ಶಿರಸಿ : ಕೆಎಸ್ಆರ್ಟಿಸಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ಬಸ್ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಶಿರಸಿ-ಕುಮಟಾ ರಸ್ತೆಯ ಕೊಳಗಿಬೀಸ್ ಬಳಿ ನಡೆದಿದೆ.
ಅಪಘಾತ ನಡೆದು ಕೆಲಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿತ್ತು. ಭಟ್ಕಳದಿಂದ ಬಾಗಲಕೋಟೆಗೆ ಶಿರಸಿ ರಸ್ತೆ ಮೂಲಕ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ತಿರುವು ಬಳಿ ಚಾಲಕರ ಅಜಾಗರೂಕತೆಯ ಚಾಲನೆಯಿಂದ ಮುಖಾಮುಖಿ ಡಿಕ್ಕಿಯಾಗಿದೆ. ಇದರಿಂದಾಗಿ ಎರಡೂ ಬಸ್ಗಳ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಬಸ್ನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.
ಗಾಯಾಳುಗಳನ್ನು ಶಿರಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.














