ಮಂಗಳೂರು : ಧರ್ಮಸ್ಥಳ ಗ್ರಾಮದ ಬುರುಡೆ ರಹಸ್ಯ ಪ್ರಕರಣದ ತನಿಖೆ ಮತ್ತೆ ಚುರುಕು ಪಡೆದುಕೊಂಡಿದೆ. 4 ತಿಂಗಳ ಹಿಂದೆ 7 ಅಸ್ಥಿಪಂಜರ ಪತ್ತೆಯಾಗಿದ್ದ ಬಂಗ್ಲೆಗುಡ್ಡೆ ಕಾಡಿಗೆ ವಿಧಿವಿಜ್ಞಾನ ಪ್ರಯೋಗಾಲಯ ತಂಡ ಭೇಟಿ ನೀಡಿದೆ. ಮೂವರು ಅಧಿಕಾರಿಗಳನ್ನೊಳಗೊಂಡ ಎಫ್ಎಸ್ಎಲ್ ಅಧಿಕಾರಿಗಳ ತಂಡ ಇಂದು ಬೆಂಗಳೂರಿನಿಂದ ಎಸ್ಐಟಿ ಅಧಿಕಾರಿಗಳೊಂದಿಗೆ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದೆ. 4 ತಿಂಗಳ ಹಿಂದೆ 4 ತಿಂಗಳ ಹಿಂದೆ 7 ಅಸ್ಥಿಪಂಜರ ಸಿಕ್ಕಿದ್ದ ಜಾಗದಲ್ಲಿ ಪರಿಶೀಲನೆ ನಡೆಸಿದೆ. ಅಲ್ಲದೇ ಆರೋಪಿ ಪ್ರದೀಪ್ ಕುಲಾಲ್ನನ್ನ ಸ್ಥಳಕ್ಕೆ ಕರೆತಂದು ಪರಿಶೀಲನೆ ನಡೆಸಲಾಗಿದೆ.
ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿದ್ದ ಪ್ರದೀಪ್ ಕುಲಾಲ್ ಬಿಎನ್ಎಸ್ ಸೆಕ್ಷನ್ 183 ಅಡಿ ತಪ್ಪೊಪ್ಪಿಗೆ ನೀಡಿದ್ದ. ರಾತ್ರಿ ಹೊತ್ತು ಕಾಡಿನಲ್ಲಿ ಬುರುಡೆ ತೆಗೆಯುತ್ತಿದ್ದ ವಿಡಿಯೋದಲ್ಲೂ ಪ್ರದೀಪ್ ಕಾಣಿಸಿಕೊಂಡಿದ್ದ. ಬುರುಡೆ ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಎಸ್ಐಟಿ ತಂಡ, 4 ತಿಂಗಳ ಹಿಂದೆ ಬಂಗ್ಲೆಗುಡ್ಡೆ ಅರಣ್ಯದಲ್ಲಿ ಉತ್ಖನನ ಕೈಗೊಂಡಿತ್ತು. ಸೆ.17 ರಂದು 5 ಅಸ್ಥಿಪಂಜರ, ಸೆ.18 ರಂದು 2 ಅಸ್ಥಿಪಂಜರ ಪತ್ತೆಯಾಗಿತ್ತು. ಎಲ್ಲವೂ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿತ್ತು. ಈ ಅಸ್ಥಿಗಳನ್ನು ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕೇಂದ್ರಕ್ಕೆ ಅಸ್ಥಿಪಂಜರಗಳ ರವಾನೆ ಮಾಡಲಾಗಿತ್ತು.
ಇದಕ್ಕೂ ಮುನ್ನ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನ ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸಿದ್ದ ಎಸ್ಐಟಿ ಕಳೆದ ನ.20 ರಂದು ಬೆಳ್ತಂಗಡಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ತನಿಖಾ ಪ್ರಾಥಮಿಕ ವರದಿ ಸಲ್ಲಿಸಿತ್ತು. ಈ ವೇಳೆ ಶೀಘ್ರವೇ ತನಿಖೆ ನಡೆಸಿ ಪೂರ್ಣ ವರದಿ ಸಲ್ಲಿಸುವಂತೆ ಕೋರ್ಟ್ ಸೂಚನೆ ನೀಡಿತ್ತು.

















