ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಎಲ್ಲ ದರಗಳು ಗಗನಕ್ಕೇರಿವೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ್ದು ಇದು ಲಾರಿ ಮಾಲೀಕರ ಆಕ್ರೋಶಕ್ಕೆ ಕಾರಣವಾಗಿದೆ. ಡೀಸೆಲ್ ದರ ಏರಿಕೆ ಖಂಡಿಸಿ ಲಾರಿ ಮಾಲೀಕರ ಸಂಘ ರಾಜ್ಯ ಸರ್ಕಾರದ ವಿರುದ್ಧ ಏಪ್ರಿಲ್ 14ರ ಮಧ್ಯರಾತ್ರಿಯಿಂದ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ರಾಜ್ಯ ಸರ್ಕಾರ ಈಗಾಗಲೇ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಎರಡು ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದರಿಂದ ಕೆರಳಿ ಕೆಂಡವಾಗಿರುವ ಲಾರಿ ಮಾಲೀಕರು, ಕೇಂದ್ರ ಸರ್ಕಾರ ಟೋಲ್ ದರ ಹೆಚ್ಚಳ ಮಾಡಿದೆ. ಇದರಿಂದ ಪ್ರತಿ ತಿಂಗಳು ಸಾವಿರಾರು ರುಪಾಯಿ ಹೊರೆ ಆಗಲಿದೆ. ಇಂತಹ ಸಂದರ್ಭದಲ್ಲೇ ಮತ್ತೆ ರಾಜ್ಯ ಸರ್ಕಾರ ಡೀಸೆಲ್ ದರ ಹೆಚ್ಚಳ ಮಾಡಿದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.
ಈ ವೇಳೆ ರಾಜ್ಯ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ಜಿ.ಆರ್.ಷಣ್ಮುಗಪ್ಪ ಮಾತನಾಡಿ, ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡನೇ ಬಾರಿ ಡೀಸೆಲ್ ದರ ಹೆಚ್ಚಳ ಮಾಡಿದೆ. ಕಳೆದ ವರ್ಷ ಜೂನ್- 15 ಕ್ಕೆ ಮೂರು ರುಪಾಯಿ, ಈ ವರ್ಷ ಏಪ್ರಿಲ್- 1 ರಂದು ಎರಡು ರುಪಾಯಿ ಹೆಚ್ಚಳ ಮಾಡಿದ್ದಾರೆ. ಇದರಿಂದ ಲಾರಿ ಮಾಲೀಕರು ವಿಷ ಕುಡಿಯುವ ಪರಿಸ್ಥಿತಿ ಬಂದಿದೆ. ರಾಜ್ಯದಲ್ಲಿ 6 ಲಕ್ಷ ಲಾರಿಗಳಿವೆ. ಎಲ್ಲ ಲಾರಿಗಳನ್ನು ಟೋಲ್ ಮತ್ತು ಹೈವೇಗಳಲ್ಲಿ ಬಿಟ್ಟು ಮುಷ್ಕರ ಮಾಡುತ್ತೇವೆ. ನಮ್ಮ ಮುಷ್ಕರದಲ್ಲಿ ಪೆಟ್ರೋಲ್, ಡೀಸೆಲ್ ಬಂಕ್ಗಳು ಬಂಧ್ ಆಗಲಿದೆ. ಡೀಸೆಲ್ ಬೆಲೆ ಇಳಿಕೆ ಮಾಡಲು ಈಗಾಗಲೇ ಗಡುವು ನೀಡಿದ್ವಿ. ಆದರೆ ಸರ್ಕಾರ ಡಿಸೇಲ್ ದರ ಕಡಿಮೆ ಮಾಡಲು ಮುಂದಾಗಿಲ್ಲ. ಹೀಗಾಗಿ ಏಪ್ರಿಲ್ 14 ರಂದು ರಾಜ್ಯಾದ್ಯಂತ ಮುಷ್ಕರ ಮಾಡುತ್ತೇವೆ ಎಂದು ಹೇಳಿದರು.