದೇಶದಿಂದ ತನಿಖೆ ಮಾಡುತ್ತಿದ್ದಾರೆ. 50:50 ಸೈಟ್ ಗಳನ್ನು ಮುಟ್ಟುಗೋಲು ಹಾಕಿದ್ದೇವೆ ಎನ್ನುತ್ತಿದ್ದಾರೆ. ಆದರೆ, ಅದಕ್ಕೂ ನನಗೂ ಸಂಬಂಧ ಇಲ್ಲ ಎಂದರು.
ಬಿಜೆಪಿ ಇಡಿಯಿಂದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿಸಿದೆ. ಅದು ರಾಜಕೀಯ ಪ್ರೇರಿತ ಮಾಧ್ಯಮ ಪ್ರಕಟಣೆ ಎಂದು ಸಿದ್ದರಾಮಯ್ಯ ಟೀಕಿಸಿದರು.
ಇನ್ನು ಬೆಳಗಾವಿ ಗಾಂಧಿ ಭಾರತ ಸಮಾವೇಶ ವಿಚಾರವಾಗಿ ಮಾತನಾಡಿದ ಅವರು, ಮಂಗಳವಾರ ಬೆಳಗಾವಿಯಲ್ಲಿ ಸಮಾವೇಶ ಮಾಡುತ್ತಿದ್ದೇವೆ. ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡುತ್ತೇವೆ. ನಂತರ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಯಲಿದೆ ಎಂದರು.
ಮೈಕ್ರೋ ಫೈನಾನ್ಸ್ನವರ ಮೇಲೆ ಕ್ರಮದ ಭರವಸೆ
ರಾಜ್ಯದ ಹಲವೆಡೆ ಮೈಕ್ರೋ ಫೈನಾನ್ಸ್ನಿಂದ ಕಿರುಕುಳ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಮೈಕ್ರೋ ಫೈನಾನ್ಸ್ನವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಯಾರೇ ಕಿರುಕುಳ ಕೊಟ್ಟರೂ ಅವರ ವಿರುದ್ಧ ಕ್ರಮ ಕೈಗೊಳ್ತೇವೆ ಎಂದು ಭರವಸೆ ನೀಡಿದರು.
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಮಾಹಿತಿ ದೊರೆತಿದೆ. ಹಲ್ಲೆ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಯಾರೇ ತಪ್ಪು ಮಾಡಿದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.














