ಮನೆ ರಾಜಕೀಯ ಮುಂದಿನ ವಾರ ಕನ್ನಡಪರ ಸಂಘಟನೆಗಳ ಸಭೆ ಕರೆದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಮುಂದಿನ ವಾರ ಕನ್ನಡಪರ ಸಂಘಟನೆಗಳ ಸಭೆ ಕರೆದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

0

ಬೆಂಗಳೂರು: ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ರಾಜ್ಯವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಂದಿನ ವಾರ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರ ಜತೆ ಮಹತ್ವದ ಸಭೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ಬಿಡದಿಯ ತಮ್ಮ ತೋಟದಲ್ಲಿ ತಮ್ಮನ್ನು ಭೇಟಿಯಾದ ಕನ್ನಡ ಸಂಘಟನೆಗಳ ಮುಖಂಡರ ಜತೆ ಮಾತುಕತೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯವು ಅನೇಕ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದೆ. ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ನಾವು ಅನೇಕ ಕಠಿಣ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಇವುಗಳನ್ನು ಪರಿಣಾಮಕಾರಿಯಾಗಿ ಎದುರಿಸಬೇಕಾದರೆ ಎಲ್ಲ ಸಂಘಷಟನೆಗಳು ಒಟ್ಟಾಗಿ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಚರ್ಚೆ ಮಾಡಲು ಸಭೆ ಕರೆದಿದ್ದೇನೆ ಎಂದರು.

ರಾಜ್ಯದಲ್ಲಿ ಕನ್ನಡ ಸಂಘಟನೆಗಳ ಜತೆಗೆ ರೈತಪರ, ನೀರಾವರಿ ವಿಷಯಗಳನ್ನಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಅನೇಕ ಸಂಘಟನೆಗಳದ್ದು, ಅವೆಲ್ಲವನ್ನೂ ಒಗ್ಗೂಡಿಸುವ ಕೆಲಸ ಮಾಡಲಾಗುವುದು ಎಂದು ಅವರು ಹೇಳಿದರು.

ಹಾದಿಬೀದಿಯಲ್ಲಿ ಲಘು ಮಾತು ಉತ್ತಮ ನಡವಳಿಕೆ ಅಲ್ಲ
ಆಡಳಿತ ಪಕ್ಷದ ಶಾಸಕರೇ ಸರಕಾರದ ಬಗ್ಗೆ ಹಾದಿಬೀದಿಯಲ್ಲಿ ಲಘುವಾಗಿ ಮಾತನಾಡುವುದು, ಮಂತ್ರಿಗಳ ಬಗ್ಗೆ ಹೇಳಿಕೆಗಳನ್ನು ನೀಡುವುದು ಉತ್ತಮ ನಡವಳಿಕೆ ಅಲ್ಲ. ಸಮಸ್ಯೆಗಳಿದ್ದರೆ ಪಕ್ಷದ ಚೌಕಟ್ಟಿನೊಳಗೆ ಬಗೆಹರಿಸಿಕೊಳ್ಳಬೇಕು. ಆದು ಬಿಟ್ಟು ಶಿಸ್ತಿನ ಪಕ್ಷ ಎಂದು ಟ್ಯಾಗ್ʼಲೈನ್ ಹಾಕಿಕೊಂಡ ಪಕ್ಷದಲ್ಲಿ ದಿನನಿತ್ಯ ಶಾಸಕರು ಸರಕಾರ, ಮಂತ್ರಿಗಳ ಬಗ್ಗೆ ಮಾತನಾಡುವುದು ಉತ್ತಮ ಬೆಳವಣಿಗೆ ಅಲ್ಲ .
–      ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿಗಳು

ನಮ್ಮ ಸಮಸ್ಯೆಗಳ ಬಗ್ಗೆ ನಾವೇ ಹೋರಾಟ ನಡೆಸಿ ಸಾಧಿಸಿಕೊಳ್ಳಬೇಕಿದೆ. ಆ ಗುರಿ ಸಾಧನೆಗಾಗಿ ಪ್ರಾದೇಶಿಕ ರಾಜಕೀಯ ಶಕ್ತಿಯ ಅಗತ್ಯವಿದೆ. ಆ ದಿಕ್ಕಿನಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಇಂಥ ಸಂಘಟನೆಗಳನ್ನು ಒಗ್ಗೂಡಿಸಿ ಮುಂದಿನ ಕಾರ್ಯತಂತ್ರ ರೂಪಿಸುವ ಕೆಲಸವನ್ನು ನಾನು ಮಾಡುತ್ತಿದ್ದೇನೆ ಎಂದು ಅವರು ವಿವರಿಸಿದರು.

ಬೆಂಗಳೂರಿನಲ್ಲಿ ಸಭೆ: ಇಂದು ಸುಮಾರು ನೂರೈವತ್ತಕ್ಕೂ ಹೆಚ್ಚು ಕನ್ನಡ ಮುಖಂಡರ ಜತೆ ಚರ್ಚೆ ನಡೆಸಿದ್ದೇನೆ. ಮುಂದಿನ ವಾರ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಇವರೆಲ್ಲರ ಜತೆ ಮುಕ್ತವಾಗಿ ಮಾತುಕತೆ ನಡೆಸಲಿದ್ದೇನೆ. ಕನ್ನಡಿಗರ ನಿರುದ್ಯೋಗ ಸಮಸ್ಯೆ, ಖಾಸಗೀ ಹಾಗೂ ಕೇಂದ್ರ ಸರಕಾರದ ಮಟ್ಟದಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಇತ್ಯಾದಿ ವಿಷಯಗಳ ಬಗ್ಗೆ ಮುಖಂಡರಿಂದ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ರಾಜ್ಯವನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಬೇಕು ಎನ್ನುವ ನಿಟ್ಟಿನಲ್ಲಿ ಪ್ರಾದೇಶಿಕ ಪಕ್ಷದ ಸರಕಾರ ತರುವ ದಿಸೆಯಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಹೇಳಿದರು.

ರಾಷ್ಟ್ರೀಯ ಪಕ್ಷಗಳು ತಿರಸ್ಕೃತ: ಇಡೀ ದೇಶದಲ್ಲಿ ರಾಷ್ಟ್ರೀಯ ಪಕ್ಷಗಳನ್ನು ಜನರು ತಿರಸ್ಕರಿಸುತ್ತಿದ್ದಾರೆ. ಪ್ರಾದೇಶಿಕ ಪಕ್ಷಗಳಿಗೆ ಹೆಚ್ಚೆಚ್ಚು ಮಣೆ ಹಾಕುತ್ತಿದ್ದಾರೆ. ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಕಳೆದ 75 ವರ್ಷಗಳಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ನೀರಾವರಿ ಸೇರಿದಂತೆ ವಿವಿಧ ವಲಯಗಳಲ್ಲಿ ಭಾರೀ ಅನ್ಯಾಯ ಮಾಡಿವೆ. ಆದರೆ, ಅಧಿಕಾರದಲ್ಲಿದ್ದ ಅಲ್ಪಸ್ವಲ್ಪ ಅವಧಿಯಲ್ಲೇ ಜೆಡಿಎಸ್ ಪಕ್ಷವು ಜನರ ಆಶೋತ್ತರಗಳನ್ನು ಈಡೇರಿಸಿದೆ. ಈ ಬಗ್ಗೆ ಸರಕಾರದ ಬಳಿ ನೈಜ ದಾಖಲೆಗಳೇ ಇವೆ ಎಂದರು.

ಹಾಗೆಯೇ ರೈತ ಮುಖಂಡರನ್ನೂ ಒಗ್ಗೂಡಿಲಾಗುವುದು. ಜಾತಿ, ಮತ ಮತ್ತು ಧರ್ಮವನ್ನು ಮೀರಿ ಎಲ್ಲರನ್ನೂ ಒಂದು ವೇದಿಕೆಗೆ ತಂದು ಕಾರ್ಯಕ್ರಮ ರೂಪಿಸಲಾಗುವುದು. ಎಲ್ಲ ಮುಖಂಡರ ಜತೆ ಮುಕ್ತವಾಗಿ ಚರ್ಚೆ ನಡೆಸಲು ನಾನು ಸಿದ್ಧನಿದ್ದೇನೆ. ಎರಡನೇ ಬಾರಿ ನಾನು ಮುಖ್ಯಮಂತ್ರಿಯಾದಾಗ ನನ್ನ 14 ತಿಂಗಳ ಆಡಳಿತಾವಧಿಯಲ್ಲಿ ನಾಲ್ಕೈದು ಬಾರಿ ವಿಧಾನಸಭೆಯಲ್ಲೇ ರೈತರ ಸಭೆ ಮಾಡಿದ್ದೇನೆ. ಆದರೆ, ಈ ಸರಕಾರ ಅಂಥ ಒಂದು ಸಭೆಯನ್ನೂ ಮಾಡಿಲ್ಲ ಎಂದು ಅವರು ಹೇಳಿದರು.

ಹಿಂದಿನ ಲೇಖನತೆರಿಗೆ ಬಗ್ಗೆ ಗಂಭೀರ ಚಿಂತನೆ ಅಗತ್ಯ: ವಿಪಕ್ಷ ನಾಯಕ ಸಿದ್ದರಾಮಯ್ಯ
ಮುಂದಿನ ಲೇಖನ80 ವರ್ಷದ ವೃದ್ಧ ಚುನಾವಣೆಗೆ ಸ್ಪರ್ಧೆ